ಸಾರಾಂಶ
Organized fight to curb bribery is necessary: Vidyadhar
-ಹಸಿರು ಸೇನೆಯ ನೂತನ ಗ್ರಾಮ ಘಟಕದ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳ ಆಯ್ಕೆ ಸಭೆ
-----ಕನ್ನಡಪ್ರಭ ವಾರ್ತೆ ವಡಗೇರಾ
ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಲಂಚದ ವಿರುದ್ಧ ಸಂಘಟಿತ ಹೋರಾಟದ ಅವಶ್ಯವಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ) ಬಣದ ವಡಗೇರಾ ತಾಲೂಕು ಅಧ್ಯಕ್ಷ ವಿದ್ಯಾಧರ್ ಜಾಕಾ ಹೇಳಿದರು.ಕುರಕುಂದಾ ಗ್ರಾಮದಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಗ್ರಾಮ ಘಟಕದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿದರು.
ದೇಶಕ್ಕೆ ರೈತರ ಕೊಡುಗೆ ಅಪಾರವಾದದ್ದು, ಆದರೆ, ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ರೈತರನ್ನು ಕಡೆಗಣಿಸುತ್ತಲೆ ಇದ್ದಾರೆ. ಸರ್ಕಾರದ ಕೆಲ ಇಲಾಖೆಗಳಲ್ಲಿ ರೈತರಿಗೆ ಸಂಬಂಧಿಸಿದ ಹಾಗೂ ಸಾರ್ವಜನಿಕರ ಕೆಲಸ, ಕಾರ್ಯ ಮಾಡಿಕೊಡುವಲ್ಲಿ ಅಧಿಕಾರಿಗಳಿಂದ ಹಿಡಿದು ಗುಮಾಸ್ತರವರೆಗೂ ಭ್ರಷ್ಟಾಚಾರ ಹಾಗೂ ಲಂಚದ ಹಾವಳಿ ಹೆಚ್ಚಾಗುತ್ತಿದೆ. ಇವುಗಳಿಗೆ ಜಿಲ್ಲಾಡಳಿತ ಕೂಡಲೇ ಕಡಿವಾಣ ಹಾಕುವಂತೆ ಒತ್ತಾಯಿಸಿದರು.ಮಳೆಯಿಂದ ಹಾನಿಗೊಳಗಾದ ರೈತರ ಬೆಳೆಗಳ ಸರ್ವೇ ಮಾಡಿ ತುರ್ತಾಗಿ ರೈತರಿಗೆ ಪರಿಹಾರ ಒದಗಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೇಕು. ಒಂದು ವೇಳೆ ವಿಳಂಬ ಮಾಡಿದಲ್ಲಿ ನಮ್ಮ ರೈತ ಸಂಘದಿಂದ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ಗ್ರಾಮ ಘಟಕದ ಅಧ್ಯಕ್ಷರಾಗಿ ಬೀರಪ್ಪ ಕುರಿ ಮತ್ತು ಉಪಾಧ್ಯಕ್ಷರಾಗಿ ಬಸವರಾಜ ಕುರಿ ಅವರನ್ನು ನೇಮಕ ಮಾಡಲಾಯಿತು.ರೈತ ಸಂಘದ ಮುಖಂಡ ಮಲ್ಲು ನಾಟೇಕಾರ ಹಾಗೂ ಗ್ರಾಮ ಘಟಕದ ಪದಾಧಿಕಾರಿಗಳು, ಸದಸ್ಯರು ಇದ್ದರು.
-----5ವೈಡಿಆರ್5: ಕುರಕುಂದ ಗ್ರಾಮದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಗ್ರಾಮ ಘಟಕದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.