ಸಾರಾಂಶ
ಸಿದ್ದರಾಮಯ್ಯ ಅವರು ಮತ್ತು ಶ್ರೀನಿವಾಸಪ್ರಸಾದರವರಿಗೆ ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಒಳ್ಳೆಯ ಸ್ನೇಹಿತರಾಗಿದ್ದರು. ಸಿದ್ದರಾಮಯ್ಯ ಅವರಿಗೆ ಶ್ರೀನಿವಾಸಪ್ರಸಾದ್ ಅವರ ಬಗ್ಗೆ ಅಪಾರ ಗೌರವವಿದೆ. ಶ್ರೀನಿವಾಸಪ್ರಸಾದ್ ಅವರು 50 ವರ್ಷದ ರಾಜಕಾರಣದಲ್ಲಿ ಅಜಾತಶತ್ರುವಾಗಿದ್ದರು
ಕನ್ನಡಪ್ರಭ ವಾರ್ತೆ ಮೈಸೂರು
ಸಂಸದ ವಿ. ಶ್ರೀನಿವಾಸಪ್ರಸಾದ್ ಅವರು ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವಸಿದ್ಧಾಂತಗಳನ್ನು ಅಳವಡಿಸಿಕೊಂಡು ಸ್ವಾಭಿಮಾನಿ ರಾಜಕಾರಣಿಯಾಗಿದ್ದರು ಎಂದು ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಮೈಸೂರು ತಾಲೂಕು ನಾಡನಹಳ್ಳಿ ಬಳಿ ಇರುವ ಶ್ರೀ ಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ವರುಣ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ದಿವಂಗತ ವಿ. ಶ್ರೀನಿವಾಸಪ್ರಸಾದ್ ನುಡಿನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೀನಿವಾಸಪ್ರಸಾದ್ ಅವರು ದಲಿತ, ಹಿಂದುಳಿದ ವರ್ಗದ ದೊಡ್ಡಶಕ್ತಿಯಾಗಿದ್ದರು. ದಲಿತರು ಹಿಂದುಳಿದವರು ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಾ ಸ್ವಾಭಿಮಾನದಿಂದ ಬದುಕಬೇಕು ಎಂದು ಹೇಳುತ್ತಿದ್ದರು ಎಂದರು.
ಸಿದ್ದರಾಮಯ್ಯ ಅವರು ಮತ್ತು ಶ್ರೀನಿವಾಸಪ್ರಸಾದರವರಿಗೆ ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಒಳ್ಳೆಯ ಸ್ನೇಹಿತರಾಗಿದ್ದರು. ಸಿದ್ದರಾಮಯ್ಯ ಅವರಿಗೆ ಶ್ರೀನಿವಾಸಪ್ರಸಾದ್ ಅವರ ಬಗ್ಗೆ ಅಪಾರ ಗೌರವವಿದೆ. ಶ್ರೀನಿವಾಸಪ್ರಸಾದ್ ಅವರು 50 ವರ್ಷದ ರಾಜಕಾರಣದಲ್ಲಿ ಅಜಾತಶತ್ರುವಾಗಿದ್ದರು. ಅವರ ಬಗ್ಗೆ ಪಕ್ಷಾತೀತವಾಗಿ ಎಲ್ಲಾ ರಾಜಕಾರಣಿಗಳು ಅಪಾರ ಗೌರವ ಇಟ್ಟುಕೊಂಡಿದ್ದರು. ಜನರ ಮಧ್ಯೆ ಇದ್ದು, ಜನರ ಪ್ರೀತಿಗೆ ಪಾತ್ರರಾಗಿ ಅಪಾರ ಜನಮನ್ನಣೆ ಗಳಿಸಿದ ಅಪರೂಪದ ರಾಜಕಾರಣಿಯಾಗಿದ್ದರು. ಅವರ ಜೀವನ ಆದರ್ಶ ಎಲ್ಲಾ ಪಕ್ಷದ ಯುವ ರಾಜಕಾರಣಿಗಳಿಗೆ ಸ್ಪೂರ್ತಿಯಾಗಬೇಕು. ಅವರ ನೆನಪು ಶಾಶ್ವತವಾಗಿ ಉಳಿಯುವಂತಹ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಅವರು ಹೇಳಿದರು.ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ಬಂತೇಜಿ ಸ್ವಾಮೀಜಿ, ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಮಲ್ಕುಂಡಿ ಮಹದೇವಸ್ವಾಮಿ, ಮುಖಂಡರಾದ ಮಣಿಯಯ್ಯ, ರಂಗಸ್ವಾಮಿ, ರಮೇಶ ಮುದ್ದೇಗೌಡ, ಹೆಳವರಹುಂಡಿ ಸೋಮು, ಎಂ.ಟಿ. ರವಿಕುಮಾರ್, ಮಂಜುಳಾ ಮಂಜುನಾಥ್, ಮಹದೇವ್, ಜವರಪ್ಪ, ಸಕ್ಕಳ್ಳಿ ಬಸವರಾಜು, ಕನಕಮೂರ್ತಿ, ಹುಣಸೂರು ಬಸವಣ್ಣ ಮೊದಲಾದವರು ಇದ್ದರು.