ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಯಾವುದೇ ಆಮೀಷಗಳಿಗೆ ಬಲಿಯಾಗದೇ ನಿರ್ಭಿತಿಯಿಂದ ಮತದಾನದಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಮಹೇಂದ್ರ ಕರೆ ನೀಡಿದರು.ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ತಾಲೂಕು ಆಡಳಿತ, ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಮತದಾರರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಜಾತಿ ಮತ ಎನ್ನದೇ ಸಮಾನವಾಗಿ ಮತದಾನದ ಹಕ್ಕನ್ನು ನೀಡಿದ್ದಾರೆ. ನಿಮ್ಮ ಆಯ್ಕೆಯ ಮೇಲೆ ದೇಶದ ಭವಿಷ್ಯ ಇರುವುದರಿಂದ ಅತ್ಯುತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.18 ವರ್ಷ ಮೇಲ್ಪಟ್ಟ ಯುವಕ ಯುವತಿಯರು ಕಡ್ಡಾಯವಾಗಿ ಮತದಾನದ ನೋಂದಾಣಿ ಮಾಡಿಕೊಳ್ಳಬೇಕು. ಸ್ವಾಮಿ ವಿವೇಕಾನಂದರು ಯುವ ಜನರಿಗೆ ಆದರ್ಶ ಅವರ ಬದುಕು ಭಾರತಕ್ಕೆ ಮಾತ್ರವಲ್ಲದೇ ಪ್ರಪಂಚದ ಇತರೆ ರಾಷ್ಟ್ರಗಳಿಗೂ ಸ್ಪೂರ್ತಿಯಾಗಿದೆ. ಯುವ ಸಮೂಹ ಮತದಾನದ ಮಹತ್ವ ಅರಿಯುವುದರ ಜತೆ ಸ್ವಾಮಿ ವಿವೇಕಾನಂದರ ತ್ವತ ಪಾಲಿಸಬೇಕು ಎಂದರು.
ತಹಸೀಲ್ದಾರ್ ಎಸ್.ವಿ.ಲೋಕೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸುಭದ್ರ ದೇಶದ ನಿರ್ಮಾಣದಲ್ಲಿ ಮತದಾರರೇ ನಿರ್ಣಾಯಕರು. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಯುವ ಜನತೆ ಸಕ್ರಿಯವಾಗಿ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ಪ್ರತಿಜ್ಞಾವಿಧಿ ಬೋಧಿಸಿದರು.ಸಂಪನ್ಮೂಲ ಭಾಷಣಕಾರ ವಕೀಲ ಮುತ್ತುರಾಜ್ ಮತದಾನದ ಮಹತ್ವವನ್ನು ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ, ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಸಹಾಯಕ ಸರ್ಕಾರಿ ಅಭಿಯೋಜಕ ಎಂ.ಶಂಕರಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ಸುಂದರ್, ಪ್ರಾಂಶುಪಾಲ ಕೆ.ಶಿವಮೂರ್ತಿ, ಪಿಡಿಒಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ, ವಕೀಲರಾದ ಶ್ರೀಕಂಠಸ್ವಾಮಿ, ವೆಂಕಟೇಶ್ ಪಾಲ್ಗೊಂಡಿದ್ದರು.