ನದಿಯಲ್ಲಿ ನೀರು ಹರಿಸುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌

ಮುನಿರಾಬಾದ್: ಮಕರ ಸಂಕ್ರಮಣದ ದಿನದಂದು ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಸ್ಥಾನಕ್ಕೆ ಲಕ್ಷಕ್ಕೂ ಅಧಿಕ ಜನ ಭಕ್ತರು ಆಗಮಿಸಿ ದೇವಿಯ ದರ್ಶನ ಭಾಗ್ಯ ಪಡೆದರು.

ಸುಮಾರು ಮೂವತ್ತು ಸಾವಿರಕ್ಕೂ ಅಧಿಕ ಜನ ಭಕ್ತರು ಪವಿತ್ರ ತುಂಗಭದ್ರಾ ನದಿಯಲ್ಲಿ ಮಕರ ಸಂಕ್ರಮಣ ಪ್ರಯುಕ್ತ ಪುಣ್ಯ ಸ್ನಾನ ಮಾಡಿದರು.

ನದಿಯಲ್ಲಿ ಪುಣ್ಯಸ್ನಾನ ಮಾಡುವ ಭಕ್ತರ ಅನುಕೂಲಕ್ಕಾಗಿ ತುಂಗಭದ್ರಾ ಜಲಾಶಯದಿಂದ ಬುಧವಾರ ಸಂಜೆಯಿಂದ ನೀರು ಹರಿಸಲಾಯಿತು ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶರಾವ್‌ ಪತ್ರಿಕೆಗೆ ತಿಳಿಸಿದ್ದಾರೆ.

ನದಿಯಲ್ಲಿ ನೀರು ಹರಿಸುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಮಕರ ಸಂಕ್ರಮಣದ ಪ್ರಯುಕ್ತ ಹುಲಿಗೆಮ್ಮದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

ಹುಲಿಗೆಮ್ಮದೇವಿ ದರ್ಶನ ಪಡೆಯಲು ಬಂದ ಬಹುತೇಕ ಭಕ್ತರು ಮನೆಯಿಂದ ಬುತ್ತಿ ಕಟ್ಟಿಕೊಂಡು ಬಂದು ಅಮ್ಮನವರ ದರ್ಶನ ಮಾಡಿದ ನಂತರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಕುಳಿತು ಭೋಜನ ಸವಿದರು.