ಮಣಿಪಾಲ: ಇಲ್ಲಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ರಿಟಿಕಲ್ ಕೇರ್ ಮತ್ತು ಪ್ಯಾಲಿಯೇಟಿವ್ ಮೆಡಿಸಿನ್ ವಿಭಾಗಗಳ ವತಿಯಿಂದ ಅಂಗಾಂಗ ದಾನ ಜಾಗೃತಿ ಕುರಿತು 2 ದಿನಗಳ ನಿರಂತರ ವೈದ್ಯಕೀಯ ಶಿಕ್ಷಣ (ಸಿಎಂಇ) ಕಾರ್ಯಾಗಾರ ನಡೆಯಿತು.ಮರಣದ ನಂತರ ಅಂಗಾಂಗ ದಾನ ಮಾಡುವ ಬಗ್ಗೆ ಅರಿವು ಮೂಡಿಸುವ ಈ ಕಾರ್ಯಾಗಾರದ ಮೊದಲ ದಿನ 150 ನರ್ಸಿಂಗ್ ಸಿಬ್ಬಂದಿ, ಎರಡನೇ ದಿನ 250 ವೈದ್ಯಕೀಯ ವಿದ್ಯಾರ್ಥಿಗಳು ಮತ್ತು 100 ಪ್ರಾಧ್ಯಾಪಕರು ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಣಿಪಾಲ ಅಂಗಾಂಗ ಹಂಚಿಕೆ ಮತ್ತು ಕಸಿ ವಿಭಾಗದ ರಾಷ್ಟ್ರೀಯ ಮುಖ್ಯಸ್ಥ ಡಾ. (ಕರ್ನಲ್) ಅವ್ನಿಶ್ ಸೇಠ್, ಮೋಹನ್ ಫೌಂಡೇಶನ್ನ ಕಾರ್ಯನಿರ್ವಾಹಕ ನಿರ್ದೇಶಕಿ ಪಲ್ಲವಿ ಕುಮಾರ್ ಭಾಗವಹಿಸಿದ್ದರು.
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ) ಎಂ.ಡಿ. ವೆಂಕಟೇಶ್ ಅವರು ಅಂಗಾಂಗ ಕಸಿಗೆ ಮಾಹೆ ಮಣಿಪಾಲದಲ್ಲಿ ಅತ್ಯಾಧುನಿಕ ಸಿಮ್ಯುಲೇಶನ್ ಸೌಲಭ್ಯವನ್ನು ಸ್ಥಾಪಿಸುವ ಯೋಜನೆಯನ್ನು ಘೋಷಿಸಿದರು.ಮಾಹೆಯ ಆರೋಗ್ಯ ವಿಜ್ಞಾನಗಳ ಸಹ ಉಪಕುಲಪತಿ ಡಾ. ಶರತ್ ಕುಮಾರ್ ರಾವ್, ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಅನಿಲ್ ಕೆ. ಭಟ್, ಮಾಹೆ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯಾಚರಣಾ ಅಧಿಕಾರಿ ಡಾ. ಸುಧಾಕರ್ ಕಂಟಿಪುಡಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಉಪಸ್ಥಿತರಿದ್ದರು.
270 ಮಂದಿ ಅಂಗಾಂಗ ದಾನ ಪ್ರತಿಜ್ಞೆ: ಈ ಕಾರ್ಯಕ್ರಮದ ಯಶಸ್ಸಿನ ಪ್ರಮುಖ ಅಂಶವೆಂದರೆ ಸುಮಾರು 270 ಮಂದಿ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಸಿಬ್ಬಂದಿ ತಮ್ಮ ಮರಣಾ ನಂತರ ಅಂಗಾಂಗ ದಾನ ಮಾಡುವ ಬಗ್ಗೆ ಹಾಗೂ ಜಾಗೃತಿ ಮೂಡಿಸುವ ಬಗ್ಗೆ ಪ್ರತಿಜ್ಞೆ ಮಾಡಿದರು.