ಸಾರಾಂಶ
ಮೈಸೂರು : ಸಂಯೋಜನೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು 4200 ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ಖಂಡಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯವರು ನಗರದ ರಾಮಸ್ವಾಮಿ ವೃತ್ತದಲ್ಲಿ ಸೋಮವಾರ ಪ್ರತಿಭಟಿಸಿದರು.
ಇತ್ತೀಚೆಗಷ್ಟೆ ರಾಜ್ಯ ಸರ್ಕಾರವು ಹಬ್ ಅಂಡ್ ಸ್ಪೋಕ್ ಅಡಿಯಲ್ಲಿ ಕಡಿಮೆ ಹಾಜರಾತಿ ಇರುವ ಸರ್ಕಾರಿ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜಿಸುವ ನಿರ್ಧಾರವನ್ನು ಪ್ರಕಟಿಸಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಸುಧಾರಣಾ ಸಮಿತಿಯನ್ನು ಸಹ ರಚಿಸಲಾಗಿದೆ. ರಾಜ್ಯದಲ್ಲಿ 4 ಸಾವಿರಕ್ಕೂ ಅಧಿಕ ಶಾಲೆಗಳು 10 ಮಕ್ಕಳಿಗಿಂತ ಕಡಿಮೆ ದಾಖಲಾತಿಯನ್ನು ಹೊಂದಿವೆ. ಈ ಶಾಲೆಗಳ ಭವಿಷ್ಯದ ಕುರಿತು ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ತಲೆದೊರಿದೆ.
ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು ಎಂದು ಅವರು ಆಗ್ರಹಿಸಿದರು.ರಾಜ್ಯದಲ್ಲಿ 6000 ಹೆಚ್ಚು ಏಕೋಪಾಧ್ಯಾಯ ಶಾಲೆಗಳಿವೆ, 50000 ಹೆಚ್ಚು ಶಿಕ್ಷಕರನ್ನು ನೇಮಕ ಮಾಡಿಕೊಂಡಿಲ್ಲ. ಶಾಲೆಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕ್ರಮಗಳನ್ನು ಕೈಗೊಳ್ಳದೆ, ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ನೆಗಡಿ ಬಂದರೆ ಮೂಗು ಕತ್ತರಿಸಿದಂತೆ. ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಎಂದು ಅವರು ಒತ್ತಾಯಿಸಿದರು.
ಆದ್ಯತೆಯ ಮೇರೆಗೆ ಸರ್ಕಾರವು ಶಿಕ್ಷಣಕ್ಕೆ ಬಜೆಟ್ ನಲ್ಲಿ ಅನುದಾನ ನಿಗದಿಪಡಿಸಬೇಕು. ಸರ್ಕಾರಿ ಶಾಲೆಗಳನ್ನು ಸಂಯೋಜನೆಗೊಳಿಸುವ ಬದಲು, ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯ ನೀಡಿ ರಕ್ಷಿಸಬೇಕು ಎಂದು ಅವರು ಆಗ್ರಹಿಸಿದರು.ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ರಾಜ್ಯ ಖಜಾಂಚಿ ಸುಭಾಷ್, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಲ್ಯಾಣ್, ಜಿಲ್ಲಾಧ್ಯಕ್ಷೆ ಚಂದ್ರಕಲಾ, ಕಾರ್ಯದರ್ಶಿ ನಿತಿನ್, ಉಪಾಧ್ಯಕ್ಷೆ ಸ್ವಾತಿ, ಪದಾಧಿಕಾರಿಗಳಾದ ಹೇಮಾ, ಚಂದನಾ, ಅಂಜಲಿ, ಅಭಿಷೇಕ, ದಿಶಾ, ನಂದೀಶ್ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.