ಎಸ್‌ಟಿ ಪಟ್ಟಿಗೆ ಅನ್ಯ ಸಮುದಾಯ ಸೇರ್ಪಡೆಗೆ ವಿರೋಧ

| Published : Sep 26 2025, 01:00 AM IST

ಸಾರಾಂಶ

ಅನ್ಯ ಸಮುದಾಯದವರನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಿದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಅನ್ಯಾಯವಾಗುತ್ತದೆ. ಒಂದು ವೇಳೆ ಸರ್ಕಾರ ಪ್ರಸ್ತಾವನೆ ಕಳುಹಿಸಿ ಸೇರ್ಪಡೆಗೆ ಮುಂದಾದರೆ ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ.

ಶಿರಹಟ್ಟಿ: ಪರಿಶಿಷ್ಟ ಪಂಗಡಕ್ಕೆ ಅನ್ಯ ಸಮುದಾಯವನ್ನು ಸೇರಿಸುವ ಪ್ರಸ್ತಾವ ವಿರೋಧಿಸಿ ಶಿರಹಟ್ಟಿ ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ಸಮಾಜದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು.

ಪಟ್ಟಣದ ವಾಲ್ಮೀಕಿ ವೃತ್ತದಿಂದ ಸಮಾಜಬಾಂಧವರು ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು.

ಈ ವೇಳೆ ಸಮಾಜದ ಮುಖಂಡ ಸಣ್ಣವೀರಪ್ಪ ಹಳ್ಳೆಪ್ಪನವರ ಮಾತನಾಡಿ, ಅನ್ಯ ಸಮುದಾಯದವರನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಿದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಅನ್ಯಾಯವಾಗುತ್ತದೆ. ಒಂದು ವೇಳೆ ಸರ್ಕಾರ ಪ್ರಸ್ತಾವನೆ ಕಳುಹಿಸಿ ಸೇರ್ಪಡೆಗೆ ಮುಂದಾದರೆ ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಎಲ್.ಜಿ. ಹಾವನೂರ ವರದಿಯಂತೆ ಶೇ. ೭.೫ ಮೀಸಲಾತಿ ಕೊಡುವುದಾಗಿ ಹೇಳಿದ್ದ ಸರ್ಕಾರ ಈವರೆಗೂ ಈಡೇರಿಸಿಲ್ಲ. ಆದರೆ, ಇತರ ಜಾತಿಗಳನ್ನು ಎಸ್‌ಟಿಗೆ ಸೇರಿಸುವ ಹುನ್ನಾರ ನಡೆಯುತ್ತಿರುವುದು ಬಹಿರಂಗವಾಗುತ್ತಿದೆ. ಶೋಷಿತರ ಪರವಾಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮ್ಯ ಹೇಳುತ್ತಲೇ ಅನ್ಯ ಜಾತಿಗಳನ್ನು ಪರಿಶಿಷ್ಟ ಪಂಗಡ ಮೀಸಲಾತಿಗೆ ಸೇರಿಸಿದರೆ ಶೋಷಿತ ಸುಮದಾಯಗಳ ಧ್ವನಿ ದಮನ ಮಾಡಿದಂತಾಗುತ್ತದೆ ಎಂದರು.

ಪರಿಶಿಷ್ಟ ಪಂಗಡವು ಬುಡಕಟ್ಟು ಸಮುದಾಯಕ್ಕೆ ಸೇರಿದ್ದು, ಸಮಾಜದಲ್ಲಿ ಶೈಕ್ಷಣಿಕ, ರಾಜಕೀಯ, ಆರ್ಥಿಕವಾಗಿ ಸಾಕಷ್ಟು ಹಿಂದುಳಿದಿದೆ. ಇದರ ನಡುವೆ ಅನ್ಯ ಸಮುದಾಯಗಳನ್ನು ಎಸ್‌ಟಿಗೆ ಸೇರಿಸಲು ಸರ್ಕಾರ ಸಿದ್ಧತೆ ನಡೆಸಿರುವುದು ಖಂಡನೀಯ. ಇದರಿಂದ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗಲಿದೆ. ಸಿಎಂ ಸಿದ್ದರಾಮಯ್ಯ ತಮ್ಮ ನಿರ್ಧಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಸಿಎಂ ಸಿದ್ದರಾಮಯ್ಯನವರು ಕೂಲಂಕುಶವಾಗಿ ಪರಿಶೀಲನೆ ಮಾಡಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದೇ ಹೋದರೆ ಇಡೀ ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ-೧ರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಮೀಸಲಾತಿ ಕಬಳಿಸುವವರ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು.

ಉತ್ತರ ಕರ್ನಾಟಕದ ಬೀದರ, ಕಲ್ಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟ, ಬೆಳಗಾವಿ ಮುಂತಾದ ಕೆಲವು ಜಿಲ್ಲೆಗಳಳ್ಳಿ ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-೧ರ ಕ್ರಮ ಸಂಖ್ಯೆ ೬ರಲ್ಲಿರುವ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಗೆ ಸೇರಿ ನಾಯಕ ತಳವಾರ ಹೆಸರಿನಲ್ಲಿ ೨ ಲಕ್ಷಕ್ಕೂ ಹೆಚ್ಚಿಗೆ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಾಮ ಮಾರ್ಗಗಳ ಮೂಲಕ ಅನೇಕ ಸೌಲಭ್ಯಗಳನ್ನು ಪಡೆದು ವಂಚಿಸುತ್ತಿರುವ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದು, ಕಡಿವಾಣ ಹಾಕಿಲ್ಲ ಎಂದು ದೂರಿದರು.

ನಂತರ ತಹಸೀಲ್ದಾರ್ ಕೆ. ರಾಘವೇಂದ್ರರಾವ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಗೋವಿಂದಪ್ಪ ಬಾಗೇವಾಡಿ, ಬಸಣ್ಣ ನಾಯ್ಕರ್, ಆರ್.ಡಿ. ಕೆಂಚಕ್ಕನವರ, ಮಂಜು ಶಂಕಿನದಾಸರ, ದೇವಪ್ಪ ಆಡೂರ, ಮಲ್ಲೇಶ ತಳವಾರ, ಪರಸು ಕಟಗಿ, ಶಿವಪ್ಪ ತಳವಾರ, ಶಿವು ನಾಯಕ, ರಮೇಶ, ಹನಮಂತ ತಳವಾರ, ಫಕ್ಕೀರೇಶ ತಳವಾರ ಇತರರು ಇದ್ದರು.