ಕನ್ನಡಪ್ರಭ ವಾರ್ತೆ ಕಾರವಾರ
ಸಂಘಟನೆಯೇ ನಮ್ಮ ಶಕ್ತಿ. ಪ್ರತಿಯೊಬ್ಬ ಕಾರ್ಯಕರ್ತನೂ ಪಕ್ಷದ ಸಿದ್ಧಾಂತ, ಶಿಸ್ತು ಮತ್ತು ಸೇವಾ ಮನೋಭಾವವನ್ನು ತಮ್ಮ ನಡೆ ನುಡಿಯಲ್ಲಿ ಪ್ರತಿಬಿಂಬಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದರು.ದಕ್ಷಿಣ ಕನ್ನಡದ ಸಂಘಟನಾ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಸಂಘಟನಾ ಪ್ರಭಾರಿಯಾದ ಅವರು ಮಂಗಳೂರಿನ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಬೂತ್ ಮಟ್ಟದಿಂದ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸಿ, ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪಕ್ಷದ ವಿಚಾರಧಾರೆ ಮತ್ತು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಹೇಳಿದರು.ಎಸ್ಐಆರ್ ಪ್ರಕ್ರಿಯೆ ಎಲ್ಲಾ ಕಡೆಗಳಲ್ಲಿ ನಡೆಯುತ್ತಿದೆ. ಆದರೆ ಅದು ಸಮರ್ಪಕವಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದನ್ನು ಗಮನಿಸುವುದು ಕೂಡಾ ನಮ್ಮ ಜವಾಬ್ದಾರಿಯಾಗಿದೆ. ಏಕೆಂದರೆ ಪ್ರಜಾಪ್ರಭುತ್ವ ಬಲಪಡಿಸುವ ನಿಟ್ಟಿನಲ್ಲಿ ಇದು ಅತ್ಯಂತ ಮಹತ್ವದ್ದಾಗಿದೆ. ಕಾಂಗ್ರೆಸ್ ಸರ್ಕಾರದಡಿ ಎಸ್ಐಆರ್ ಪ್ರಕ್ರಿಯೆ ಬೇಕಾಬಿಟ್ಟಿಯಾಗಿ ನಡೆಯುತ್ತಿದೆ. ಅಕ್ರಮ ವಲಸಿಗರಿಗೆ ಪಿಆರ್ಸಿ ನೀಡುವ ಹುನ್ನಾರವೂ ಇದೆ. ಹೀಗಾಗಿ ಕಾರ್ಯಕರ್ತರು ಬಿಎಲ್ಒಗಳ ಜೊತೆಗೆ ಮನೆ ಮನೆಗಳಿಗೆ ಭೇಟಿ ನೀಡಿ ಫಾರಂ ಮರಳಿ ನೀಡಿದ್ದಾರಾ ಎನ್ನುವುದನ್ನು ಕೂಡಾ ಖಚಿತಪಡಿಸಿಕೊಳ್ಳಬೇಕು ಎಂದರು.
ಗ್ರಾಪಂ, ತಾಪಂ, ಜಿಪಂ, ನಗರಪಾಲಿಕೆ ಚುನಾವಣೆಗಳು ಕಾರ್ಯಕರ್ತರ ಚುನಾವಣೆಯಾಗಿದೆ. ಅದರಲ್ಲಿ ನಮ್ಮ ಕಾರ್ಯಕರ್ತರನ್ನು ಗೆಲ್ಲಿಸಬೇಕು. ಹೀಗಾಗಿ ನಾವೆಲ್ಲರೂ ಸಂಘಟನಾತ್ಮಕವಾಗಿ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭ ಮಾಜಿ ಸಚಿವರಾದ ಕೃಷ್ಣ ಜೆ. ಪಾಲೇಮಾರ್, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ಮಾಜಿ ಶಾಸಕ ಸಂಜೀವ್ ಮಠಂದೂರು, ಮಾಜಿ ಎಮ್ಮೆಲ್ಸಿ ಪ್ರತಾಪ್ ಸಿಂಹ ನಾಯಕ್, ವಿಭಾಗ ಸಂಚಾಲಕರಾದ ಭರತೇಶ್, ಸಹ ಸಂಚಾಲಕರಾದ ಜಯಂತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
