ಪಡಿತರ ಅಕ್ಕಿಯ ವಿತರಣೆಯಲ್ಲಿ ಪದೇ ಪದೇ ಉಂಟಾಗುತ್ತಿರುವ ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ.

ಬಂಟ್ವಾಳ: ಪಡಿತರ ಅಕ್ಕಿಯ ವಿತರಣೆಯಲ್ಲಿ ಪದೇ ಪದೇ ಉಂಟಾಗುತ್ತಿರುವ ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ.ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿರುವ ಅವರು, ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರು ಸಕಾಲದಲ್ಲಿ ಪಡಿತರ ಅಕ್ಕಿ ಪಡೆಯಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಸರ್ವರ್ ಸಮಸ್ಯೆ ಪದೇ ಪದೇ ಕಾಣಿಸಿಕೊಳ್ಳುತ್ತಿರುವುದರಿಂದ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ದಿನಪೂರ್ತಿ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವೆಡೆ ಬೆಳಗ್ಗೆಯಿಂದ ರಾತ್ರಿ ತನಕ ಕಾದರೂ ಸರ್ವರ್ ಸಮಸ್ಯೆಯಿಂದ ಅಕ್ಕಿ ದೊರೆಯದೆ ಗ್ರಾಹಕರು ಬರಿಗೈಯಲ್ಲಿ ಮನೆಗೆ ಮರಳುತ್ತಿರುವ ಘಟನೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.ಇದಕ್ಕೆ ಸಮರ್ಪಕ ಹಾಗೂ ಶಾಶ್ವತ ಪರಿಹಾರ ಕಂಡುಹಿಡಿಯುವ ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದಾರೆ.ಈ ಹಿಂದೆ ಮೇ ತಿಂಗಳಲ್ಲಿಯೂ ಇದೇ ರೀತಿಯ ಸರ್ವರ್ ಸಮಸ್ಯೆ ಉಂಟಾಗಿತ್ತು. ಇದೀಗ ಮತ್ತೆ ಸಮಸ್ಯೆ ಮರುಕಳಿಸಿರುವುದು ಪಡಿತರ ಚೀಟಿದಾರರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ, ಆಗಸ್ಟ್ ತಿಂಗಳ ಪಡಿತರ ಅಕ್ಕಿಯನ್ನು ಸೆಪ್ಟೆಂಬರ್ ಮೊದಲ ವಾರದವರೆಗೂ ವಿತರಿಸಲು ಸೂಕ್ತ ಆದೇಶ ಹೊರಡಿಸಬೇಕು. ಅಲ್ಲದೆ, ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಯಾವುದೇ ತಾಂತ್ರಿಕ ಅಡಚಣೆಯಿಲ್ಲದೆ ಪ್ರತಿ ತಿಂಗಳು ಯಥಾವತ್ತಾಗಿ ವಿತರಿಸಲು ಅಗತ್ಯ ಕ್ರಮ ಕೈಗೊಂಡು ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಪ್ರಭಾಕರ ಪ್ರಭು ಸರ್ಕಾರವನ್ನು ಒತ್ತಾಯಿಸಿದ್ದಾರೆ.