ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ: ಸಚಿವ ಚಲುವರಾಯಸ್ವಾಮಿ

| Published : Jan 04 2025, 12:30 AM IST

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ: ಸಚಿವ ಚಲುವರಾಯಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಯಕ್ರಮದ ದಿನಾಂಕ, ಸಿದ್ಧತೆ ಮತ್ತು ರೂಪುರೇಷೆಗಳನ್ನು ವಿದೇಶ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿಗೆ ವಾಪಸ್ ಆದ ನಂತರ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು/ಮಂಡ್ಯ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆ ಮುಂದಾಗಿದೆ.

ಬೆಂಗಳೂರಿನ ಸರ್ಕಾರಿ ನಿವಾಸ 7 ಮಿನಿಸ್ಟರ್ ಕ್ವಾಟರ್ಸ್ ನಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ನೇತೃತ್ವದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರು, ಎಸ್.ಎಂ.ಕೃಷ್ಣ ಅವರ ಅಭಿಮಾನಿಗಳ ಜೊತೆಗಿನ ಶ್ರದ್ಧಾಂಜಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಭಾವ ನಮನ, ಗೀತ ನಮನ, ಚಿತ್ರ ನಮನ, ಪುಷ್ಪ ನಮನ ಹಾಗೂ ದೀಪ ನಮನ ಒಳಗೊಂಡಂತೆ ಐದು ರೂಪದಲ್ಲಿ ನಮನ ಸಲ್ಲಿಸಲು ಸಭೆಯಲ್ಲಿ ಚರ್ಚಿಸಲಾಯಿತು.

ಡಿಸಿಎಂ ಜೊತೆ ಚರ್ಚಿಸಿ ದಿನಾಂಕ ನಿಗದಿ:

ಸಚಿವ ಚಲುವರಾಯಸ್ವಾಮಿ ಮಾತನಾಡಿ, ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸುವ ಕುರಿತು ಜಿಲ್ಲೆಯ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ದಿವ್ಯ ಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯ ಈ ಕಾರ್ಯಕ್ರಮಕ್ಕೆ ಸಂಚಾಲಕರನ್ನಾಗಿ ಶಾಸಕರಾದ ದಿನೇಶ್ ಗೂಳಿಗೌಡ ಅವರನ್ನು ನಿಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದ ದಿನಾಂಕ, ಸಿದ್ಧತೆ ಮತ್ತು ರೂಪುರೇಷೆಗಳನ್ನು ವಿದೇಶ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿಗೆ ವಾಪಸ್ ಆದ ನಂತರ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ಶಾಸಕ ಪಿ.ರವಿಕುಮಾರ್, ವಿಧಾನಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ಮಾಜಿ ಶಾಸಕರಾದ ಶಿವರಾಮೇಗೌಡ, ಕೆ.ಬಿ.ಚಂದ್ರಶೇಖರ್, ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಹಿರಿಯ ಐಪಿಎಸ್ ಅಧಿಕಾರಿ ರವಿಕಾಂತೇಗೌಡ, ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಯಪ್ರಕಾಶ್ ಗೌಡ, ಸತ್ಯಾನಂದ, ಎಚ್.ಬಿ.ರಾಮು, ಅಮರನಾಥಗೌಡ, ಎನ್.ಎಸ್.ರಮೇಶ್ ಸೇರಿದಂತೆ ಜಿಲ್ಲೆಯ ಹಲವು ಮುಖಂಡರು ಉಪಸ್ಥಿತರಿದ್ದರು.