ಸಾರಾಂಶ
ಬೆಂಗಳೂರು : ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ಅಧ್ಯಕ್ಷ ಸ್ಥಾನದ ರೇಸ್ನಲ್ಲಿರುವ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು, ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಳೆದ ತಿಂಗಳು ನಡೆದಿದ್ದ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಅವರು, ಗುರುವಾರ ಬೆಳಗ್ಗೆ ನಗರದಲ್ಲಿರುವ ಬಮೂಲ್ ಕಚೇರಿಗೆ ಬೆಂಬಲಿಗರೊಂದಿಗೆ ತೆರಳಿ ಅಧ್ಯಕ್ಷ ಸ್ಥಾನಕ್ಕಾಗಿ ನಾಮಪತ್ರ ಸಲ್ಲಿಸಿದರು. ಬಳಿಕ 14 ಜನ ನಿರ್ದೇಶಕರು ಹಾಗೂ ನಾಮ ನಿರ್ದೇಶಿತ ಸದಸ್ಯರು ಅವಿರೋಧವಾಗಿ ಸುರೇಶ್ ಅವರನ್ನು ಆಯ್ಕೆ ಮಾಡಿದರು. ಉಪಾಧ್ಯಕ್ಷರಾಗಿ ಮತ್ತೊಬ್ಬ ನಿರ್ದೇಶಕ ರಾಜಣ್ಣ ಅವರನ್ನು ಆಯ್ಕೆ ಮಾಡಲಾಯಿತು.
ಬಳಿಕ ಮಾತನಾಡಿದ ಡಿ.ಕೆ. ಸುರೇಶ್, ಆಯ್ಕೆಯಾದ ಎಲ್ಲಾ ನಿರ್ದೇಶಕರು ಸೇರಿ ಸರ್ವ ಸಮ್ಮತವಾಗಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಹಾಲು ಉತ್ಪಾದಕರು ನಮ್ಮಿಂದ ಹೊಸ ಬದಲಾವಣೆಯ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಎಲ್ಲರ ಸಹಕಾರದೊಂದಿಗೆ ರೈತರಿಗೆ ನ್ಯಾಯ ಒದಗಿಸುವ, ಕನಸುಗಳನ್ನು ನನಸು ಮಾಡುವ ಪ್ರಯತ್ನ ಮಾಡುತ್ತೇನೆ. ನಂದಿನಿ ಮಾರುಕಟ್ಟೆ ವಿಸ್ತರಿಸುತ್ತೇವೆ. ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್ಗಳನ್ನು ಇಡೀ ರಾಜ್ಯಕ್ಕೆ ಪರಿಚಯಿಸುವ ಚಿಂತನೆಯಲ್ಲಿದ್ದೇವೆ ಎಂದರು.