ಹೊಸಕೋಟೆ: ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷರಹಿತವಾಗಿ ಸಿದ್ಧಪಡಿಸುವುದು ಪ್ರಜಾಪ್ರಭುತ್ವ ಬಲಿಷ್ಠಗೊಳಿಸಲು ಅಗತ್ಯವಾಗಿದ್ದು ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರು ತಪ್ಪದೆ ಭಾಗವಹಿಸಬೇಕು ಎಂದು ಜಿಪಂ ಸಿಇಒ ಡಾ.ವಾಸಂತಿ ಅಮರ್ ತಿಳಿಸಿದರು.

ನಗರದ ಚನ್ನಭೈರೇಗೌಡ ಜಿಲ್ಲಾ ಕ್ರೀಡಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‌ಐಆರ್) ಕುರಿತು ಸಾರ್ವಜನಿಕರ ಜಾಗೃತಿಗಾಗಿ ಆಯೋಜಿಸಿದ್ದ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆ ದಿನಾಂಕವನ್ನು ಆಗಸ್ಟ್ ೮ರವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ತಪ್ಪದೆ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಅಗತ್ಯವಿರುವ ತಿದ್ದುಪಡಿಗಳನ್ನು ನಿಗದಿತ ಅವಧಿಯೊಳಗೆ ಮಾಡಿಸಿಕೊಳ್ಳುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ಎಆರ್‌ಓ ಶಿವಕುಮಾರ್ ಮಾತನಾಡಿ, ವಿಶೇಷ ಮತ ಪಟ್ಟಿ ಪರಿಷ್ಕರಣ ಕಾರ್ಯಕ್ರಮವನ್ನು ಶೇ.100ರಷ್ಟು ತಲುಪುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ರಂಗೋಲಿ ಸ್ಪರ್ಧೆ, ಸ್ವಚ್ಛತಾ ವಾಹಿನಿಗಳಿಂದ ಜಾಗೃತಿ, ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ ಎಂದರು.

ಪಂಜಿನ ಮೆರವಣಿಗೆಯಲ್ಲಿ ತಾಪಂ ಇಒ ಮುನಿಯಪ್ಪ, ಸಿಡಿಪಿಒ ಶಿವಮ್ಮ, ಬಿಇಒ ಪದ್ಮನಾಭ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮುನಿಗಂಯ್ಯ ಇತರರು ಪಾಲ್ಗೊಂಡಿದ್ದರು.

ಫೋಟೋ: 21 ಹೆಚ್‌ಎಸ್‌ಕೆ 1 ಮತ್ತು 2


ಹೊಸಕೋಟೆಯ ಚನ್ನಭೈರೇಗೌಡ ಜಿಲ್ಲಾ ಕ್ರೀಡಾಂಗಣದಲ್ಲಿ ಎಸ್‌ಐಆರ್ ಕುರಿತ ಜಾಗೃತಿ ಜಾಥಾ ಪ್ರಯುಕ್ತ ಪಂಜಿನ ಮೆರವಣಿಗೆಗೆ ಜಿಪಂ ಸಿಇಒ ಡಾ.ವಾಸಂತಿ ಅಮರ್ ಚಾಲನೆ ನೀಡಿದರು.