ಸಾರಾಂಶ
ಬೆಂಗಳೂರು: ಬೆಂಗಳೂರು ನಗರ ಕಮಿಷನರೆಟ್ ಸಂಪೂರ್ಣ ಕಾಗದ ರಹಿತ ಆಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹರ್ಷ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಕಾಗದ ರಹಿತ ಆಡಳಿತಕ್ಕೆ ಆದೇಶ ಹೊರಡಿಸಲಾಗಿತ್ತು. ಅದೇ ರೀತಿ ಈ ವರ್ಷ ನಗರದ ಎಲ್ಲ ಠಾಣೆಗಳಲ್ಲಿ ಕಾಗದರಹಿತ ಆಡಳಿತ ವ್ಯವಸ್ಥೆ ಅಳವಡಿಸಿಕೊಂಡಿವೆ. ಅಪರಾಧ ಪ್ರಕರಣಗಳಲ್ಲಿ ಕೋರ್ಟ್ಗೆ ಸಲ್ಲಿಸುವ ದಸ್ತಾವೇಜುಗಳನ್ನು ಮಾತ್ರ ಮುದ್ರಿಸಲಾಗುತ್ತಿದೆ. ಇನ್ನುಳಿದಂತೆ ಎಲ್ಲ ಆಡಳಿತ ವ್ಯವಸ್ಥೆಯನ್ನು ಇ-ಗೌವರ್ನೆನ್ಸ್ ಮಾಡಲಾಗಿದೆ ಎಂದು ಆಯುಕ್ತರು ತಿಳಿಸಿದರು.ಸ್ಪಾಗಳ ಮೇಲೆ ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣ
ಅಕ್ರಮ ಕೃತ್ಯಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರನ್ನು ಬಳಸಿಕೊಳ್ಳುವ ಸ್ಪಾಗಳ ಮೇಲೆ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.ಇದೇ ಮೊದಲ ಬಾರಿಗೆ ಈ ರೀತಿಯ ಕಠಿಣ ಕ್ರಮವನ್ನು ಸ್ಪಾಗಳ ಮೇಲೆ ಜರುಗಿಸಲಾಗುತ್ತಿದೆ ಎಂದರು. ಕಳೆದ 25 ದಿನಗಳ ಅವಧಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳ ಶಂಕೆ ಮೇರೆಗೆ ನಗರ ವ್ಯಾಪ್ತಿಯ 21 ಸ್ಪಾಗಳ ಮೇಲೆ ಸಿಸಿಬಿ ಮತ್ತು ಸ್ಥಳೀಯರು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 118 ಮಹಿಳೆಯರನ್ನು ರಕ್ಷಿಸಲಾಗಿದ್ದು, 30 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಈ ಸಂತ್ರಸ್ತೆಯರ ಪೈಕಿ ಕೆಲವರು ಶೋಷಿತ ಸಮಾಜದ ಮಹಿಳೆಯರು ಪತ್ತೆಯಾಗಿದ್ದಾರೆ. ಹೀಗಾಗಿ ಎರಡು ಪ್ರಕರಣಗಳಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸಹ ಎಫ್ಐಆರ್ ದಾಖಲಾಗಿದೆ ಎಂದು ಮಾಹಿತಿ ನೀಡಿದರು.