ಸಾರಾಂಶ
ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ತಮ್ಮ ಮಕ್ಕಳನ್ನು ಮೊದಲು ಖಾಸಗಿ ಶಾಲೆಗೆ ದಾಖಲು ಮಾಡುವುದು ಬಿಡಬೇಕು. ಈ ಬಗ್ಗೆ ಸರ್ಕಾರಿ ಕಾಯ್ದೆ ತರುವ ಮೂಲಕ ಸರ್ಕಾರಿ ಶಾಲೆ ಉಳಿಸಲು ಸರ್ಕಾರ ಮುಂದಾಗಬೇಕಾಗಿದೆ. ಸರ್ಕಾರದಿಂದ ಮಾಸಿಕ ಸಾವಿರಾರ ರು. ವೇತನ ಪಡೆಯುವ ಶಿಕ್ಷಕರು, ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ವಂದೇಮಾತರಂ ಸೇವಾ ಟ್ರಸ್ಟ್ ಸಂಸ್ಥಾಪಕ ನಾಗಣ್ಣ ತಿಳಿಸಿದರು.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಸರ್ಕಾರಿ ಶಾಲೆಯಲ್ಲಿನ ಶಿಕ್ಷಕರು ಸ್ಪರ್ಧಾತ್ಮಕ ಪರೀಕ್ಷೆಯಿಂದ ಆಯ್ಕೆಯಾಗಿರುತ್ತಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರ ಶ್ರಮಿಸುತ್ತಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಲು ಮುಂದಾಗಬೇಕು ಎಂದು ವಂದೇಮಾತರಂ ಸೇವಾ ಟ್ರಸ್ಟ್ ಸಂಸ್ಥಾಪಕ ನಾಗಣ್ಣ ತಿಳಿಸಿದರು. ಪಟ್ಟಣದ ಬಿಇಒ ಕಚೇರಿ ಹಿಂಭಾಗದಲ್ಲಿ ಪಿಎಂಶ್ರೀ ಸರ್ಕಾರಿ ಶಾಲಾ ಆವರಣದಲ್ಲಿ ವಂದೇ ಮಾತರಂ ಸೇವಾ ಟ್ರಸ್ಟ್ ಹಾಗೂ ಮಾತೃಭೂಮಿ ವೃದ್ಧಾಶ್ರಮದಿಂದ ನಡೆದ ಸರ್ಕಾರಿ ಶಾಲೆ ಉಳಿಸಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಸರ್ಕಾರ ಶಿಕ್ಷಣ ಇಲಾಖೆಗೆ ಕೋಟ್ಯಂತರ ರು., ವೆಚ್ಚ ಮಾಡುತ್ತಿದೆ. ಆದರೂ, ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡುವಂತೆ ಕಳೆದ ಒಂದು ತಿಂಗಳಿನಿಂದ ಹಾಸನ ಜಿಲ್ಲೆಯ ಶಾಂತಿಗ್ರಾಮ ಹೋಬಳಿ, ನುಗ್ಗೇಹಳ್ಳಿ, ದಂಡಿಗನಹಳ್ಳಿ, ಬಾಗೂರು, ಶ್ರವಣಬೆಳಗೊಳ, ಹಿರೀಸಾವೆ, ಮಂಡ್ಯ ಜಿಲ್ಲೆಯ ನಾಗಮಂಗಲ, ಕೆ.ಆರ್.ಪೇಟೆ, ಪಾಂಡವಪುರ ತಾಲೂಕಿನ ವಿವಿಧ ಹೋಬಳಿ ಕೇಂದ್ರಗಳಲ್ಲಿ ನಡೆಯುವ ಸಂತೆ, ಜಾತ್ರೆ, ರಥೋತ್ಸವದಲ್ಲಿ ಜಾಗೃತಿ ಮೂಡಿಸಲಾಯಿತು ಎಂದು ತಿಳಿಸಿದರು.ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ತಮ್ಮ ಮಕ್ಕಳನ್ನು ಮೊದಲು ಖಾಸಗಿ ಶಾಲೆಗೆ ದಾಖಲು ಮಾಡುವುದು ಬಿಡಬೇಕು. ಈ ಬಗ್ಗೆ ಸರ್ಕಾರಿ ಕಾಯ್ದೆ ತರುವ ಮೂಲಕ ಸರ್ಕಾರಿ ಶಾಲೆ ಉಳಿಸಲು ಸರ್ಕಾರ ಮುಂದಾಗಬೇಕಾಗಿದೆ. ಸರ್ಕಾರದಿಂದ ಮಾಸಿಕ ಸಾವಿರಾರ ರು. ವೇತನ ಪಡೆಯುವ ಶಿಕ್ಷಕರು, ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳಿಗೆ ಅಪಮಾನ ಮಾಡುತ್ತಿದ್ದಾರೆ ಎಂದರು. ಅನೇಕ ಕಡೆ ವಿದ್ಯಾರ್ಥಿಗಳ ಕೊರತೆಯಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉದ್ಭವಿಸಿದೆ. ಇನ್ನು ಮುಂದೆ ಪ್ರತಿವರ್ಷ ಸರ್ಕಾರಿ ಶಾಲೆ ಉಳಿಸಿ ಅಭಿಯಾನವನ್ನು ವಂದೇ ಮಾತರಂ ಟ್ರಸ್ಟ್ನಿಂದ ಆಯೋಜಿಸಲಾಗುವುದು. ರಾಜ್ಯ ಸರ್ಕಾರ ಪ್ರತಿ ಗ್ರಾಪಂ ಮುಖ್ಯ ಕೇಂದ್ರ ಸ್ಥಾನದಲ್ಲಿ ಸುಸಜ್ಜಿತ ವಸತಿ ಶಾಲೆಗಳನ್ನು ಪ್ರಾರಂಭಿಸಿ, ಸಕಲ ಸವಲತ್ತುಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.ಕಸಬಾ ಹೋಬಳಿ ಶಿಕ್ಷಣ ಸಂಯೋಜಕ ಲೋಕೇಶ್ ಮಾತನಾಡಿದರು. ವಂದೇ ಮಾತರಂ ಯುವ ಸಂಘದ ಕಾರ್ಯದರ್ಶಿ ಸುಮಾ, ವಂದೇ ಮಾತರಂ ಸೇವಾ ಟ್ರಸ್ಟ್ ಕಾರ್ಯದರ್ಶಿ ವಿಕ್ರಮ್, ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಆರ್. ರಮೇಶ್, ಸಮೂಹ ಸಂಪನ್ಮೂಲ ವ್ಯಕ್ತಿ ಲಿಂಗರಾಜು, ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಪ್ರಕಾಶ್, ಸರ್ಕಾರಿ ಬಾಲಿಕಾ ಪ್ರೌಢಶಾಲೆ ಹಾಗೂ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರು ಉಪಸ್ಥಿತರಿದ್ದರು.