ಮಾನವ ಸರಪಳಿಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ

| Published : Sep 11 2024, 01:06 AM IST

ಮಾನವ ಸರಪಳಿಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಮಾನವ ಸರಪಳಿಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ

ಕನ್ನಡಪ್ರಭ ವಾರ್ತೆ ತುಮಕೂರುಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ೧೫ರಂದು ಜಿಲ್ಲೆಯ ಶಿರಾ ತಾಲೂಕಿನ ಉಜ್ಜನಕುಂಟೆ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ ೪೮ರ ಮೂಲಕ ತುಮಕೂರು ತಾಲೂಕು ನಂದಿಹಳ್ಳಿ ಗ್ರಾಮದ ಗಡಿಯವರೆಗೆ ನಿರ್ಮಿಸಲು ಉದ್ದೇಶಿರುವ 90 ಕಿ.ಮೀ. ಉದ್ದದ ಮಾನವ ಸರಪಳಿಯಲ್ಲಿ ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ನ್ಯಾಯಲಯ ಸಭಾಂಗಣದಲ್ಲಿಂದು ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದರು.ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ವ್ಯಾಪ್ತಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ 90 ಕಿ.ಮೀ.ಗಳ ಮಾನವ ಸರಪಳಿಯನ್ನು ನಿರ್ಮಿಸಲು ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಪ್ರಜಾ ಪ್ರಭುತ್ವದ ಮಹತ್ವವನ್ನು ಪ್ರತಿಯೊಬ್ಬ ನಾಗರಿಕನಿಗೂ ತಿಳಿಸುವ ಸಲುವಾಗಿ ರಾಜ್ಯ ಸರ್ಕಾರದ ನಿರ್ದೇಶನದಂತೆ ರಾಜ್ಯಾದಾದ್ಯಂತ ಬೀದರ್ ಜಿಲ್ಲೆಯಿಂದ ಚಾಮರಾಜನಗರದವರೆಗೆ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಂತೆ ಮಾನವ ಸರಪಳಿಯನ್ನು ಏಕ ಕಾಲದಲ್ಲಿ ಆಯೋಜಿಸಲಾಗುತ್ತಿದೆ. ಜಿಲ್ಲೆಯ ಜನತೆ ಈ ಮಾನವ ಸರಪಳಿಯಲ್ಲಿ ಭಾಗವಹಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿದುಕೊಳ್ಳುವಂತೆ ಮಾಡಬೇಕೆಂದು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ಹೋಗುವ ಮಾನವ ಸರಪಳಿಯಲ್ಲಿ 1 ಲಕ್ಷಕ್ಕಿಂತ ಹೆಚ್ಚಿನ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಾನವ ಸರಪಳಿಯನ್ನು ವ್ಯವಸ್ಥಿತವಾಗಿ ನಿರ್ಮಿಸಲು ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಕಾರ್ಯಕ್ರಮದಲ್ಲಿ ಎಲ್ಲಾ ಸರ್ಕಾರಿ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಉಪನ್ಯಾಸಕರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಅವರು ಸೂಚಿಸಿದರು.ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ, ವಿಶ್ವ ಸಂಸ್ಥೆಯು ಘೋಷಿಸಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಎಲ್ಲಾ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಮಾನವ ಸರಪಳಿಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು, ನಿಯೋಜಿತ ಅಧಿಕಾರಿಗಳು ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಜಿಲ್ಲೆಗೆ ಶೋಭೆ ತರುವ ಕೆಲಸ ಮಾಡಬೇಕು ಎಂದರಲ್ಲದೆ, ಮಾನವ ಸರಪಳಿ ಕಾರ್ಯಕ್ರಮಕ್ಕೆ ನಿಗದಿತ ಸಮಯಕ್ಕೆ ಸೇರಬೇಕು ಎಂದು ತಿಳಿಸಿದರು. ಪ್ರಜಾಪ್ರಭುತ್ವ ದಿನಾಚರಣೆಯಂದು ತಾಲೂಕು ಕೇಂದ್ರ ಹಾಗೂ ನಗರ ವ್ಯಾಪ್ತಿಯ ಪ್ರಮುಖ ವೃತ್ತಗಳಲ್ಲಿ ಸಂವಿಧಾನ ಕುರಿತು ಅರಿವು ಕಾರ್ಯಕ್ರಮ, ಮಾನವ ಸರಪಳಿಯನ್ನು ನಿರ್ಮಿಸುವುದರೊಂದಿಗೆ ಸ್ಥಳೀಯವಾಗಿ ಗಿಡ ನೆಡುವ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಹಬ್ಬದ ವಾತಾವರಣವನ್ನು ಸೃಷ್ಟಿಸಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಉಪವಿಭಾಗಾಧಿಕಾರಿಗಳಾದ ಗೌರವಕುಮಾರ್ ಶೆಟ್ಟಿ ಹಾಗೂ ಸಪ್ತಶ್ರೀ, ಕೃಷಿ ಜಂಟಿ ನಿರ್ದೇಶಕ ಎನ್. ರಮೇಶ್, ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಹರ್ಷಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.