ಇಲ್ಲಿನ ಹೆಸರಾಂತ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಪ್ರಥಮ ಪುಣ್ಯತಿಥಿಯ ಅಂಗವಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಆ.29ರಿಂದ ಸೆ.2ರವರೆಗೆ ಐದು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ಕ್ರೀಡಾಕೂಟ, ಜಾಥಾ, ಮ್ಯಾರಥಾನ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕನ್ನಡಪ್ರಭ ವಾರ್ತೆ ಕಲಬುರಗಿಇಲ್ಲಿನ ಹೆಸರಾಂತ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಪ್ರಥಮ ಪುಣ್ಯತಿಥಿಯ ಅಂಗವಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಆ.29ರಿಂದ ಸೆ.2ರವರೆಗೆ ಐದು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ಕ್ರೀಡಾಕೂಟ, ಜಾಥಾ, ಮ್ಯಾರಥಾನ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಹಿಂದೂ ಧಾರ್ಮಿಕ ಪಂಚಾಂಗದ ಪ್ರಕಾರ ಡಾ. ಶರಣಬಸವಪ್ಪ ಅಪ್ಪಾಜಿಯವರ ಪ್ರಥಮ ಪುಣ್ಯತಿಥಿಯನ್ನು ಸೆ.2ರಂದು ಆಚರಿಸಲಾಗುತ್ತಿದೆ. ಕಲಬುರಗಿ ನಗರದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿರುವ ದಾಸೋಹ ಮಹಾಮನೆಯಲ್ಲಿ ಗುರುವಾರ ಸಂಜೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಅವರು, ಆ.29ರಂದು ಶರಣಬಸವೇಶ್ವರ ದೇವಸ್ಥಾನ ಸಂಕೀರ್ಣದ ಅನುಭವ ಮಂಟಪದಲ್ಲಿ ನಡೆಯುವ ಬೃಹತ್ ಕವಿಗೋಷ್ಠಿ ಹಾಗೂ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ಐದು ದಿನಗಳ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ ಎಂದು ಹೇಳಿದ್ದಾರೆ.ಸಂಘದ ಅಧೀನದಲ್ಲಿ ನಡೆಯುತ್ತಿರುವ ವಿವಿಧ ಶಾಲಾ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಿಂದ ಆಯ್ಕೆಯಾಗಿರುವ 40ಕ್ಕೂ ಹೆಚ್ಚು ಅತ್ಯುತ್ತಮ ಶಿಕ್ಷಕರಿಗೆ ಆ.29ರಂದು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 5,000 ರು.ನಗದು ಬಹುಮಾನ, ಪ್ರಶಂಸನಾ ಪತ್ರ ಹಾಗೂ ಶಾಲು ಒಳಗೊಂಡಿರುತ್ತದೆ. ಆ.30ರಂದು ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪಾಜಿ, ಡಾ. ದಾಕ್ಷಾಯಿಣಿ ಅವ್ವಾಜಿ ಹಾಗೂ ಕುಟುಂಬದ ಸದಸ್ಯರು ಮತ್ತು ಸಂಸ್ಥಾನದ ಅಪಾರ ಭಕ್ತರ ಸಮ್ಮುಖದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆಯನ್ನು ನೆರವೇರಿಸಲಾಗುವುದು. ಈ ಇಷ್ಟಲಿಂಗ ಪೂಜೆಯಲ್ಲಿ 1,000 ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.ಆ.31ರಂದು ಭಕ್ತರು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸುವ “ನಡುವಿನ ಸೋಮವಾರ” ಇರುವುದರಿಂದ ಯಾವುದೇ ಇತರ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದಿಲ್ಲ. ಸಂಘದ ವತಿಯಿಂದ ನಡೆಸಲಾಗುತ್ತಿರುವ ಆಯುರ್ವೇದ ಆಸ್ಪತ್ರೆಯ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಯ ಸಹಯೋಗದಲ್ಲಿ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗುವುದು. ನವಜೀವನ ರಕ್ತನಿಧಿಯ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಗುಲಬರ್ಗಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ ವೈದ್ಯರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ನಡೆಸಲಾಗುವುದು. ಕಣ್ಣಿನ ತಪಾಸಣೆಗೆ ಒಳಗಾಗುವ ಅಗತ್ಯವಿರುವ ಬಡ ಹಾಗೂ ಅರ್ಹ ರೋಗಿಗಳಿಗೆ ಉಚಿತ ಕನ್ನಡಕಗಳನ್ನು ಸಹ ವಿತರಿಸಲಾಗುವುದು ಎಂದು ಡಾ. ದಾಕ್ಷಾಯಿಣಿ ಅವ್ವಾಜಿ ತಿಳಿಸಿದ್ದಾರೆ.ಸೆ. 1 ರಂದು ವಿವಿಧ ಶಾಲಾ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳ ಸಾವಿರಾರು ವಿದ್ಯಾರ್ಥಿಗಳು ಬೃಹತ್ ಜಾಥ ಆಯೋಜಿಸಲಿದ್ದಾರೆ. ಲಿಂಗೈಕ್ಯ ಪೂಜ್ಯ ಡಾ. ಅಪ್ಪಾಜಿಯವರ ಜೀವಮಾನ ಗಾತ್ರದ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಿದ ವಾಹನದಲ್ಲಿ ಶರಣಬಸವ ವಿವಿ ಆವರಣದಿಂದ ಶರಣಬಸವೇಶ್ವರ ದೇವಸ್ಥಾನದವರೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುವುದು. ಸೆ.2 ರಂದು ಶರಣಬಸವೇಶ್ವರ ಕಲಾ ಕಾಲೇಜಿನ ವತಿಯಿಂದ ಬುದ್ಧ ವಿಹಾರದಿಂದ ಬೃಹತ್ ಮ್ಯಾರಥಾನ್ ಓಟ ಆಯೋಜಿಸಲಾಗುವುದು. ಸುಮಾರು 2,000 ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಭಾಗವಹಿಸಲಿರುವ ಈ ಮ್ಯಾರಥಾನ್ ಕಲಬುರಗಿ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿಬಂದು ಶರಣಬಸವೇಶ್ವರ ದೇವಸ್ಥಾನದಲ್ಲಿ ಸಮಾರೋಪಗೊಳ್ಳಲಿದೆ.