ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಬಡ ರೋಗಿಗಳ ಸಾವು ಸಂಭವಿಸಿ 10 ದಿನಗಳೇ ಕಳೆದಿವೆ. ಆದರೆ ಇದುವರೆವಿಗೂ ಮೃತ ಕುಟುಂಬಗಳಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ, ರೋಗಿಗಳ ಸಾವಿಗೆ ಕಾರಣವಾಗಿರುವ ವೈದ್ಯರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ಸರ್ಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳ ಸಾವು ಸಂಭವಿಸಿ 10 ದಿನಗಳು ಕಳೆದರೂ ಯಾವುದೇ ಕ್ರಮ ಕೈಗೊಡಿಲ್ಲ ಎಂದು ಡಿವೈಎಫ್‍ಐ ಜಿಲ್ಲಾ ಮುಖಂಡ ರಾಜಶೇಖರ್ ಅವರು ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ. ಮಹೇಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಡಿವೈಎಫ್‍ಐ ಮುಖಂಡರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಬಡ ರೋಗಿಗಳ ಸಾವು ಸಂಭವಿಸಿ 10 ದಿನಗಳೇ ಕಳೆದಿವೆ. ಆದರೆ ಇದುವರೆವಿಗೂ ಮೃತ ಕುಟುಂಬಗಳಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ, ರೋಗಿಗಳ ಸಾವಿಗೆ ಕಾರಣವಾಗಿರುವ ವೈದ್ಯರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣ ಖಾಲಿ ಇರುವ ವೈದ್ಯರು ಸೇರಿ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಬೇಕು, ಪ್ರಾಣ ಕಳೆದುಕೊಂಡಿರುವ ಕುಟುಂಬಗಳಿಗೆ ಪರಿಹಾರ ಕಲ್ಪಿಸಬೇಕು. ಆಸ್ಪತೆಗೆ ಬರುವ ಬಡರೋಗಿಗಳಿಗೆ ಮೂಲ ಸೌಲಭ್ಯ ಒದಗಿಸುವುದು ಸೇರಿ ಇಲ್ಲಿನ ಸಮಸ್ಯೆಗಳ ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆ ವತಿಯಿಂದ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಡಿಎಚ್‌ಒ ಡಾ. ಮಹೇಶ್ ಕುಮಾರ್ ಮಾತನಾಡಿ, ರೋಗಿಗಳ ಸಾವಿನ ಪ್ರಕರಣವನ್ನು ತನಿಖೆ ನಡೆಸಲು ಜಿಲ್ಲಾ ನೋಡಲ್ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ತನಿಖಾ ವರದಿ ಬಂದ ತಕ್ಷಣ ಕಾನೂನು ಕ್ರಮ ಜರುಗಿಸಲಾಗುವುದು. ಪಟ್ಟಣ ಸೇರಿದಂತೆ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಮುಂದಿನ ಕೌನ್ಸೆಲಿಂಗ್‍ನಲ್ಲಿ ಖಾಲಿ ಹುದ್ದೆ ತುಂಬುವ ಭರವಸೆ ನೀಡಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಿಪಿಎಂ ಮುಖಂಡ ಚೆನ್ನರಾಯಪ್ಪ, ಪ್ರಭಾರ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಸಜೀತ್‍ರೆಡ್ಡಿ, ಆಡಳಿತಾಧಿಕಾರಿ ವಿನಯ್ ಕುಮಾರ್, ಡಿವೈಎಫ್‍ಐ ಜಿಲ್ಲಾಧ್ಯಕ್ಷ ವೈ.ಎನ್. ಹರೀಶ್ ಡಿವೈಎಫ್‍ಐ ಮತ್ತು ಸಿಪಿಎಂ ಮುಖಂಡರಾದ ಡಿ.ಟಿ. ಮುನಿಸ್ವಾಮಿ, ಸೋಮಶೇಖರ್, ಎನ್.ಗಣೇಶ್, ಸುನಿಲ್, ಆನಂದ್ ಮತ್ತಿತರರು ಇದ್ದರು.

08ಬಿಜಿಪಿ-1: ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಸಭೆಯಲ್ಲಿ ಡಿವೈಎಫ್‍ಐ ಮುಖಂಡರೊಂದಿಗೆ ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ. ಮಹೇಶ್ ಕುಮಾರ್ ಚರ್ಚೆ ನಡೆಸಿದರು.