ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿಮಾನವ ಕಳ್ಳಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಕೆಯಾಗಿದ್ದು, ಅತೀವೇಗದಲ್ಲಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಕಠಿಣವಾಗಿ ಕಾನೂನು ಕ್ರಮಗಳನ್ನು ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಸೂಚಿಸಿದರು.
ಅವರು ಸೋಮವಾರ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ನಡೆದ ಜಿಲ್ಲಾಮಟ್ಟದಲ್ಲಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇಶದಲ್ಲಿ ಇಂತಹ ಅಪರಾಧಗಳನ್ನು ತಡೆಗಟ್ಟಲು ಅತ್ಯುತ್ತಮ ಕಾನೂನು ವ್ಯವಸ್ಥೆಗಳು ಇದ್ದರೂ ಕಾನೂನುಗಳನ್ನು ದುರುಪಯೋಗ ಪಡೆಸಿಕೊಳ್ಳಲಾಗುತ್ತಿದೆ. ಸಮಾಜದಲ್ಲಿ ಯಾವುದೇ ಜಾತಿ, ವಯಸ್ಸು ಧರ್ಮ ಹಾಗೂ ಲಿಂಗ ಭೇದಗಳಿಲ್ಲದೆ ಪ್ರತಿಯೊಬ್ಬರು ಇಂತಹ ದೌರ್ಜನ್ಯಕ್ಕೆ ಒಳಗಾಗುವುದನ್ನು ನಾವು ಕಾಣುತಿದ್ದೇವೆ. ನಾಗರಿಕರು ಕಾನೂನುಗಳ ಕುರಿತು ಜ್ಞಾನ ಹೊಂದಿದಾಗ ಅಪರಾಧವನ್ನು ತಡೆಗಟ್ಟಬಹುದಾಗಿದೆ ಎಂದರು.ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ವಹಿಸಿದ್ದರು. ವಕೀಲ ಹಾಗೂ ಕಾನೂನು ನೆರವು ಉಪಅಧಿರಕ್ಷಕ ಶ್ರೀನಿವಾಸ ಉಪಾಧ್ಯ ಬಿ. ಮತ್ತು ನೇಟಿವ್ ಸಂಸ್ಥೆಯ ಮುಖ್ಯಸ್ಥ ಪ್ರೇಮಾನಂದ ಕಲ್ಮಾಡಿ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ ಸ್ವಾಗತಿಸಿದರು. ದೀಪಾ ನಿರೂಪಿಸಿ ವಂದಿಸಿದರು.