ಪರಶುರಾಮನ ನಕಲಿ ಪ್ರತಿಮೆ ನಿರ್ಮಾಣ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ರಾಜಿನಾಮೆ ನೀಡಬೇಕು ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ.
ಕನ್ನಡಪ್ರಭ ವಾರ್ತೆ ಕಾರ್ಕಳ
ಪರಶುರಾಮನ ನಕಲಿ ಪ್ರತಿಮೆ ನಿರ್ಮಾಣ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ರಾಜಿನಾಮೆ ನೀಡಬೇಕು ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ.ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಕಳ ಪತ್ರಿಕಾಭವನದಲ್ಲಿ ಪೋಸ್ಟರ್ ಬಿಡುಗಡೆಗೊಳಿಸಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್, ಇತ್ತೀಚೆಗೆ ಹಗರಣಗಳ ಆರೋಪ ಎದುರಿಸಿದ ರಾಜಕೀಯ ಮುಖಂಡರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುತ್ತಿರುವ ಬೆಳವಣಿಗೆ ನಡೆಯುತ್ತಿದೆ. ಸಚಿವ ನಾಗೇಂದ್ರ ಅವರು ಹಗರಣದ ಆರೋಪದ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಿದ್ದು, ಅವರ ರಾಜಿನಾಮೆಗೆ ಒತ್ತಾಯಿಸಿದ್ದ ಕಾರ್ಕಳ ಶಾಸಕರ ರಾಜಿನಾಮೆ ಯಾವಾಗ ಎಂದು ಕಾರ್ಕಳದ ಜನತೆಯ ಪರವಾಗಿ ಪ್ರಶ್ನಿಸುತ್ತೇವೆ ಎಂದರು.ಶಾಸಕ ಸುನಿಲ್ ಕುಮಾರ್ ಅವರ ರಾಜಿನಾಮೆಗೆ ಒತ್ತಾಯಿಸಿ ಪೋಸ್ಟರ್ ಅಭಿಯಾನ ನಡೆಸಲು ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿರ್ಧರಿಸಿದೆ. ಕಾರ್ಕಳ ನಗರ ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳು, ಹಳ್ಳಿಗಳು ಹಾಗೂ ಮನೆಮನೆಗಳಲ್ಲಿಯೂ ಪೋಸ್ಟರ್ ಅಂಟಿಸುವ ಮೂಲಕ ಹೋರಾಟ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಪ್ರಕರಣದ ಕುರಿತು ವಿಭಿನ್ನ ರೀತಿಯ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಅನಿಲ್ ಪೂಜಾರಿ ಮಾಳ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಂದ್ರ ದೇವಾಡಿಗ ಹಾಗೂ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಉಪಸ್ಥಿತರಿದ್ದರು.