ಸಾರಾಂಶ
ಶಿರ್ವದ ಮುಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ಕರ್ನಾಟಕ ಸಾಹಿತ್ಯ ಅಕಾಡೆಮಿ, ಉಡುಪಿ ಸಾಹಿತ್ಯ ವಿಚಾರ ವೇದಿಕೆಗಳ ಸಹಯೋಗದಲ್ಲಿ ಚಕೋರ ಕಾರ್ಯಕ್ರಮದ ಅಡಿಯಲ್ಲಿ ಪಂಜೆ ಮಂಗೇಶರಾಯರ ಕೃತಿಗಳ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಮಹತ್ವ ವಿಷಯದ ಕುರಿತು ವಿಶೇಷ ಉಪನ್ಯಾಸ ನೆರವೇರಿತು.
ಕನ್ನಡಪ್ರಭ ವಾರ್ತೆ ಕಾಪು
ಇಲ್ಲಿನ ಶಿರ್ವದ ಮುಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ಕರ್ನಾಟಕ ಸಾಹಿತ್ಯ ಅಕಾಡೆಮಿ, ಉಡುಪಿ ಸಾಹಿತ್ಯ ವಿಚಾರ ವೇದಿಕೆಗಳ ಸಹಯೋಗದಲ್ಲಿ ಚಕೋರ ಕಾರ್ಯಕ್ರಮದ ಅಡಿಯಲ್ಲಿ ಪಂಜೆ ಮಂಗೇಶರಾಯರ ಕೃತಿಗಳ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಮಹತ್ವ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ)ನ ಸಹ ಪ್ರಾಧ್ಯಾಪಕ ಡಾ. ರಾಜಶೇಖರ ಹಳೇಮನೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಉಪನ್ಯಾಸ ನೀಡಿ, ಪಂಜೆ ಮಂಗೇಶರಾಯರು ಮಾನವ ಕರುಣೆಯ ಪ್ರತಿರೂಪವಾಗಿದ್ದರು ಎಂದು ಅವರ ಕೊಡುಗೆಗಳ ಮಹತ್ವ ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ. ಜಯಪ್ರಕಾಶ್ ಶೆಟ್ಟಿ, ಮತೀಯ ಚಿಂತನೆಯ ಅಗಾಧ ಮಾರಕ ಶಕ್ತಿಯ ಕುರಿತು ವಿದ್ಯಾರ್ಥಿಗಳಲ್ಲಿ ಎಚ್ಚರಿಕೆ ಮೂಡಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಎಸ್.ಆರ್.ಎಸ್ ಕಾಲೇಜಿನ ಪ್ರಾಂಶುಪಾಲ ಡಾ. ಮಿಥುನ್ ಚಕ್ರವರ್ತಿ ಅವರು ವಹಿಸಿದ್ದರು. ಚಕೋರ ಉಡುಪಿ ಜಿಲ್ಲೆಯ ಸಂಚಾಲಕರಾದ ತಿಮ್ಮಪ್ಪ ಗುಲ್ವಾಡಿ ಹಾಗೂ ಶಾಲಿನಿ ಯು.ಬಿ, ಕಾಲೇಜಿನ ಕನ್ನಡ ಉಪನ್ಯಾಸಕಿ ವರಮಹಾಲಕ್ಷಿ, ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.