ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ ಮೂಲ ಉದ್ದೇಶವೇ ಎಲ್ಲಾ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ. ಪ್ರಜಾಪ್ರಭುತ್ವದ ಭದ್ರ ಅಡಿಪಾಯಕ್ಕಾಗಿ ಪ್ರತಿಯೊಬ್ಬರೂ ಈ ಪರಿಷ್ಕರಣೆಯ ಭಾಗವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ ಹೇಳಿದರು.ನಗರದ ಜಿಲ್ಲಾ ಪಂಚಾಯಿಯಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಕಾಣಿಕೆ ತಡೆ ದಿನಾಚರಣೆಯಲ್ಲಿ ಭಾಗವಹಿಸಿದ ವಿವಿಧ ಇಲಾಖೆಯ ಅಧಿಕಾರಿಗಳ ಉದ್ದೇಶಿಸಿ ಅವರು ಮಾತನಾಡಿದರು. ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯಲ್ಲಿ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.ಈಗಾಗಲೇ ಬಿಎಲ್‍ಒಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಸಾರ್ವಜನಿಕರು ಆ ಗಣತಿ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಿ, ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸಂಬಂಧಿಸಿದ ಬಿಎಲ್‍ಒಗಳಿಗೆ ತಕ್ಷಣ ಹಿಂದಿರುಗಿಸಬೇಕು. ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಬಿಎಲ್‍ಒಗಳಿಗೆ ಸಂಪೂರ್ಣ ಸಹಕಾರ ನೀಡುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕಾಗಿ ಮನವಿ ಮಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುದೀನ್ ಕುಮಾರ್ ಮಾತನಾಡಿ, ಮತದಾರರು ಬಿಟ್ಟು ಹೋಗದಂತೆ ನೋಡಿಕೊಳ್ಳುವುದು ಮತ್ತು ಮಾಹಿತಿ ಕೊರತೆ ಇದ್ದವರಿಗೆ ಅರಿವು ಮೂಡಿಸಲು ತಿಳಿಸಿದರು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಪ್ರತಿಯೊಬ್ಬ ಅರ್ಹ ನಾಗರಿಕನು ಮತದಾನ ಹಕ್ಕು ಪಡೆಯುವುದು ಅತ್ಯಗತ್ಯ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಖಚಿತ ಪಡಿಸಿಕೊಳ್ಳಬೇಕು. ಹಾಗೆಯೇ ನೆರೆಹೊರೆಯವರಿಗೆ ಈ ಬಗ್ಗೆ ತಿಳಿವಳಿಕೆ ಮೂಡಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.