ಸಾರಾಂಶ
ಕನ್ನಡ್ರಪ್ರಭ ವಾರ್ತೆ ಚಾಮರಾಜನಗರ
ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಸರ್ಕಾರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೂ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಮಾತುಕೊಟ್ಟಂತೆ ಸರ್ಕಾರಿ ಉದ್ಯೋಗವನ್ನು ಮತ್ತು 25 ಲಕ್ಷ ರು. ಪರಿಹಾರ ನೀಡಬೇಕೆಂದು ಒತ್ತಾಯಿಸಿ ಜಿಲ್ಲೆಯ ಪ್ರಗತಿಪರ, ಕನ್ನಡಪರ, ರೈತಪರ ಹಾಗೂ ದಲಿತಪರ ಸಂಘಟನೆಗಳು ಒಗ್ಗೂಡಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಿದರು.ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಸಂತ್ರಸ್ತರಿಗೆ ಸೂಕ್ತ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ದುರಂತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕೆಂದು ಒತ್ತಾಯಿಸಿದರು.ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ 36 ಮಂದಿ ಕುಟುಂಬಗಳ ಪೈಕಿ ಸರ್ಕಾರ 13 ಕುಟುಂಬಗಳಿಗೆ ತಲಾ 5 ಲಕ್ಷ ರು. ಪರಿಹಾರ ಹಾಗೂ 11 ಕುಟುಂಬಗಳಿಗೆ ತಲಾ 2 ಲಕ್ಷ ರು.ಪರಿಹಾರ ನೀಡಿದೆ. ಉಳಿದ 12 ಕುಟುಂಬಗಳಿಗೆ ಪರಿಹಾರ ನೀಡುವುದಿರಲಿ ಅವರನ್ನು ಪರಿಹಾರದ ಪಟ್ಟಿಗೆ ಸೇರಿಸಿಲ್ಲ ಎಂದು ಆರೋಪಿಸಿದರು. ಇತ್ತೀಚಿಗೆ ಬೆಂಗಳೂರಿನಲ್ಲಿ ಆರ್.ಸಿ.ಬಿ. ವಿಜಯೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಕಾಲ್ತುಳಿತದಿಂದ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ತಲಾ 25 ಲಕ್ಷ ರು. ಪರಿಹಾರ ನೀಡಿದೆ. ಸರ್ಕಾರದ ಇಂತಹ ತಾರತಮ್ಯ ನೀತಿ ಅನ್ಯಾಯದ ಪರಮಾವಧಿಯಾಗಿದೆ ಎಂದರು.
ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಸಂತ್ರಸ್ತರ ಪರವಾಗಿ ಕಳೆದ 4 ವರ್ಷಗಳಿಂದ ಜಿಲ್ಲೆಯ ಹಲವಾರು ಸಂಘ ಸಂಸ್ಥೆಗಳು ಎಲ್ಲಾ ಹಂತದ ಹೋರಾಟಗಳನ್ನು ಮಾಡುತ್ತಾ ಬಂದಿವೆ. ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಗುಂಡ್ಲುಪೇಟೆಗೆ ಆಗಮಿಸಿದ್ದಾಗ ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಸಂತ್ರಸ್ತ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ಹಾಗೂ ಹೆಚ್ಚಿನ ಪರಿಹಾರ ನೀಡಲಾಗುವುದೆಂದು ಭರವಸೆ ನೀಡಿದ್ದರು. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದುರಂತ ನಡೆದ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದಾಗಲೂ ಸಹ ಇದೇ ರೀತಿಯ ಭರವಸೆಯನ್ನು ನೀಡಿದ್ದರು. ಆದರೆ ಇಲ್ಲಿಯವರೆವಿಗೂ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಸಂತ್ರಸ್ತರಿಗೆ ಘೋರ ಅನ್ಯಾಯ ಮಾಡಿದ್ದಾರೆ ಎಂದರು.ಬೆಂಗಳೂರಿನಲ್ಲಿ ಕಾಲ್ತುಳಿತದಿಂದ ಮೃತಪಟ್ಟ ಕುಟುಂಬವದರಿಗೆ ಒಂದು ರೀತಿಯ ಪರಿಹಾರ ಮತ್ತು ಚಾಮರಾಜನಗರದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ಮತ್ತೊಂದು ರೀತಿಯ ಪರಿಹಾರ ನೀಡುವುದು ಸರ್ಕಾರದ ಮಲತಾಯಿ ಧೋರಣೆಯಾಗಿದೆ ಎಂದರು. 15 ದಿನಗಳಲ್ಲಿ ಮೇಲ್ಕಂಡ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಎಲ್ಲಾ ಸಂಘಟನೆಗಳಿಂದ ದೊಡ್ಡಮಟ್ಟದ ಉಗ್ರಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.ವಾರದೊಳಗೆ ಸಭೆ ಕರೆದು ಚರ್ಚೆ ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಇನ್ನು ಒಂದು ವಾರದೊಳಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಪ್ರತಿಭಟನೆಯಲ್ಲಿ ಅಬ್ರಾರ್ ಅಹಮ್ಮದ್, ಸಿ.ಎಂ.ಕೃಷ್ಣ ಮೂರ್ತಿ, ಕೆ. ವೆಂಕಟರಾಜು, ಮಾಡ್ರಹಳ್ಳಿ ಮಹದೇವಪ್ಪ, , ಮಹೇಶ್ ಕುಮಾರ್, ಹೊನ್ನೂರು ಪ್ರಕಾಶ್, ನಯಾಜ್ವುಲ್ಲಾ, ನಿಜಧ್ವನಿ ಗೋವಿಂದರಾಜು, ಚಾ. ರಂ. ಶ್ರೀನಿವಾಸ್ಗೌಡ, ಸುರೇಶ್ ವಾಜಪೇಯಿ, ಬ್ರಿಜೇಶ್ ಒಲಿವೇರಾ, ಮಹೇಶ್ ಗಾಳೀಪುರ, ಮಹೇಶ್,ಡಾ. ಗುರುಪ್ರಸಾದ್, ಹಾಲಿನ ನಾಗರಾಜ್, ಬೆಳ್ಳಿಯಪ್ಪ, ಕಂದಹಳ್ಳಿ ನಾರಾಯಣ, ಸಮೀವುಲ್ಲಾ, ಆಕ್ಸಿಜನ್ ದುರಂತದ ಸಂತ್ರಸ್ತರಾದ ನಾಗರತ್ನ, ಸುಶೀಲ, ಸೌಮ್ಯ, ರಘು, ಶಿವಣ್ಣ, ಲಕ್ಷ್ಮಿ, ಪುಷ್ಪ, ಸುನೀತಾ ಇತರರು ಭಾಗವಹಿಸಿದ್ದರು.