ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿದ್ದು, ಓದು ಹಾಗೂ ಇತರೆ ಸೃಜನಾತ್ಮಕ ಚಟುವಟಿಕೆಗಳತ್ತ ಗಮನಹರಿಸುವಂತೆ ಪೋಷಕರು ನೋಡಿಕೊಳ್ಳಬೇಕು.
ಬೇಲೂರು: ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಶಿಸ್ತಿನ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಪೋಷಕರ ಪಾತ್ರವೂ ಮಹತ್ವದ್ದಾಗಿದೆ ಎಂದು ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವ್ಯವಸ್ಥಾಪಕರಾದ ಫಾ. ಕಿರಣ್ ಮೆಲ್ವಿನ್ ಹೇಳಿದರು. ತಾಲೂಕಿನ ಅರೇಹಳ್ಳಿಯ ಅಂಬೇಡ್ಕರ್ ನಗರದಲ್ಲಿರುವ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಶಿಕ್ಷಕ- ಪೋಷಕರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿ, ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿದ್ದು, ಓದು ಹಾಗೂ ಇತರೆ ಸೃಜನಾತ್ಮಕ ಚಟುವಟಿಕೆಗಳತ್ತ ಗಮನಹರಿಸುವಂತೆ ಪೋಷಕರು ನೋಡಿಕೊಳ್ಳಬೇಕು. ಮಕ್ಕಳ ಮುಂದೆ ಪೋಷಕರು ಅಸಭ್ಯವಾಗಿ ವರ್ತಿಸಬಾರದು. ಮಕ್ಕಳಿಗೆ ಶಿಸ್ತು ಕಲಿಸುವ ಮೊದಲು ಪೋಷಕರು ತಮ್ಮಲ್ಲಿರುವ ಕೆಟ್ಟ ಹವ್ಯಾಸಗಳನ್ನು ದೂರ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮಕ್ಕಳನ್ನು ಶಿಸ್ತಿನ ಸಿಪಾಯಿಗಳಂತೆ ರೂಪಿಸುವಲ್ಲಿ ಶಿಕ್ಷಕರು ಮತ್ತು ಪೋಷಕರು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪಠ್ಯ ಚಟುವಟಿಕೆಗಳಿಗೆ ನೀಡುವಷ್ಟೇ ಮಹತ್ವವನ್ನು ಆಟೋಟ ಹಾಗೂ ಕ್ರೀಡಾ ಚಟುವಟಿಕೆಗಳಿಗೂ ನೀಡಬೇಕು. ಇದರಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದರು. ಸಭೆಯಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.