ನಮ್ಮ ಕಾನೂನಿನಲ್ಲಿ ಮಾನವೀಯ ಮೌಲ್ಯಗಳಿವೆ: ವೆಂಕಟೇಶ

| Published : Nov 14 2025, 01:15 AM IST

ಸಾರಾಂಶ

ನಮ್ಮಲ್ಲಿರುವ ಕಾನೂನುಗಳು ಮಾನವೀಯ ಮೌಲ್ಯಗಳಿಂದ ಕೂಡಿದ್ದು, ದೇಶದ ಆಸ್ತಿಯಾಗಿರುವ ಮಕ್ಕಳ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ ಹೇಳಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ನಮ್ಮಲ್ಲಿರುವ ಕಾನೂನುಗಳು ಮಾನವೀಯ ಮೌಲ್ಯಗಳಿಂದ ಕೂಡಿದ್ದು, ದೇಶದ ಆಸ್ತಿಯಾಗಿರುವ ಮಕ್ಕಳ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ ಹೇಳಿದರು.

ಸ್ಥಳೀಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಂಗಳೂರಿನ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಾಲನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಪೋಕ್ಸ ಕಾಯ್ದೆ-2012 ಹಾಗೂ ದತ್ತು ನಿಯಮಾವಳಿಗಳು-2022ರ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳ ಹಕ್ಕುಗಳನ್ನು ಸುಲಭವಾಗಿ ಅನುಷ್ಠಾನಗೊಳಿಸಲು ಕಾಯ್ದೆಗಳನ್ನು ಅರಿತುಕೊಳ್ಳಬೇಕು. ಇದರಿಂದ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿ ಕೊಡಬಹುದಾಗಿದೆ ಎಂದ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳುವಂತೆ ಕಾನೂನುಗಳ ಸಮರ್ಪಕ ಅನುಷ್ಠಾನವು ನಮ್ಮಲ್ಲಿನ ಇಚ್ಛಾಶಕ್ತಿಯ ಮೇಲೆ ನಿಂತಿದೆ ಎಂದು ತಿಳಿಸಿದರು.

ಬೆಂಗಳೂರಿನ ಸಿಐಡಿ ಕಚೇರಿಯ ಪೊಲೀಸ್ ತರಬೇತುದಾರರಾದ ರೋಹಿತ್ ಸಿ.ಜೆ. ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಆಯೋಗದ ಜಿಲ್ಲಾ ಸದಸ್ಯೆ ಜಯ ಸುಧಾರಾಣಿ, 1ನೇ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ. ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಯು. ನವೀನ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ, ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಅಧಿಕಾರಿ, ಸಿಬ್ಬಂದಿ ಇದ್ದರು.

ಪ್ರತಿಜ್ಞಾ ವಿಧಿ ಬೋಧನೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಬಾಲನ್ಯಾಯ ಕಾಯ್ದೆ 2015ರ ಸೆಕ್ಷನ್ 81 ರನ್ವಯ ಮಕ್ಕಳನ್ನು ಮಾರಾಟ ಮಾಡಿದವರಿಗೂ ಹಾಗೂ ಮಕ್ಕಳನ್ನು ಕೊಂಡುಕೊಳ್ಳುವವರಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ.ಗಳ ದಂಡವನ್ನು ವಿಧಿಸಬಹುದು. ಒಂದು ವೇಳೆ ಅಂತಹ ಪ್ರಕರಣಗಳಲ್ಲಿ ಆಸ್ಪತ್ರೆ ಸಿಬ್ಬಂದಿಯವರು ಶಾಮೀಲಾಗಿದ್ದಲ್ಲಿ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಕುಟುಂಬವಿಲ್ಲದ ಮಕ್ಕಳಿಗೆ ಕಾನೂನು ಬದ್ಧವಾಗಿ ಕುಟುಂಬವನ್ನು ಒದಗಿಸುವುದು. ಅನಾಥ, ಒಪ್ಪಿಸಲ್ಪಟ್ಟ, ನಿರ್ಗತಿಕ ಮತ್ತು ಪರಿತ್ಯಕ್ತ ಮಕ್ಕಳು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ: 1098/112ಗೆ ಕರೆ ಮಾಡುವುದರ ಮುಖಾಂತರ ಮಕ್ಕಳ ಭವಿಷ್ಯತ್ತಿನ ಹಿತಾಸಕ್ತಿಗಾಗಿ ಎಲ್ಲರೂ ಕೈಜೋಡಿಸಿ ಮಕ್ಕಳನ್ನು ಅನಾಥ ಪ್ರಜ್ಞೆಯಿಂದ ಕಾಪಾಡುವುದರೊಂದಿಗೆ ತಾಯಿತನದ ಹಂಬಲವನ್ನು ನೀಗಿಸೋಣ ಎಂದರು.

ಪೋಸ್ಟರ್ ಬಿಡುಗಡೆ

ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಇವರ ವತಿಯಿಂದ ದತ್ತು ಪ್ರಕ್ರಿಯೆ ಹಾಗೂ 1098 ಮಕ್ಕಳ ಸಹಾಯವಾಣಿ ಪೋಸ್ಟರ್ಗಳನ್ನು ವಿವಿಧ ಗಣ್ಯರಿಂದ ಬಿಡುಗಡೆ ಮಾಡಲಾಯಿತು.