ಸಾರಾಂಶ
ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಆಸ್ಕರ್ ಫರ್ನಾಂಡಿಸ್ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಸಮಾರೋಪ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಆಸ್ಕರ್ ಫರ್ನಾಂಡಿಸ್ ಪಕ್ಷದಲ್ಲಿ ತಮಗಿರುವ ಪ್ರಭಾವವನ್ನು ಸ್ವಂತ ಲಾಭಕ್ಕಾಗಿ ಬಳಸಿಕೊಳ್ಳದೆ, ಯುವ ನಾಯಕತ್ವವನ್ನು ಬೆಳೆಸುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾದರು. ಅವರ ನಿಧನದ ಬಳಿಕವೂ ಕಾರ್ಯಕರ್ತರು ಅವರನ್ನು ನೆನಪಿಸುವಂತಹ ಸಜ್ಜನ ರಾಜಕಾರಣಿಯಾಗಿದ್ದಾರೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.ಅವರು ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಆಸ್ಕರ್ ಫರ್ನಾಂಡಿಸ್ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಆಸ್ಕರ್ ತಮ್ಮ ಜೀವನದುದ್ದಕ್ಕೂ ಜನರ ಭಾವನೆಗಳಿಗೆ ಬೆಲೆ ನೀಡಿದ ಮುತ್ಸದ್ದಿ ನಾಯಕ. ಪ್ರಚಾರ ಬಯಸದೆ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದವರು. ಶಿಕ್ಷಣಕ್ಕೆ ಕೇಳಿದಷ್ಟು ಅನುದಾನ ಕೊಡುವ ಉದಾರ ಮನಸ್ಸನ್ನು ಹೊಂದಿದ್ದರು. ಅವರ ಸಂಯಮ ಹಾಗೂ ತಾಳ್ಮೆ ಇಂದಿನ ಯುವ ರಾಜಕಾರಣಿಗಳಿ ಮಾದರಿಯಾಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ, ರಾಜಕೀಯದಲ್ಲಿ ಪ್ರತಿಯೊಬ್ಬರಿಗೂ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದ ನಾಯಕ ಅವರಾಗಿದ್ದರು. ಅವರ ದೆಹಲಿಯ ಕಚೇರಿಗೆ ಯಾವುದೇ ರೀತಿಯ ಪೂರ್ವಾನುಮತಿ ಪಡೆಯದೆ ನೇರವಾಗಿ ಹೋಗಿ ಕೆಲಸವನ್ನು ಮಾಡಿಕೊಳ್ಳಬಹುದಿತ್ತು. ಬೆಳಗಿನ ಜಾವ 3 ಗಂಟೆಯವರೆಗೂ ಸಹ ತಮ್ಮ ಕಚೇರಿಯಲ್ಲಿ ತಮ್ಮ ಜಿಲ್ಲೆಯ ರಾಜ್ಯದ ಜನರ ನೋವಿಗೆ ದನಿಯಾಗುತ್ತಿದ್ದ ಅಪರೂಪದ ರಾಜಕಾರಣಿ ಅವರಾಗಿದ್ದರು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದ ಕೆ ಜಯಪ್ರಕಾಶ್ ಹೆಗ್ಡೆ ಸಹಿತ ಹಲವು ನಾಯಕರು ಮಾತನಾಡಿದರು. ವಿವಿಧ ಸ್ಪರ್ಧೆಗಳಲ್ಲಿ, ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.ಆಸ್ಕರ್ ಫರ್ನಾಂಡಿಸ್ ಅವರ ಧರ್ಮಪತ್ನಿ ಬ್ಲೋಸಮ್ ಫರ್ನಾಂಡಿಸ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯ ಕ್ಷ ರಮೇಶ್ ಕಾಂಚನ್ ವೇದಿಕೆಯಲ್ಲಿದ್ದರು.ದಿನವಿಡೀ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಪಕ್ಷದ ನಾಯಕರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಹರಿಪ್ರಸಾದ್ ರೈ ರಾಜು ಪೂಜಾರಿ, ಮಲ್ಯಾಡಿ ಶಿವರಾಮ್ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು.