ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಜನರಿಗೆ ಸೇವೆ ಸಲ್ಲಿಸುವ ಅವಕಾಶ ಪ್ರತಿಯೊಬ್ಬರಿಗೂ ದೊರೆಯುವುದಿಲ್ಲ. ಸರ್ಕಾರಿ ಅಧಿಕಾರಿಗಳು ತಮಗೆ ದೊರೆತಿರುವ ಅವಕಾಶವನ್ನು ಬಳಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಮಾಜದ ಅಭಿವೃದ್ಧಿಯಲ್ಲಿ ಪಾತ್ರ ವಹಿಸಬೇಕು ಎಂದು ಕಾಪು ಶಾಸಕ ಸುರೇಶ್ ಶೆಟ್ಟಿ ಹೇಳಿದರು.ಅವರು ಗುರುವಾರ ಕಾಪು ತಾಲೂಕು ಆಡಳಿತ ಸೌಧದಲ್ಲಿ ಉಡುಪಿ ಜಿಲ್ಲಾಡಳಿತ, ಕಾಪು ತಾಲೂಕು ಆಡಳಿತ, ಪುರಸಭೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾಪು ತಾಲೂಕು ಜನಸ್ಪಂದನ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಜನಸ್ಪಂದನ ಕಾರ್ಯಕ್ರಮದ ಮೂಲಕ ಅಧಿಕಾರಿಗಳು ನಾಗರಿಕರ ಧ್ವನಿಗೆ ಧ್ವನಿಯಾಗಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕಷ್ಟಗಳನ್ನು ತಿಳಿಯುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಜನಸಾಮಾನ್ಯರ ಸಮಸ್ಯೆಗಳಾದ ಪಹಣಿ ಬದಲಾವಣೆ, ಜಾತಿ ಪ್ರಮಾಣ ಪತ್ರ, ವಾಸ ದೃಢೀಕರಣ ಪತ್ರ ಹಾಗೂ ಇನ್ನಿತರ ಕಾರಣಗಳಿಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡದೇ ಸುಲಭವಾಗಿ ನೀಡುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದರು.
ಕಳೆದ ಬಾರಿ ಸುಮಾರು 47 ಅರ್ಜಿಗಳು ಬಂದಿದ್ದು, ಪ್ರತಿಯೊಂದು ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಇಲ್ಲಿ ಸ್ವೀಕೃತಗೊಂಡ ಅರ್ಜಿಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಬಗೆಹರಿಯುವಂತಹ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಶೀಘ್ರದಲ್ಲೇ ಬಗೆಹರಿಸಲಾಗುವುದು. ಸರ್ಕಾರದ ಮಟ್ಟದಲ್ಲಿ ಬಗೆಹರಿಯುವ ಸಮಸ್ಯೆಗಳ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪಡಿತರ ಚೀಟಿ, ಮೀನುಗಾರಿಕೆ ಇಲಾಖೆಯಿಂದ ಕಿಟ್ ಮತ್ತು ಲೈಫ್ ಜಾಕೆಟ್ ಹಾಗೂ ಪಶುಸಂಗೋಪನೆ ಇಲಾಖೆ ವತಿಯಿಂದ ಉಚಿತ ನೆಲಹಾಸು ವಿತರಣೆಯ ಆಯ್ಕೆ ಪತ್ರವನ್ನು ಪಲಾನುಭವಿಗಳಿಗೆ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಡಿಎಫ್ಓ ಗಣಪತಿ, ಎಎಸ್ಪಿ ಸಿದ್ದಲಿಂಗಪ್ಪ, ಸಹಾಯಕ ಕಮೀಷನರ್ ರಶ್ಮಿ, ತಹಸೀಲ್ದಾರ್ ಪ್ರತಿಭಾ ಆರ್., ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ 60 ಅರ್ಜಿಗಳು ಸಲ್ಲಿಕೆಯಾಗಿದ್ದು, ರಸ್ತೆ, ಮನೆ ಮಂಜೂರು, ಚರಂಡಿ ವ್ಯವಸ್ಥೆ, ಫ್ಲಾಟಿಂಗ್ ಸಮಸ್ಯೆ, ಹಕ್ಕುಪತ್ರ, ಜಮೀನು ಅಳತೆ ಸೇರಿದಂತೆ ಹಲವು ಅಹವಾಲುಗಳು ಸಲ್ಲಿಕೆಯಾಗಿದ್ದವು.