ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಕಾಶ್ಮೀರದ ಪೆಹಲ್ಗಾಮ್ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಹತ್ಯೆ ಮಾಡಿ, ಭಾರತದ ಭದ್ರತೆಗೆ ಸವಾಲು ಹಾಕಿದ ಕೃತ್ಯಕ್ಕೆ ಪ್ರತೀಕಾರವಾಗಿ ನಡೆದ ಕಾರ್ಯಾಚರಣೆಯ ಯಶಸ್ಸಿನ ಆಪರೇಷನ್ ಸಿಂದೂರ್ ವಿಜಯೋತ್ಸವ ವನ್ನು ಈ ತಿಂಗಳ 30 ರಂದು ನಗರದಲ್ಲಿ ಆಚರಿಸಲಾಗುತ್ತದೆ ಎಂದು ಆಚರಣೆ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದರು.ಕಾರ್ಯಕ್ರಮ ಹಮ್ಮಿಕೊಂಡಿರುವ ನಗರದ ಸರ್ಕಾರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುರಾಷ್ಟ್ರದ ಗೌರವ, ಶೌರ್ಯ ಮತ್ತು ಅಚಲ ಬದ್ಧತೆಯ ಸಂಕೇತವಾಗಿದೆ. ವಿದ್ಯಾರ್ಥಿ, ಯುವಜನರಿಗೆ ದೇಶದ ರಕ್ಷಣಾ ಸಂಸ್ಥೆಯ ಕಾರ್ಯತಂತ್ರ ತಿಳಿಸಿ ಅವರಲ್ಲಿ ದೇಶದ ಭದ್ರತೆ, ದೇಶ ಪ್ರಮದ ಬಗ್ಗೆ ಜಾಗೃತಗೊಳಿಸುವ ಉದ್ದೇಶವಾಗಿದೆ. ಜಿಲ್ಲೆಯ ವಿವಿಧ ಕಾಲೇಜುಗಳು ವಿದ್ಯಾರ್ಥಿಗಳು, ಸಾರ್ವಜನಿಕರೂ ಸೇರಿದಂತೆ ಹತ್ತು ಸಾವಿರಕ್ಕೂ ಹೆಚ್ಚು ಜನಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ತುಮಕೂರು ಗ್ರಾಮಾಂತರ ಕ್ಷೇತ್ರ ಶಾಸಕ ಬಿ.ಸುರೇಶ್ಗೌಡ ಮಾತನಾಡಿ, ಆಪರೇಷನ್ ಸಿಂದೂರ್ ಕಾರ್ಯಾಚರಣೆಯು ಒಂದು ಸೇನಾ ಕಾರ್ಯಚರಣೆ ಮಾತ್ರವಲ್ಲದೆ, ನಮ್ಮ ದೇಶ ಎಷ್ಟು ಬಲಿಷ್ಠವಾಗಿದೆ ಮತ್ತು ಕೆಲವೇ ಗಂಟೆಗಳಲ್ಲಿ ವೈರಿ ರಾಷ್ಟ್ರದ ಮಗ್ಗುಲು ಮುರಿದು ಶರಣಾಗತಿ ಆಗುವಂತೆ ಮಾಡಬಲ್ಲ ಸಾಮರ್ಥ್ಯ ನಮ್ಮ ದೇಶಕ್ಕಿದೆ ಎಂಬುದನ್ನು ತೋರಿಸಿಕೊಟ್ಟ ಕಾರ್ಯಾಚರಣೆಯಾಗಿದೆ ಎಂದರು.ದೇಶದ ಗಡಿ ಕಾಯುವ ಸೈನಿಕರಿಗೆ ಗೌರವ ಸಲ್ಲಿಸಲು ಹಾಗೂ ದೇಶವನ್ನು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಲು ಶ್ರಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.30 ರಂದು ಬೆಳಿಗ್ಗೆ 10.30ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಸಂಸ್ಥಾನದಡಾ.ನಿರ್ಮಲಾನಂದನಾಥ ಸ್ವಾಮೀಜಿ, ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆ ದಿವ್ಯ ಸಾನಿಧ್ಯ ವಹಿಸುವರು. ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಸಂಸದರಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಮಂಜುನಾಥ್, ಶಾಸಕರಾದ ಕೆ.ಎನ್.ರಾಜಣ್ಣ, ಸುರೇಶ್ಗೌಡ, ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಅಲ್ಲದೆ ಜಿಲ್ಲೆಯ ಶಾಸಕರು, ಅಧಿಕಾರಿಗಳು ಅತಿಥಿಗಳಾಗಿ ಭಾಗವಹಿಸುವರು. ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್, ಅಜಿತ್ ಹನುಮಕ್ಕನವರ್, ರಂಗನಾಥ ಭಾರಧ್ವಾಜ್ ಭಾಷಣಕಾರರಾಗಿ ಆಗಮಿಸುವರು ಎಂದರು.