ಸಾರಾಂಶ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಎಚ್.ಎಂ.ರೇವಣ್ಣ ಹೇಳಿಕೆ । ಜಿಲ್ಲಾ ಸಮಿತಿಯ ನೂತನ ಕಚೇರಿ ಉದ್ಘಾಟನೆ ಸಮಾರಂಭ
ಕನ್ನಡಪ್ರಭ ವಾರ್ತೆ ಚಿತ್ರದುರ್ಗಪಂಚ ಗ್ಯಾರಂಜಿ ಅನುಷ್ಥಾನ ಚುನಾವಣೆ ಗಿಮಿಕ್ ಅಲ್ಲ.ರಾಜ್ಯದ ಜನರ ಅಭಿವೃದ್ಧಿ ದೂರದೃಷ್ಠಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಈ ಯೋಜನೆಗಳು ನಿಲ್ಲುವುದಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.
ಚಿತ್ರದುರ್ಗದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಸಮಿತಿಯ ನೂತನ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮ ದೇಶದ ಬಡವರ ಜೀವನದಲ್ಲಿ ಸಾಕಷ್ಟು ಬದಲಾವಣೆ ತಂದಿತು. ಇವರ ನೇತೃತ್ವದಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ರಕ್ತಕ್ರಾಂತಿ ಇಲ್ಲದೆಯೇ ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಜಾರಿ ಮಾಡಿ, ಭೂ ರಹಿತರಿಗೆ ಭೂಮಿ ಹಕ್ಕು ದೊರಕಿಸಿಕೊಟ್ಟು ಶೋಷಿತರ ನಾಯಕರಾದರೆಂದರು.ಸಿದ್ಧರಾಮಯ್ಯ ಎರಡನೇ ಬಾರಿ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಶಕ್ತಿ ಯೋಜನೆಯಡಿ 377 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತವಾಗಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ರು.9,124 ಕೋಟಿ ಖರ್ಚು ಮಾಡಿದೆ. ಗೃಹಲಕ್ಷ್ಮೀ ಯೋಜನೆಯಡಿ 1.2 ಕೋಟಿ ಮಹಿಳೆಯರು ನೊಂದಣಿಯಾಗಿದ್ದು, ಇವರಿಗೆ ಪ್ರತಿ ಮಾಹೆ ರು.2000 ಹಣವನ್ನು ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಇದಕ್ಕಾಗಿ 35,608 ಕೋಟಿ ರು. ಹಣ ಬಿಡುಗಡೆ ಮಾಡಲಾಗಿದೆ. ಗೃಹಜ್ಯೋತಿ ರಾಜ್ಯದ ಎಲ್ಲ ಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದಕ್ಕಾಗಿ 11,810 ಕೋಟಿ ರು. ವ್ಯಯಿಸಲಾಗಿದೆ. ಯುವನಿಧಿ ಯೋಜನೆಯಡಿ 2.14 ಲಕ್ಷ ಫಲಾನುಭವಿಗಳಿಗೆ 222 ಕೋಟಿ ರು. ಹಣ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಪ್ರಚಾರ ಸಂದರ್ಭದಲ್ಲಿ ವಿರೋಧ ಪಕ್ಷದವರು ಗೇಲಿ ಮಾಡಿದ್ದರು. ಆದರೆ ರಾಜ್ಯದ ಜನತೆ ನಮ್ಮ ಪಕ್ಷವನ್ನು ನಂಬಿ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದರು. ಅಧಿಕಾರಕ್ಕೆ ಬಂದ 3 ತಿಂಗಳ ಒಳಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು ಎಂದರು.ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ವಾರ್ಷಿಕವಾಗಿ ರು.60,000 ಕೋಟಿ ಖರ್ಚು ಮಾಡುತ್ತಿದೆ. ಪಕ್ಷಭೇದವಿಲ್ಲದೇ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ವಾರ್ಷಿಕವಾಗಿ 240 ಕೋಟಿ ರು.ಗೂ ಅಧಿಕ, ಅಂದರೆ ಪ್ರತಿ ತಿಂಗಳಿಗೆ 20 ಕೋಟಿ ರು.ನಷ್ಟು ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ ಎಂದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ.ಎನ್.ಹೆಗಡೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಿ.ಎನ್.ಮೈಲಾರಪ್ಪ, ಜಿ.ಟಿ.ಬಾಬುರೆಡ್ಡಿ, ಖಾದಿ ಜೆ.ರಮೇಶ್, ಬಿ.ಟಿ.ನಿರಂಜನ ಮೂರ್ತಿ, ಸದಸ್ಯರಾದ ನಾಗೇಶ್ ರೆಡ್ಡಿ, ಅಬ್ದುಲ್ಲಾ ಶಾ ವಲಿ, ಟಿ.ಕೃಷ್ಣಮೂರ್ತಿ, ನಾಗರಾಜ್, ಹೇಮಂತ ಯಾದವ್, ಮಹಮದ್ ಇಸ್ಮಾಯಿಲ್, ಎ.ಲೋಹಿತ್, ಕೆ.ಎ.ತಿಪ್ಪೇಶ್, ಎಲ್.ಇಂದಿರಾ, ಪಿ.ಆರ್.ಶಿವಕುಮಾರ್, ಮಧುಪಾಲೇಗೌಡ, ಟಿ.ಪ್ರಕಾಶ್, ಚನ್ನಕೇಶವ, ಜಿ.ಪಿ.ಸುರೇಶ್ ಸೇರಿದಂತೆ ತಾಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷರು ಹಾಜರಿದ್ದರು.