ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಅವುಗಳ ಪರಿಹಾರದ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆಸಚಿವ ಈಶ್ವರ ಖಂಡ್ರೆಖಡಕ್‌ ಸೂಚನೆಗಳನ್ನು ನೀಡಿದರು.

ಕನ್ನಡಪ್ರಭ ವಾರ್ತೆ ಬೀದರ್‌

ಉದ್ಯೋಗ ಅರಸಿ ಗುಳೆ ಹೋಗದಂತೆ ಜಿಲ್ಲೆಯಲ್ಲಿನ ಉದ್ಯೋಗ ಖಾತ್ರಿಯ ಕೂಲಿಯ ವೇತನಕ್ಕಾಗಿ 48 ಕೋಟಿ ರು.ಗಳನ್ನು ತಕ್ಷಣವೇ ಬಿಡುಗಡೆ ಮಾಡಿದ್ದೇವೆ, ದುಡಿಯುವ ಕೈಗಳಿಗ ಕೆಲಸ ಕೊಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಗುಳೆ ಹೋಗಿದ್ದು ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಗ್ಯಾರಂಟಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಖಾತ್ರಿ ಯೋಜನೆ, ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಅವುಗಳ ಪರಿಹಾರದ ಕುರಿತು ಅಧಿಕಾರಿ ಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಖಡಕ್‌ ಸೂಚನೆಗಳನ್ನು ನೀಡಿದರು.

ಜಿಲ್ಲೆಯಲ್ಲಿನ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ಖಾತ್ರಿ ಯೋಜನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದಲ್ಲದೆ ನಮ್ಮ ಹೊಲ ನಮ್ಮ ದಾರಿ ಯೋಜನೆಯನ್ನೂ ಸಂಪೂರ್ಣವಾಗಿ ಜಾರಿಗೊಳಿಸಲು ಎಲ್ಲ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹೆಚ್ಚಿನ ಅನುದಾನ ಕಲ್ಪಿಸಲು ಮತ್ತು ಗ್ರಾಮೀಣ ರಸ್ತೆಗಳ ಸಂಪರ್ಕ ಉತ್ತಮ ಗೊಳಿಸಬೇಕಿದೆ ಎಂದರು.

ಪಂಚಾಯತ್‌ ಮಟ್ಟದಲ್ಲಿ ಮಹಾತ್ಮಾ ಗಾಂಧಿ ಪಂಚಾಯತ್‌ ಎಂದು ನಾಮಕರಣ ಮಾಡುವುದು ಅಲ್ಲದೆ ಗ್ರಾಪಂಗೆ ಕಟ್ಟಡ ಇಲ್ಲದಿರುವ ಕಡೆಗಳಲ್ಲಿ ಕಟ್ಟಡ ನಿರ್ಮಿಸಲೂ ಅನುದಾನ ಕಲ್ಪಿಸುವ ಕುರಿತು ಯೋಜನೆಗಳನ್ನು ಹಾಕಿಕೊಳ್ಳಲಾಗುತ್ತಿದೆ ಎಂದು ಸಚಿವ ಖಂಡ್ರೆ ತಿಳಿಸಿದರು.

ಜಿಲ್ಲೆಯಲ್ಲಿ ಘೋಷಿಸಲಾಗಿರುವ 644 ಗ್ರಾಮಗಳಲ್ಲಿನ ‘ಹರ್‌ ಘರ್‌ ಜಲ್‌’ ಯೋಜನೆಯಡಿ ಪ್ರತಿಯೊಂದು ಮನೆಗೂ ನಿರಂತರವಾಗಿ ಕುಡಿಯುವ ನೀರು ಪೂರೈಕೆ ಯಾಗುತ್ತಿರುವುದನ್ನು ಸ್ಥಳಕ್ಕೆ ತೆರಳಿ ಖಚಿತಪಡಿಸಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಜಲಜೀವನ್‌ ಮಿಷನ್‌ (JJM) ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ, ಪೂರ್ಣಗೊಂಡ ಕಾಮಗಾರಿಗಳ ಸ್ಥಿತಿ ಹಾಗೂ ‘ಹರ್‌ ಘರ್‌ ಜಲ್‌’ ಎಂದು ಘೋಷಿಸಲಾದ ಗ್ರಾಮಗಳಲ್ಲಿ ಪ್ರತಿಯೊಂದು ಮನೆಗೂ ನಿಜವಾಗಿಯೂ ಕುಡಿಯುವ ನೀರು ತಲುಪುತ್ತಿದೆಯೇ ಎಂಬ ಬಗ್ಗೆ ಸಚಿವರು ಸವಿಸ್ತಾರವಾಗಿ ಪರಿಶೀಲನೆ ನಡೆಸಿದರು.

ಈಗಾಗಲೇ ‘ಹರ್‌ ಘರ್‌ ಜಲ್‌’ ಎಂದು ಘೋಷಿಸಲಾದ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದರೆ ಅವುಗಳನ್ನು 15 ದಿನಗಳೊಳಗೆ ಪರಿಹರಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಗಡುವು ನಿಗದಿಪಡಿಸಿದರು.

ಪ್ರತಿ ಮನೆಗೂ ಭೇಟಿ ನೀಡಿ, ನೀರು

ಪೂರೈಕೆಯನ್ನು ಖಚಿತಪಡಿಸಿಕೊಳ್ಳಿ:

ಬೀದರ್‌ ಜಿಲ್ಲೆಯ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಿಸಿದ ತಹಸೀಲ್ದಾರರು ಜಂಟಿಯಾಗಿ ಪ್ರತಿ ಘೋಷಿತ ಗ್ರಾಮಕ್ಕೆ ಭೇಟಿ ನೀಡಿ, ಪ್ರತಿಯೊಂದು ಮನೆಗೂ ಕುಡಿಯುವ ನೀರು ತಲುಪುತ್ತಿದೆಯೇ ಎಂಬುವು ದನ್ನು ಸ್ಥಳದಲ್ಲೇ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ನಿರ್ದೇಶನ ನೀಡಿದರು.