ಕನ್ನಡಪ್ರಭ ವಾರ್ತೆ ಕೆಜಿಎಫ್

ಸಮಾಜದಲ್ಲಿ ಯುವ ಪೀಳಿಗೆಯು ಡ್ರಗ್ಸ್ ಪಿಡುಗಿಗೆ ಬಲಿಯಾಗಿ ಹಾದಿ ತಪ್ಪುತ್ತಿದೆ, ಆದ್ದರಿಂದ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು, ಮಕ್ಕಳ ಮೇಲಿನ ಅತಿಯಾದ ಪ್ರೀತಿ ಕೈಬಿಟ್ಟು, ಅವರನ್ನು ಸರಿದಾರಿಯಲ್ಲಿ ಸಾಗುವಂತೆ ಮನವರಿಕೆ ಮಾಡಿಕೊಡಬೇಕೆಂದು ಡಿವೈಎಸ್ ಪಿ ಲಕ್ಷ್ಮಯ್ಯ ಹೇಳಿದರು.

ನಗರದ ಕಿಂಗ್ ಜಾರ್ಜ್ ಹಾಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ರ್ಯಾಂಡ್ ರಿಯಾನ್ ರೈನ್ಸ್ ಶಾಲಾ ವಾರ್ಷಿಕೋತ್ಸವ ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡಿದರು. ೮ನೇ ತರಗತಿಯವರೆಗೂ ಮಕ್ಕಳು ಅಂತಹ ಜ್ಞಾನ ಹೊಂದಿರುವುದಿಲ್ಲ, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿಬಿಟ್ಟರೆ ಶಿಕ್ಷಕರು ನೋಡಿಕೊಳ್ಳುತ್ತಾರೆ ಎಂದು ಶಾಲಾ ಆಡಳಿತ ಮಂಡಳಿ ಮೇಲೆ ಒತ್ತಡ ಹಾಕಬಾರದು, ಏಕೆಂದರೆ ಶಾಲೆಯಲ್ಲಿ ಮಕ್ಕಳಿಗೆ ವಿದ್ಯೆ ನೀಡುತ್ತಾರೆ, ಮನೆಯಲ್ಲಿ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸುವುದು ಪೋಷಕರ ಹೊಣೆಯಾಗಿದ್ದು, ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕೆಂದು ಪೋಷಕರಿಗೆ ಕಿವಿಮಾತು ಹೇಳಿದರು.

ಸಣ್ಣ ವಯಸ್ಸಿನ ಯುವಕರು ಡ್ರಗ್ಸ್ ನಶೆಯಲ್ಲಿ ಕೊಲೆಯಂಥ ಅಪರಾದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ, ಇದು ಆತಂಕಕಾರಿ ವಿಚಾರವಾಗಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ಮೇಲೆ ಹೆಚ್ಚಿನ ಕಾಳಜಿ ವಹಿಸಿ ಮಕ್ಕಳು ಎಲ್ಲಿಗೆ ಹೋಗುತ್ತಾರೆ, ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ವಿಚಾರಣೆ ಮಾಡಿ, ನಿಮ್ಮ ಬಿಡುವಿಲ್ಲದ ಚಟುವಟಿಕೆಯ ನಡುವೆಯೂ ಮಕ್ಕಳೊಂದಿಗೆ ನಿಮ್ಮ ಸಮಯ ಕಳೆಯಬೇಕೆಂದು ತಿಳಿಸಿದರು.

ಶಾಲಾ ಆಡಳಿತ ಮಂಡಳಿಯ ತ್ಯಾಗರಾಜ್ ಮಾತನಾಡಿ, ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅದಕ್ಕೆ ತಕ್ಕಂತೆ ಆಡಳಿತ ಮಂಡಳಿ, ಶಿಕ್ಷಕ ಸಿಬ್ಬಂದಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.


ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಿ ಕೈಕಟ್ಟಿ ಕುಳಿತುಕೊಳ್ಳದೆ ಮಕ್ಕಳ ನಡವಳಿಕೆಗಳನ್ನು ಶಿಕ್ಷಕರೊಂದಿಗೆ ಚರ್ಚಿಸಿ ಮಕ್ಕಳನ್ನು ಸರಿ ದಾರಿಗೆ ತರುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಇದೇ ವೇಳೆ ಶಾಲೆಯ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.