ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕಾರ್ಯವೈಖರಿ ಬಗ್ಗೆ, ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬ ನೀತಿ ಹಾಗೂ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿ ಮನಸ್ಸೋ ಇಚ್ಛೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕುಶಾಲನಗರ ತಾಲೂಕು ಬಿಜೆಪಿ ಕಾರ್ಯಕರ್ತರು ಪುರಸಭೆ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಕುಶಾಲನಗರ: ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕಾರ್ಯವೈಖರಿ ಬಗ್ಗೆ, ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬ ನೀತಿ ಹಾಗೂ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿ ಮನಸ್ಸೋ ಇಚ್ಛೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕುಶಾಲನಗರ ತಾಲೂಕು ಬಿಜೆಪಿ ಕಾರ್ಯಕರ್ತರು ಪುರಸಭೆ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿ ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲವು ಮಾಜಿ ಜನಪ್ರತಿನಿಧಿಗಳು ಪುರಸಭೆ ಕಚೇರಿಯಲ್ಲಿ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಪ್ರಮುಖರು, ಈ ಗಂಭೀರ ಮತ್ತು ಆಕ್ಷೇಪಣೆ ಹೊಂದಿರುವ ಕಚೇರಿಯ ಕಾರ್ಯ ವೈಖರಿ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನೂರಾರು ಕಾರ್ಯಕರ್ತರು ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಿ, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.ಕುಶಾಲನಗರ ಪುರಸಭೆಯಲ್ಲಿ ಬ್ರೋಕರ್ ಗಳ ಹಾವಳಿ ಅಧಿಕವಾಗಿದೆ. ಹಲವು ವರ್ಷಗಳಿಂದ ಮೀನು ಮಾರಾಟ ಮಾಡುತ್ತಿರುವ ಬಡ ಮೀನುಗಾರರ ಮೇಲೆ ಅಧಿಕಾರಿಗಳು ದೌರ್ಜನ್ಯ ಮಾಡುತ್ತಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಮತ್ತು ಪುರಸಭೆ ಆಡಳಿತ ಅಧಿಕಾರಿ ಗಳು ಆಗಮಿಸುವಂತೆ ಪಟ್ಟು ಹಿಡಿದರು. ಈ ಹಿಂದೆ ಪುರಸಭೆ ಸಿಬ್ಬಂದಿ ಮೇಲೆ ಮಧ್ಯವರ್ತಿಯಿಂದ ಹಲ್ಲೆ ನಡೆದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಘಟನೆ ಬಗ್ಗೆ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿತ್ತು ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.
ನೂತನವಾಗಿ ನಿರ್ಮಿಸಿರುವ ಪುರಸಭೆ ಕಚೇರಿ ಕಟ್ಟಡ ಸಂಪೂರ್ಣ ಕಳಪೆಯಾಗಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಬೇಕು. ಮೀನು ಮಾರಾಟ ವಿಷಯದಲ್ಲಿ ದಾಖಲಿಸಿರುವ ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮೀನು ಮಾರಾಟಗಾರರು ತಮ್ಮ ಮೀನಿನ ಬುಟ್ಟಿಯೊಂದಿಗೆ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.ಮಡಿಕೇರಿ ಉಪ ವಿಭಾಗ ಅಧಿಕಾರಿಗಳು ಹಾಗೂ ಪುರಸಭೆ ಆಡಳಿತ ಅಧಿಕಾ ನಿತಿನ್ ಚಿಕ್ಕಿ ಸ್ಥಳಕ್ಕೆ ಅವರು ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
ಬಿಜೆಪಿ ತಾಲೂಕು ಅಧ್ಯಕ್ಷ ಗೌತಮ್ ಗೌಡ, ಜಿಪಂ ಮಾಜಿ ಸದಸ್ಯರಾದ ಬಿ.ಬಿ. ಭಾರತೀಶ್, ಕುಶಾಲನಗರ ಬಿಜೆಪಿ ಅಧ್ಯಕ್ಷ ಎಂ.ಎಂ. ಚರಣ್, ಕಾರ್ಯದರ್ಶಿ ಮಧುಸೂದನ್, ಕೂಡು ಮಂಗಳೂರು ಗ್ರಾಪಂ ಮಾಜಿ ಅಧ್ಯಕ್ಷ ಭಾಸ್ಕರ್ ನಾಯಕ್, ಪ್ರಮುಖರಾದ ಚಂದ್ರಶೇಖರ್ ಹೇರೂರು, ಕೆ.ಜಿ. ಮನು, ಶಿವಾಜಿ, ಮಂಜುನಾಥ್, ನವನೀತ್, ಸುಮನ್, ದಿನೇಶ್, ಮಹಿಳಾ ಪ್ರಮುಖರಾದ ಕನಕ ಮತ್ತು ಬಿಜೆಪಿ ಪ್ರಮುಖರು, ಮೀನು ಮಾರಾಟಗಾರರು ಕಾರ್ಯಕರ್ತರು ಇದ್ದರು.ಕ್ಯಾಪ್ಷನ್: ಕುಶಾಲನಗರ ಪುರಸಭೆ ಆಡಳಿತ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು.