ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಸಾರ್ವಜನಿಕ ಸ್ಥಳದಲ್ಲಿ ನಿಯಮಬಾಹಿರವಾಗಿ ಅಳವಡಿಸಿದ್ದ ಫ್ಲೆಕ್ಸ್ ತೆರವುಗೊಳಿಸಿದ ಹಾವೇರಿ ನಗರಸಭೆ ಪೌರಕಾರ್ಮಿಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಖಂಡಿಸಿ ನಗರದಲ್ಲಿ ರಾಜ್ಯ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಸಂಘದ ಕಾರ್ಯಕರ್ತರು ಪೌರ ಕಾರ್ಮಿಕರ ಸಂರಕ್ಷಣಾ ಕಾಯಿದೆ ಜಾರಿಗೆ ಆಗ್ರಹಿಸಿ ಮಂಡ್ಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ಮಾತನಾಡಿ, ಈ ಪ್ರಕರಣದಲ್ಲಿ ಭಾಗಿಯಾದ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇದಲ್ಲದೇ, ರಾಜ್ಯದ ಉದ್ದಗಲಕ್ಕೂ ಪೌರ ನೌಕರರ ಮೇಲೆ ದಿನನಿತ್ಯ ಹಲ್ಲೆಗಳು ನಡೆಯುತ್ತಿದ್ದು ನೌಕರರಿಗೆ ಯಾವುದೆ ರಕ್ಷಣೆ ಇಲ್ಲವಾಗಿದೆ ಎಂದು ದೂರಿದರು.ನಗರದ ಸ್ವಚ್ಛತೆ, ಬೀದಿ ದೀಪದ ಅವ್ಯವಸ್ಥೆ, ನಿವೇಶನಗಳ ಅಳತೆ, ಪ್ಲಾಸ್ಟಿಕ್ ವಶ, ಅಕ್ರಮ ಕಟ್ಟಡ, ಅಕ್ರಮ ಫ್ಲೆಕ್ಸ್ ತೆರವು ಎಲ್ಲ ಪ್ರಕ್ರಿಯೆಗಳಲ್ಲಿ ಪೌರ ನೌಕರರನ್ನು ಮುಂಚೂಣಿಯಲ್ಲಿ ತೊಡಗಿಸಲಾಗುತ್ತದೆ. ಆದರೂ ಪೌರ ನೌಕರರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಹೊರ ಗುತ್ತಿಗೆ ಪೌರಕಾರ್ಮಿಕರ ಸಂಘದ ಮನವಿಯನ್ನು ಸರ್ಕಾರಕ್ಕೆ ಕಳುಹಿಸುತ್ತೇವೆ. ಹೊರಗುತ್ತಿಗೆ ಪೌರ ಕಾರ್ಮಿಕರಿಗೂ ಆರೋಗ್ಯ ವಿಮೆ ಜಾರಿಗೊಳಿಸುವಂತೆ ಸ್ಥಳದಲ್ಲಿದ್ದ ನಗರಸಭೆ ಆಯುಕ್ತೆ ಯು.ಪಿ.ಪಂಪಾಶ್ರೀ ಅವರಿಗೆ ಸೂಚನೆ ನೀಡಿದರು.ಪ್ರತಿಭಟನೆಯಲ್ಲಿ ಪರಿಸರ ಅಭಿಯಂತರ ರುದ್ರೇಗೌಡ, ನೇರಪಾವತಿ ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎನ್.ನಾಗರಾಜು ಕಾಯಂ ಪೌರಕಾರ್ಮಿಕರ ಸಂಘದ ಮುತ್ತಾಲಯ್ಯ, ನಂಜುಂಡ, ಮಹದೇವ, ರಾಜೇಶ್, ಶಿವು,ಲೋಕನಾಥ್ ಇತರರಿದ್ದರು.
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆನಾಗಮಂಗಲ:
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಜೂ.13ರ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್ ತಿಳಿಸಿದ್ದಾರೆ.ಶುಕ್ರವಾರ ಬೆಳಗ್ಗೆ 9.30ಕ್ಕೆ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ರೈತ ಉತ್ಪಾದಕ ಸಂಸ್ಥೆ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ, ತಾಲೂಕಿನ ಕರಡಹಳ್ಳಿಯಲ್ಲಿ ಪಶು ವೈದ್ಯ ಚಿಕಿತ್ಸಾಲಯ ಉದ್ಘಾಟನೆ, ನಂತರ ದೇವಲಾಪುರ ಹ್ಯಾಂಡ್ ಪೋಸ್ಟ್ ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಹೆಚ್ಚುವರಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು. ಬೆಳಗ್ಗೆ 11.15ಕ್ಕೆ ತಾಲೂಕಿನ ಅರೆಅಲ್ಪಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ. ಮಧ್ಯಾಹ್ನ 12ಗಂಟೆಗೆ ತಾಲೂಕಿನ ಅಲ್ಪಹಳ್ಳಿಯಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತ ಉತ್ಪಾದಕರ ಕಂಪನಿ ನೂತನ ಕಟ್ಟಡ ಭೂಮಿ ಪೂಜೆದೇವಲಾಪುರ: ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ದೇವಲಾಪುರ ಗ್ರಾಮದಲ್ಲಿ ಇಂದು ರೈತ ಉತ್ಪಾದಕರ ಕಂಪನಿ ನೂತನ ಕಟ್ಟಡದ ಗುದ್ದಲಿ ಪೂಜೆ ನೆರವೇರಿಸುವರು. ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಜಿಲ್ಲಾಹಾಲು ಒಕ್ಕೂಟದ ನಿರ್ದೇಶಕ ಅಪ್ಪಾಜಿಗೌಡ, ಕಾಂಗ್ರೆಸ್ ಮುಖಂಡ ಸ್ಟಾರ್ ಚಂದ್ರು,ರೈತ ಉತ್ಪಾದಕರ ಕಂಪನಿ ಅಧ್ಯಕ್ಷರೂ ಆದ ರಾಜ್ಯ ನಿರ್ದೇಶಕ ರಾಜೇಶ್ ಭಾಗವಹಿಸಲಿದ್ದಾರೆ.