ಸಾರಾಂಶ
ವಿಧಾನ ಪರಿಷತ್ತು : ಬೆಂಗಳೂರು ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶದ ‘ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ-2025’ಕ್ಕೆ ಪ್ರತಿಪಕ್ಷಗಳ ವಿರೋಧ ಮತ್ತು ಸಭಾತ್ಯಾಗದ ನಡುವೆಯೇ ಪರಿಷತ್ನಲ್ಲಿ ಅನುಮೋದನೆ ಪಡೆಯಲಾಯಿತು.
ಸುಗ್ರೀವಾಜ್ಞೆ ರೂಪದಲ್ಲಿದ್ದ ಮಸೂದೆಯನ್ನು ಕೆಲ ಸಣ್ಣ ತಿದ್ದುಪಡಿಗಳೊಂದಿಗೆ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸದನದಲ್ಲಿ ಮಂಡಿಸಿದರು. ಬೆಂಗಳೂರು ಅರಮನೆ ಮೈದಾನದ 15.39 ಎಕರೆ ಭೂಮಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಸಲು ಮೈಸೂರು ರಾಜಮನೆತನದ ವಾರಸುದಾರರಿಗೆ ₹3 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ನೀಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಆದರೆ, ಅಷ್ಟು ದುಬಾರಿ ಮೌಲ್ಯದ ಟಿಡಿಆರ್ ನೀಡುವುದರಿಂದ ಸರ್ಕಾರದ ಆರ್ಥಿಕತೆ ಹಾಗೂ ಭವಿಷ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬುದನ್ನು ಸದನಕ್ಕೆ ಮನವರಿಕೆ ಮಾಡಿದರು.
ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ ಮನೆತನದವರನ್ನು ಕರೆದು ಸಹಕಾರ ಕೇಳಬೇಕಿತ್ತು. ಇಲ್ಲವೇ ನ್ಯಾಯಾಲಯಕ್ಕೆ ನಿಗದಿತ ₹3 ಸಾವಿರ ಕೋಟಿ ಮೊತ್ತದಲ್ಲಿ ಕಡಿಮೆ ಮಾಡುವಂತೆ ಮತ್ತೆ ಮೇಲ್ಮನವಿ ಸಲ್ಲಿಸಬೇಕಿತ್ತು. ಈ ಸಮಸ್ಯೆಗೆ ನ್ಯಾಯಾಲಯದಲ್ಲೇ ಪರಿಹಾರ ಕಂಡುಕೊಳ್ಳುವುದು ಒಳಿತು. ಇಲ್ಲದಿದ್ದರೆ ರಾಜಮನೆತನದ ವಿರುದ್ಧ ಸರ್ಕಾರ ಇದೆ ಎಂಬ ಭಾವನೆ ಜನರಲ್ಲಿ ಬರಲಿದೆ. ಅದನ್ನು ಬಿಟ್ಟು ಒಂದು ಕುಟುಂಬದ ವಿರುದ್ಧ ವಿಧೇಯಕ ತರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧಿಸಿದರು.
ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಸದಸ್ಯ ಸಿ.ಟಿ.ರವಿ, ಹಣಮಂತ ನಿರಾಣಿ ಸೇರಿದಂತೆ ಇತರೆ ಸದಸ್ಯರು, ಇಡೀ ಬೆಂಗಳೂರು ನಗರಕ್ಕೆ ಅನ್ವಯವಾಗುವಂತೆ ಸುಗ್ರೀವಾಜ್ಞೆ ತರಬೇಕಿತ್ತು. ಅದನ್ನು ಬಿಟ್ಟು ರಾಜಮನೆತನಕ್ಕೆ ಮಾತ್ರ ತಂದರೆ ತಪ್ಪು ಕಲ್ಪನೆ ಬರುತ್ತದೆ. ಈ ಕುರಿತು ರಾಜ ಮನೆತನದವರೊಂದಿಗೆ ಮಾತುಕತೆ ನಡೆಸಿದ್ದರೆ ಇಷ್ಟು ಸಮಸ್ಯೆಯೇ ಆಗುತ್ತಿರಲಿಲ್ಲ. ಯಾಕೆ ಮಾಡಲಿಲ್ಲ. ಈ ವಿಧೇಯಕ ಪಕ್ಷಪಾತದಿಂದ ಕೂಡಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ನಂತರ ವಿರೋಧ ಪಕ್ಷಗಳ ಸದಸ್ಯರು ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿ, ಧಿಕ್ಕಾರ ಕೂಗುತ್ತಾ ಸಭಾತ್ಯಾಗ ನಡೆಸಿದರು. ಬಳಿಕ, ಧ್ವನಿಮತದ ಮೂಲಕ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.