2ಎ ಮೀಸಲಾತಿಗಾಗಿ ಸಮಾಜ ನಿರಂತರ ಹೋರಾಟ ನಡೆಸುತ್ತಿದೆ. ಜಯಮೃತ್ಯುಂಜಯ ಸ್ವಾಮೀಜಿ ಮುಖ್ಯಮಂತ್ರಿ ಭೇಟಿಯಾಗಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಮನವಿ ಮಾಡಿದ್ದಾರೆಯೇ ಹೊರತು, ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಎಲ್ಲಿಯೂ ಹೇಳಿಲ್ಲ.

ಕುಂದಗೋಳ:

ಕೂಡಲಸಂಗಮದ ಶ್ರೀಜಯಮೃತ್ಯುಂಜಯ ಶ್ರೀಗಳ ವಿರುದ್ಧ ಸಚಿವ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ಮಾತನಾಡಿ ತೇಜೋವಧೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ತಾಲೂಕು ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದ ಎದುರು ಜಮಾಯಿಸಿದ ಸಮಾಜದ ಮುಖಂಡರು, ಕಾಶಪ್ಪನವರ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿ ದಹಿಸಿದರು. ಇದರಿಂದ ಕೆಲಕಾಲ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು.

ತಾಲೂಕು ಅಧ್ಯಕ್ಷ ನಾಗರಾಜ ದೇಶಪಾಂಡೆ ಮಾತನಾಡಿ, 2ಎ ಮೀಸಲಾತಿಗಾಗಿ ಸಮಾಜ ನಿರಂತರ ಹೋರಾಟ ನಡೆಸುತ್ತಿದೆ. ಜಯಮೃತ್ಯುಂಜಯ ಸ್ವಾಮೀಜಿ ಮುಖ್ಯಮಂತ್ರಿ ಭೇಟಿಯಾಗಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಮನವಿ ಮಾಡಿದ್ದಾರೆಯೇ ಹೊರತು, ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಎಲ್ಲಿಯೂ ಹೇಳಿಲ್ಲ. ಹೀಗಿದ್ದರೂ ಶ್ರೀಗಳ ವಿರುದ್ಧ ಅವಾಚ್ಯವಾಗಿ ಮಾತನಾಡಿರುವುದು ಅಸಂಸ್ಕೃತ ನಡವಳಿಕೆ ಎಂದು ಆರೋಪಿಸಿದರು. ಕಾಶಪ್ಪನವರ ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲವಾದರೆ ಹುನಗುಂದ ಕ್ಷೇತ್ರ ಸೇರಿದಂತೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಬಸವರಾಜ ನಾವಳ್ಳಿ ಸೇರಿದಂತೆ ಹಲವು ಮುಖಂಡರು ಕಾಶಪ್ಪನವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್.ವಿ. ರಾಮನಗೌಡ್ರ, ಮಲ್ಲಿಕಾರ್ಜುನ ಕುನ್ನೂರ, ರಘುನಾಥಗೌಡ ಕತ್ತಿ ಸೇರಿದಂತೆ ಸಮಾಜದ ನೂರಾರು ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.