ಸಾರಾಂಶ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆ,
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುರಾಜ್ಯ ಸರ್ಕಾರದ ಮಹತ್ವ ಪೂರ್ಣ ಪಂಚಗ್ಯಾರಂಟಿ ಯೋಜನೆ, ಸಾಮಾನ್ಯ ಮತ್ತು ಅಸಹಾಯಕ ಕುಟುಂಬಗಳಿಗೆ ವರದಾನವಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದ್ದಾರೆ.ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಆಯೋಜಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನ್ನ ಭಾಗ್ಯ ಯೋಜನೆಯಡಿ ಜುಲೈ 2023 ರಿಂದ ಜುಲೈ 2024 ರವರೆಗೆ ಜಿಲ್ಲೆಯಲ್ಲಿ ಒಟ್ಟು 7,99,787 ಫಲಾನುಭವಿಗಳಿಗೆ ಪ್ರತಿ ತಿಂಗಳು 13 ಕೋಟಿಯಂತೆ ಒಟ್ಟು ಈ ವರೆಗೂ ₹165 ಕೋಟಿ ಸಹಾಯಧನ ನೀಡಲಾಗಿದ್ದು, ಶೇ.98 ರಷ್ಟು ಪ್ರಗತಿ ಆಗಿದೆ. ಶಕ್ತಿ ಯೋಜನೆಯಲ್ಲಿ ಸಾರಿಗೆ ಇಲಾಖೆ ಬಸ್ಗಳಲ್ಲಿ ಜಿಲ್ಲೆಯಲ್ಲಿ ಇದುವರೆಗೂ 2,90,64,758 ಮಹಿಳೆಯರು ಪ್ರಯಾಣ ಮಾಡಿದ್ದು ₹12 ಕೋಟಿ ಈ ಯೋಜನೆ ಲಾಭ ಪಡೆದಿದ್ದಾರೆ ಎಂದು ಹೇಳಿದರು.ಗೃಹ ಜ್ಯೋತಿ ಆಗಸ್ಟ್ 2023 ರಿಂದ ಸೆಪ್ಟೆಂಬರ್ 2024 ರವರೆಗೆ 30,48,250 ಮನೆಗಳಿಗೆ ಉಚಿತ ಯೋಜನೆಯಿಂದ ₹147 ಕೋಟಿ ಒದಗಿಸಲಾಗಿದ್ದು, 2,14,120 ಮನೆಗಳಿಗೆ ಜೀರೋ ಬಿಲ್ ಸೌಲಭ್ಯ ದೊರೆತಿದೆ ಎಂದ ಅವರು, ಆಗಸ್ಟ್ 2023 ರಿಂದ ಆಗಸ್ಟ್ 2024 ರವರೆಗೆ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೂ ₹657 ಕೋಟಿ ಸರ್ಕಾರದಿಂದ ಫಲಾನುಭವಿಗಳ 2,68,948 ಆಕೌಂಟ್ಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ನೊಂದಾಯಿಸಿರುವ ಎಲ್ಲಾ ಫಲಾನುಭವಿಗಳಿಗೂ ಈ ಯೋಜನೆ ಲಾಭ ಪಡೆಯಲು ಕೆಲ ತಾಂತ್ರಿಕ ಸಮಸ್ಯೆ ನಿವಾರಿಸಿ ಶೇಕಡ ನೂರಕ್ಕೆ ನೂರು ಪ್ರಗತಿ ಸಾಧಿಸಲು ಕ್ರಮಕೈಗೊಳ್ಳಲಾಗಿದೆ. ಯುವ ನಿಧಿ ಯೋಜನೆಯಡಿ ಜಿಲ್ಲೆಯ 8457 ನಿರುದ್ಯೋಗಿಗಳು ನೋಂದಾಯಿಸಿದ್ದು, ₹53 ಕೋಟಿ ಫಲಾನುಭವಿಗಳಿಗೆ ಜಮೆ ಮಾಡಲಾಗಿದೆ ಎಂದರು.ಮುಂದಿನ ದಿನಗಳಲ್ಲಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೊಂದು ಗ್ಯಾರಂಟಿ ಯೋಜನೆ ಒಂದೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಆದಾಲತ್ಗಳನ್ನು ಮಾಡುವ ಮೂಲಕ ಸರ್ಕಾರ ಯೋಜನೆಗಳನ್ನು ಎಲ್ಲ ಮನೆ ಕುಟುಂಬಗಳಿಗೆ ದೊರಕಿಸುವ ಪ್ರಯತ್ನ ಮಾಡಲಾ ಗುವುದು. ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಗಾರ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ಸರ್ಕಾರ ಜಾರಿಗೆ ತಂದಿರುವ ಉಪಯುಕ್ತ ಯೋಜನೆಗಳ ಮಾಹಿತಿಯನ್ನು ಜಿಲ್ಲೆಯ ಪ್ರತಿ ಹಳ್ಳಿಗಳ ಪ್ರತಿ ಮನೆ ಮನೆಗಳಿಗೆ ತಿಳಿಸುವುದು ಹಾಗೂ ಅರಿವು ಮೂಡಿಸುವ ಕೆಲಸ ಅನುಷ್ಠಾನ ಸಮಿತಿ ಸದಸ್ಯರು ಸೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಲ್ಲಾ ಜನಪ್ರತಿನಿಧಿಗಳು ಸೇರಿ ಗ್ರಾಮ ಸಭೆಗಳ ಮೂಲಕ ತಿಳಿಸಬೇಕು ಎಂದರು.
ಸಭೆಯಲ್ಲಿ ಜಿಪಂ ಯೋಜನಾಧಿಕಾರಿ ರಾಜಗೋಪಾಲ್, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷರಾದ ಹೇಮಾವತಿ, ಅವ್ವಳ್ಳಿ ಕೃಷ್ಣೇಗೌಡ ಎಸ್.ಎನ್. ಮಂಜುನಾಥ್, ವಿವಿಧ ತಾಲೂಕು ಅಧ್ಯಕ್ಷ ಮಲ್ಲೇಶ್, ಎನ್.ಜಿ. ರಮೇಶ್, ಚಂದ್ರಮ್ಮ, ಸದಸ್ಯರಾದ ಜೇಮ್ಸ್ ಡಿಸೋಜ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. 6 ಕೆಸಿಕೆಎಂ 4ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆ ನಡೆಯಿತು. ಜಿಪಂ ಸಿಇಒ ಕೀರ್ತನಾ, ರಾಜಗೋಪಾಲ್ ಇದ್ದರು.