ಸಾರಾಂಶ
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಬಮೂಲ್ ನಿರ್ದೇಶಕರಾಗಿ ನೂತನವಾಗಿ ಆಯ್ಕೆಯಾಗಿರುವ ಬಿ.ಸಿ.ಆನಂದ್ ಕುಮಾರ್, ಮಾಜಿ ಶಾಸಕ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿರುವುದು ಅಕ್ಷಮ್ಯವಾಗಿದೆ. ಅಂತೆಯೇ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತು ಮಾತನಾಡಿರುವ ವೈಖರಿ ಖಂಡನೀಯವಾಗಿದ್ದು, ಈ ಬಗ್ಗೆ ಅವರು ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಘಟಕ ವತಿಯಿಂದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಜಿ. ಲಕ್ಷ್ಮೀಪತಿ, ಬಮೂಲ್ ನಿರ್ದೇಶಕರಾಗಿ ನೂತನವಾಗಿ ಆಯ್ಕೆಯಾಗಿರುವ ಬಿ.ಸಿ.ಆನಂದ್ಕುಮಾರ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ. ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಹಾಗೆಂದ ಮಾತ್ರಕ್ಕೆ ಏನಾದರೂ ಮಾತನಾಡಬಹುದು ಎನ್ನುವುದು ತಪ್ಪು. ಮಾಜಿ ಶಾಸಕರನ್ನು ತೆಗಳಿ, ನಂತರ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಅಭಿನಂದಿಸಿ ಬಂದಿದ್ದಾರೆ. ಈ ದ್ವಂದ್ವ ನಿಲುವಿನಿಂದಾಗಿ ಅವರು ಯಾವ ಪಕ್ಷದಲ್ಲಿದ್ದಾರೆ ಎಂಬುದರ ಬಗ್ಗೆ ಗೊಂದಲವಿದೆ. ಅವರು ಸ್ಪಷ್ಟನೆ ನೀಡಬೇಕು ಎಂದರು.
ಛಲವಾದಿ ವಿರುದ್ದ ಆಕ್ರೋಶ:ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕುರಿತು ಬೊಗಳುವ ನಾಯಿ ಎಂದು ಜರಿದಿರುವುದು ಅವರ ಸ್ಥಾನಕ್ಕೆ ಶೋಭೆ ತರುವಂತದ್ದಲ್ಲ. ಹಿಂದೆ ಕಾಂಗ್ರೆಸ್ನಲ್ಲಿ ಉನ್ನತ ಅಧಿಕಾರಗಳನ್ನು ಅನುಭವಿಸಿ, ಈಗ ಕಾಂಗ್ರೆಸ್ ಅನ್ನು ತೆಗಳುತ್ತಿರುವ ನಾರಾಯಣಸ್ವಾಮಿ ಅವರೇ, ನೀವು ಮನುವಾದಿಗಳ ಗುಲಾಮರಾಗಬೇಡಿ ಎಂದು ಎಚ್ಚರಿಕೆ ನೀಡಲಾಗುತ್ತಿದೆ ಎಂದು ಹೇಳಿದರು.ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ ಮಾತನಾಡಿ, ಬಮೂಲ್ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಜೆಡಿಎಸ್ ಅಭ್ಯರ್ಥಿಗೆ ಬೇಷರತ್ ಬೆಂಬಲ ನೀಡಲಾಗಿತ್ತು. ಆದರೆ, ನಮ್ಮ ಬೆಂಬಲಿತ ಅಭ್ಯರ್ಥಿ ಸೋಲುಂಡಿದ್ದಾರೆ. ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ರಾಜಕೀಯದಲ್ಲಿ ಕನಿಷ್ಠ ಸೌಜನ್ಯವಾಗಿ ವರ್ತಿಸದೇ ಬಮೂಲ್ ನಿರ್ದೇಶಕರು ಏಕವಚನ ಬಳಸಿರುವುದು ಶೋಭೆಯಲ್ಲ. ರಾಜಕೀಯದಲ್ಲಿ ವೈಯಕ್ತಿಕ ದ್ವೇಷ ಬೇಡ. ಮಾತನಾಡುವಾಗಿ ಭಾಷೆ ಹಿಡಿತದಲ್ಲಿರಬೇಕು ಎಂದರು.ಕಾಂಗ್ರೆಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಕೆಂಪಣ್ಣ ಹಾಗೂ ನಗರ ಅಧ್ಯಕ್ಷ ಮುನಿರಾಜು ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ಹಿಂಬಾಗಿಲಿನಿಂದ ಬಂದು ರಾಜಕೀಯ ಮಾಡುತ್ತಾ ಈಗ ಪ್ರಿಯಾಂಕ್ ಖರ್ಗೆ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದು ಬೇಸರದ ಸಂಗತಿ. ಈ ಬಗ್ಗೆ ಅವರು ಕ್ಷಮೆ ಯಾಚಿಸದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು.
ಈ ವೇಳೆ ನಗರಸಭಾ ಸದಸ್ಯ ಶಿವಣ್ಣ ಕಾಂಗ್ರೆಸ್ ಕಸಬಾ ಘಟಕದ ಅಧ್ಯಕ್ಷ ಅಪ್ಪಿ ವೆಂಕಟೇಶ್, ತಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ಕೃಷ್ಣಮೂರ್ತಿ ಮೊದಲಾದವರು ಹಾಜರಿದ್ದರು.ಫೋಟೋ-31ಕೆಡಿಬಿಪಿ2- ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಹಾಗೂ ಪಂಗಡ ಘಟಕದ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹಲವು ಮುಖಂಡರು ಭಾಗಿಯಾದರು.