ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

ಕನ್ನಡಪ್ರಭ ವಾರ್ತೆ ರಾಮನಗರ

ಚಿತ್ರಕಲೆ ಸೃಜನಶೀಲತೆ ಅರಳಿಸುವ ಕಲೆ. ಕ್ರಿಯಾಶೀಲತೆ ರೂಢಿಸಿಕೊಂಡು ಕೌಶಲ್ಯ ಸಾಧಿಸಿದರೆ ಕಲೆಯಿಂದಲೇ ಉತ್ತಮ ಭವಿಷ್ಯ ಕಂಡುಕೊಳ್ಳಲು ಸಾಧ್ಯವಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಶ್ರೀ ಅಪ್ರಮೇಯ ಡೆವಲಪರ್ಸ್ ಮತ್ತು ಪ್ರಮೋಟರ್ಸ್, ಗಣೇಶ್ ಜ್ಯೂಯಲರರ್ಸ್ , ಆದರ್ಶ ಆಂಗ್ಲ ಪ್ರೌಢಶಾಲೆ, ಹೋಲಿ ಕ್ರೆಸಂಟ್ ಆಂಗ್ಲ ಶಾಲೆ , ನ್ಯೂ ಎಕ್ಸ್ ಪರ್ಟ್ ಕಾಲೇಜು, ರೋಟರಿ ಸಿಲ್ಕ್ ಸಿಟಿ, ಬಿಡದಿ ಭರತ್ ಮೆಲ್ಟಿಸ್ಪೇಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಗೆ ಸಾಲುಮರದ ತಿಮ್ಮಕ್ಕ ರೇಖಾ ಚಿತ್ರಕ್ಕೆ ಮಿಂಚು ಪೌಡರ್ ಎರಚುವ ಮೂಲಕ ವಿಭಿನ್ನವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

ಚಿತ್ರಕಲೆಯಲ್ಲಿಯೂ ಪ್ರಖ್ಯಾತಿ ಪಡೆದ ಕಲಾವಿದರು ಇದ್ದಾರೆ. ಬದುಕು ಕಟ್ಟಿಕೊಳ್ಳಲು, ಉನ್ನತ ಸ್ಥಾನ ಅಲಂಕರಿಸಲು ಇಂತಹ ಕಾರ್ಯಕ್ರಮಗಳು ಮುಖ್ಯವಾಗಿದೆ. ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ತಮ್ಮ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಂಡು ಅತ್ತ್ಯುನ್ನತ ಸಾಧನೆ ಮಾಡುವ ಮೂಲಕ ತಾವು ಓದಿದ ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತರಬೇಕು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದ ಪರಿಣಾಮ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವ ವೇಳೆ ಹಿಂಜರಿಕೆ ಮತ್ತು ಆತಂಕ ಪಡಬೇಕಾದ ಅನಿವಾರ್ಯತೆ ಕಂಡು ಬರುತ್ತಿದೆ. ಶಿಕ್ಷಕರು ಹಾಗೂ ಪೋಷಕರು ಮಕ್ಕಳನ್ನು ಕೇವಲ ಅಂಕಗಳಿಕೆಗಷ್ಟೇ ಸೀಮಿತಗೊಳಿಸದೆ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಲು ಪ್ರೇರೇಪಿಸಬೇಕು ಎಂದರು.

ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ರಾಜ್ಯಾದ್ಯಂತ ಪ್ರತಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆ. ಇದರಿಂದ ಮಕ್ಕಳಲ್ಲಿ

ಪರಿಸರ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ವೇದಿಕೆ ಸಿಕ್ಕಿದಂತಾಗುತ್ತದೆ. ಭವಿಷ್ಯದ ಪ್ರಜೆಗಳಾಗಿರುವ ಮಕ್ಕಳಲ್ಲಿ ಪರಿಸರ ಕುರಿತು ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಆಯೋಜನೆಗೊಳ್ಳಬೇಕಿದೆ ಎಂದು ತಿಳಿಸಿದರು.

ವಿವಿಧ ಶಾಲೆಗಳ ಮಕ್ಕಳು ಆಸಕ್ತಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದೀರಿ. ಇಂತಹ ಸ್ಪರ್ಧೆಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು. ರಾಮೋತ್ಸವದಲ್ಲಿ ಶಾಲಾ ಮಕ್ಕಳಿಗೆ ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜನೆ ಮಾಡಿದ್ದೇವೆ. ಆಟ ಮತ್ತು ಪಾಠದಲ್ಲಿ ಸಮಾನವಾಗಿ ಇರಬೇಕು. ಆಟ ದೈಹಿಕವಾಗಿ ಶಕ್ತಿ ತುಂಬಿದರೆ, ಪಾಠ ಜ್ಞಾನಾರ್ಜನೆ ಹೆಚ್ಚಿಸುತ್ತದೆ.ಆರೋಗ್ಯಕರ ಮನಸ್ಸು ಆರೋಗ್ಯಕರವಾದ ಶರೀರದಲ್ಲಿ ಇದ್ದಾಗ ಮಾತ್ರ ಶಕ್ತಿಯುತವಾಗಿರಲು ಸಾಧ್ಯ ಎಂದು ಇಕ್ಬಾಲ್ ಹುಸೇನ್ ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ರಾಜು, ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜು, ರಾ-ಚ ಪ್ರಾಧಿಕಾರ ಮಾಜಿ ಅಧ್ಯಕ್ಷ ಸಿಎನ್ ಆರ್ ವೆಂಕಟೇಶ್ , ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಯಣ್ಣ, ಬಗರ್ ಹುಕುಂ ಸಾಗುವಳಿ ಸದಸ್ಯ ರವಿ, ನಗರಸಭಾ ಸದಸ್ಯೆ ಗಿರಿಜಮ್ಮ, ಬನ್ನಿಕುಪ್ಪೆ ಗ್ರಾಪಂ ಮಾಜಿ ಅಧ್ಯಕ್ಷ ಹೇಮಂತ್ ಉಪಸ್ಥಿತರಿದ್ದರು.

13ಕೆಆರ್ ಎಂಎನ್ 3.ಜೆಪಿಜಿ

ರಾಮನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧಾ ಕಾರ್ಯಕ್ರಮಕ್ಕೆ ಶಾಸಕ ಇಕ್ಬಾಲ್ ಹುಸೇನ್ ರವರು ಸಾಲುಮರದ ತಿಮ್ಮಕ್ಕ ರೇಖಾ ಚಿತ್ರಕ್ಕೆ ಮಿಂಚು ಪೌಡರ್ ಎರಚುವ ಮೂಲಕ ವಿಭಿನ್ನವಾಗಿ ಚಾಲನೆ ನೀಡಿದರು.