ಬೇರೆ ಕಡೆ ಹಾಗೂ ಸರ್ಕಾರಿ ಜಾಗದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಲು ಅಭ್ಯಂತರ ಇಲ್ಲ. ಆದರೆ ಉಮಾ ವಿದ್ಯಾಲಯವು ಶತಮಾನಗಳ ಇತಿಹಾಸ ಹೊಂದಿರುವ ಶಾಲೆ. ಜಗತ್ತಿನ ನೂರಾರು ದೇಶಗಳಲ್ಲಿ ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಜೀವನ ಸಾಗಿಸುತ್ತಿದ್ದಾರೆ.

ಲಕ್ಷ್ಮೇಶ್ವರ: ಪಟ್ಟಣದ ಉಮಾ ವಿದ್ಯಾಲಯದ ಆವರಣದಲ್ಲಿ ಪುರಸಭೆ ವತಿಯಿಂದ ನಿರ್ಮಿಸುತ್ತಿರುವ ಕುಡಿಯುವ ನೀರಿನ ಒವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಬಾರದು. ಇದು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಮಾರಕವಾಗಿದೆ ಎಂದು ಪುರಸಭೆಯ ಮಾಜಿ ಅಧ್ಯಕ್ಷ ಎಂ.ಆರ್. ಪಾಟೀಲ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಟ್ಟಣದ ಪುರಸಭೆಯ ಆಡಳಿತ ಮಂಡಳಿಯ ವತಿಯಿಂದ ನಡೆಯುತ್ತಿರುವ ಉಮಾ ಮಹಾವಿದ್ಯಾಲಯದಲ್ಲಿ ಕುಡಿಯುವ ನೀರಿನ ಒವರ್ ಹೆಡ್ ಟ್ಯಾಂಕ್ ನಿರ್ಮಿಸುತ್ತಿರುವುದು ಸರಿಯಾದ ಕ್ರಮವಲ್ಲ. ಇದರಿಂದ ಮಕ್ಕಳ ಕ್ರೀಡಾ ಚಟುವಟಿಕೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತದೆ ಎಂದರು.

ಬೇರೆ ಕಡೆ ಹಾಗೂ ಸರ್ಕಾರಿ ಜಾಗದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಲು ಅಭ್ಯಂತರ ಇಲ್ಲ. ಆದರೆ ಉಮಾ ವಿದ್ಯಾಲಯವು ಶತಮಾನಗಳ ಇತಿಹಾಸ ಹೊಂದಿರುವ ಶಾಲೆ. ಜಗತ್ತಿನ ನೂರಾರು ದೇಶಗಳಲ್ಲಿ ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಜೀವನ ಸಾಗಿಸುತ್ತಿದ್ದಾರೆ. ತಾಲೂಕು ಕ್ರೀಡಾಂಗಣಕ್ಕೆ ಹೇಳಿ ಮಾಡಿಸಿದ ಸ್ಥಳ ಇದಾಗಿರುವುದರಿಂದ ಇಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದರು.

ಪುರಸಭೆ ಮಾಜಿ ಸದಸ್ಯ ಮಹೇಶ ಹೊಗೆಸೊಪ್ಪಿನ, ಬಸವರಾಜ ಬಾಳೇಶ್ವರಮಠ, ತಿಪ್ಪಣ್ಣ ಸಂಶಿ, ಫಕ್ಕೀರೇಶ ಭಜಕ್ಕನವರ, ಸೋಮಣ್ಣ ಉಪನಾಳ ಮಾತನಾಡಿ ಪುರಸಭೆಯ ಉಮಾ ವಿದ್ಯಾಲಯದ ಆವರಣದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಶಾಲೆಯಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆದಾಯಕವಾಗಿದೆ. ಸರ್ಕಾರಿ ಜಾಗದಲ್ಲಿ ಕುಡಿಯುವ ನೀರಿ ಟ್ಯಾಂಕ್ ನಿರ್ಮಿಸಲು ಅವಕಾಶ ನೀಡಿ. ಇಲ್ಲಿನ ವಿದ್ಯಾರ್ಥಿಗಳ ಹಿತ ಕಾಯಬೇಕು ಎಂದು ಮನವಿ ಮಾಡಿದರು.

ಶಿಗ್ಲಿ ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಲಮಾಣಿ, ಮುತ್ತಣ್ಣ ಗಡೆದ, ನೀಲಪ್ಪ ಪಡಗೇರಿ, ಖಾನಸಾಬ ಸೂರಣಗಿ ಇದ್ದರು. ಶರಣು ಗೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.