ಸಾರಾಂಶ
ಮರಿಯಮ್ಮನಹಳ್ಳಿ: ಮತದಾರರು ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲಿದ್ದಾರೆ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಹೇಳಿದರು.
ಅವರು ಸಮೀಪದ ಗರಗ ನಾಗಲಾಪುರ ಒಪ್ಪತ್ತೇಶ್ವರ ಸ್ವಾಮಿ ವಿರಕ್ತಮಠದ ನಿರಂಜನಪ್ರಭು ದೇಶಿಕರ ನಿರಂಜನ ಚರಪಟ್ಟಾಧಿಕಾರ ಮಹೋತ್ಸವದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿದೆ ಎಂದು ಹೇಳಿದರು.ರಾಜ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಬಿಜೆಪಿ-ಜೆಡಿಎಸ್ ಎರಡು ಪಕ್ಷಗಳ ಕಾರ್ಯಕರ್ತರು ಶ್ರಮಿಲಿದ್ದಾರೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಕೆಲವು ಸಾಧಿಸಲಿದ್ದಾರೆ ಎಂದರು.ಹಗರಿಬೊಮ್ಮನಹಳ್ಳಿ ಕ್ಷೇತ್ರದ ಜೆಡಿಎಸ್ ಶಾಸಕ ಕೆ. ನೇಮಿರಾಜ್ ನಾಯ್ಕ್ ಮತ್ತು ನನ್ನ ಸ್ನೇಹ ಅನೇಕ ವರ್ಷಗಳದ್ದು. ನಾವಿಬ್ಬರೂ ಅಣ್ಣ-ತಮ್ಮರಂತೆ ಇದ್ದೇವೆ. ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಬಿಜೆಪಿ ಅಭ್ಯರ್ಥಿಯಾಗಿದ್ದೇನೆ. ನನ್ನ ಗೆಲುವಿಗೆ ಶಾಸಕ ಕೆ. ನೇಮಿರಾಜ್ ನಾಯ್ಕ್ ಸದಾ ನನ್ನೊಂದಿಗೆ ಇದ್ದು, ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಲೀಡ್ ಕೊಡಲಿದ್ದಾರೆ ಎಂದು ಅವರು ಹೇಳಿದರು.ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯಲ್ಲಿ ಹೆಚ್ಚಾಗಿ ಹೊಸಬರಿಗೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಗೆಲ್ಲುವಂತಹವರನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ. ಕೆಲವು ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ. ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ. ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಆಪ್ತ ಸ್ನೇಹಿತರು. ಸಣ್ಣಪುಟ್ಟ ವಿಚಾರಗಳಲ್ಲಿ ಮನಸ್ತಾಪ ಬಂದರೂ ಅದನ್ನು ಬಗೆಹರಿಸುವ ಶಕ್ತಿ ಇಬ್ಬರಿಗೂ ಇದೆ. ಈಶ್ವರಪ್ಪ ಅವರನ್ನು ಯಡಿಯೂರಪ್ಪ ಸಮಾಧಾನಪಡಿಸುತ್ತಾರೆ. ಬಿಜೆಪಿಯಲ್ಲಿ ಯಾವುದೇ ಕ್ಷೇತ್ರದಲ್ಲಿ ಅಸಮಾಧಾನವಿಲ್ಲ ಎಂದು ಅವರು ಹೇಳಿದರು.
ಶಾಸಕ ಕೆ. ನೇಮಿರಾಜ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ, ಜಿಲ್ಲಾ ಉಪಾಧ್ಯಕ್ಷ ಎಸ್. ಕೃಷ್ಣನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಲಹುಣ್ಸಿರಾಮಣ್ಣ, ಕಾರ್ಯದರ್ಶಿ ಎಸ್.ಎಂ. ವೀರೇಶ್ವರಸ್ವಾಮಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್, ಸ್ಥಳೀಯ ಮುಖಂಡರಾದ ಗರಗ ಪ್ರಕಾಶ್ ಪೂಜಾರ್, ಗುಂಡಾಸ್ವಾಮಿ, ಸಿ.ಎ. ಗಾಳಪ್ಪ, ಓಬಪ್ಪ, ಎಲೆಗಾರ ಮಂಜುನಾಥ, ವೈ. ನಂದೀಶ್, ಬಿ.ಡಿ. ಗಂಗಾಧರ ಇದ್ದರು.