ಜನೌಷಧಿ ಕೇಂದ್ರ ಮುಚ್ಚುವ ಕ್ರಮಕ್ಕೆ ಆಕ್ರೋಶ

| Published : May 31 2025, 01:04 AM IST

ಸಾರಾಂಶ

ರಾಜ್ಯದಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಶುಕ್ರವಾರ ಜಿಲ್ಲಾ ಬಿಜೆಪಿ ಮುಖಂಡರು ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುರಾಜ್ಯದಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಶುಕ್ರವಾರ ಜಿಲ್ಲಾ ಬಿಜೆಪಿ ಮುಖಂಡರು ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಶಾಸಕ ಬಿ.ಸುರೇಶ್‌ಗೌಡ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿರುವುದು ಖಂಡನೀಯ. ಉತ್ತಮ ಗುಣಮಟ್ಟದ ಔಷಧಿಗಳು ಕಡಿಮೆ ಬೆಲೆಗೆ ದೊರೆಯುತ್ತಿರುವ, ಬಡ ರೋಗಿಗಳಿಗೆ ಸಹಾಯವಾಗುತ್ತಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.ಆರೋಗ್ಯ ಸೇವೆ ದುಬಾರಿಯಾಗಿ ಬಡವರು ಸಂಕಷ್ಟಪಡುತ್ತಿರುವ ಸಂದರ್ಭದಲ್ಲಿ ಮೋದಿ ಸರ್ಕಾರ ಬಡವರಿಗೆ ಕೈಗಟುಕುವ ಬೆಲೆಯಲ್ಲಿ ಗುಣಮಟ್ಟದ ಔಷಧಿ ದೊರಕಿಸಲು ಆರಂಭಿಸಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿಯಾಗಿದೆ.ಸಿಎಂ ಸಿದ್ದರಾಮಯ್ಯನವರು ಮೋದಿಯವರ ಜನಪರ ಯೋಜನೆಗಳನ್ನು ದ್ವೇಷ ಮಾಡಿಕೊಂಡು ರದ್ದು ಮಾಡಿ ರಾಜ್ಯದ ಜನರಿಗೆಅನ್ಯಾಯ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಬಡಜನರ ಆರೋಗ್ಯದ ಬಗ್ಗೆ ಕಾಳಜಿಯಿಲ್ಲ, ಕೂಡಲೇ ಜನೌಷಧಿ ಕೇಂದ್ರ ಮುಚ್ಚುವ ಆದೇಶ ಹಿಂಪಡೆಯಬೇಕು. ಇದು ಬಡವರ ಆರೋಗ್ಯಕ್ಕೆ ಕುತ್ತು ತರುವ ಹುನ್ನಾರವಾಗಿದೆ ಎಂದರು.ದೇಶದಲ್ಲಿ 15 ಲಕ್ಷ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು ಬಡವರಿಗೆ ಕಡಿಮೆ ಬೆಲೆಯಲ್ಲಿ ಔಷಧಿ, ಸರ್ಜಿಕಲ್ ಐಟಂಗಳು ದೊರಕಿಸಿ ಸಹಾಯವಾಗುತ್ತಿವೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶದಿಂದ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವುದು ಖಂಡನೀಯ.ಸರ್ಕಾರದ ಧೋರಣೆ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಲಿದೆ ಎಂದು ಶಾಸಕ ಸುರೇಶ್‌ಗೌಡ ಎಚ್ಚರಿಕೆ ನೀಡಿದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಖಾಸಗಿ ಔಷಧಿ ಸಂಸ್ಥೆಗಳ ಒತ್ತಡಕ್ಕೆ ಮಣಿದು, ಇಲ್ಲವೆ ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಮೂಲಕ ಬಡವರಿಗೆ ವಂಚನೆ ಮಾಡುತ್ತಿದೆ.ರಾಜ್ಯದಲ್ಲಿ ಸುಮಾರು 1500 ಜನೌಷಧಿ ಕೇಂದ್ರಗಳಲ್ಲಿ 12 ಲಕ್ಷ ಜನ ಕಡಿಮೆ ದರದಲ್ಲಿ ಔಷಧಿ ಖರೀದಿ ಮಾಡುತ್ತಿದ್ದಾರೆ. ಈಗ ಸರ್ಕಾರ ಏಕಾಏಕಿ ಜನೌಷಧಿ ಕೇಂದ್ರಗಳನ್ನು ಮುಚ್ಚುವುದರಿಂದ ಬಡವರು, ಆರ್ಥಿಕವಾಗಿ ಹಿಂದುಳಿದವರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಹೇಳಿದರು.ಕೇಂದ್ರ ಸಚಿವ ವಿ.ಸೋಮಣ್ಣ ಅವರು ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಬಾರದು ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್.ಚಂದ್ರಶೇಖರ್, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್‌ಗೌಡ, ನಗರ ಅಧ್ಯಕ್ಷ ಧನುಷ್, ಮುಖಂಡರಾದ ಟಿ.ಎಚ್.ಹನುಮಂತರಾಜು, ಹೆಚ್.ಎಂ.ರವೀಶಯ್ಯ, ಸತ್ಯಮಂಗಲ ಜಗದೀಶ್, ವಿರೂಪಾಕ್ಷಪ್ಪ, ಪುಟ್ಟರಾಜು, ಬಂಬೂ ಮೋಹನ್, ಗಣೇಶ್‌ಪ್ರಸಾದ್, ಬನಶಂಕರಿಬಾಬು, ಮನೋಹರಗೌಡ, ಹನುಮಂತರಾಯಪ್ಪ, ಆಟೋ ಶಿವಕುಮಾರ್, ನಿಸರ್ಗರಮೇಶ್, ರಾಜಶೇಖರ್, ಗಂಗಾಧರ್, ವೆಂಕಟೇಶಾಚಾರ್, ಮಂಜುನಾಥ್, ಪ್ರತಾಪ್, ಹನುಮಂತರಾಜು, ಗಂಗೇಶ್, ಹೆಚ್.ಶಂಕರಪ್ಪ ಮೊದಲಾದವರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.