ಸಾರಾಂಶ
ಯಾರೇ ಪ್ರಥಮ ಬಂದರೂ ನಾವೇ ಪ್ರಥಮ ಬಂದ ರೀತಿ ತಿಳಿದುಕೊಳ್ಳುವ ಕ್ರೀಡಾ ಮನೋಭಾವ ಹೊಂದಿ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ, ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ ಮಕ್ಕಳಿಗೂ ಸಹ ಕ್ರೀಡಾ ಆಸಕ್ತಿ ಬೆಳೆಯಲು ಸಹಾಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಯಾರೇ ಪ್ರಥಮ ಬಂದರೂ ನಾವೇ ಪ್ರಥಮ ಬಂದ ರೀತಿ ತಿಳಿದುಕೊಳ್ಳುವ ಕ್ರೀಡಾ ಮನೋಭಾವ ಹೊಂದಿ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ, ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ ಮಕ್ಕಳಿಗೂ ಸಹ ಕ್ರೀಡಾ ಆಸಕ್ತಿ ಬೆಳೆಯಲು ಸಹಾಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಹೇಳಿದರು.ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಜಿಲ್ಲಾ ಶಾಖೆ ಸಂಯುಕ್ತ ಆಶ್ರಯದಲ್ಲಿ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಪ್ರತಿದಿನ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ನೌಕರರಿಗೆ ಈ ರೀತಿಯ ವೇದಿಕೆಗಳು ಸಿಕ್ಕಾಗ ಇದರ ಸದುಪಯೋಗ ಪಡೆದುಕೊಂಡು ಸಂತೋಷದಿಂದ, ಮನರಂಜನಾತ್ಮಕವಾಗಿ ಭಾಗವಹಿಸಿ. ಕ್ರೀಡೆಯಲ್ಲಿ ಬಹುಮಾನಗಳಿಗಾಗಿ ಅಲ್ಲ, ಬದಲಾಗಿ ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿದರೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು.ಅಧ್ಯಕ್ಷತೆವಹಿಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಬಿ. ಬಳ್ಳಾರಿ, ಈ ಬಾರಿಯ ಕ್ರೀಡಾಕೂಟದಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿದ್ದಾರೆ, ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿದೆ. ಈ ಕಾರ್ಯದಲ್ಲಿ ಸಕಾರಾತ್ಮಕವಾಗಿ ತೊಡಗಿಸಿಕೊಳ್ಳಲು ದೈಹಿಕ ಹಾಗೂ ಮಾನಸಿಕ ಆರೋಗ್ಯ ಮುಖ್ಯವಾಗಿದೆ. ಆದ್ದರಿಂದ ಈ ರೀತಿಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಒಳ್ಳೆಯದು ಎಂದು ತಿಳಿಸಿದರು. ಕ್ರೀಡಾಪಟುಗಳಿಗೆ ಆರ್.ಬಿ. ರಾಂಪೂರ ಪ್ರತಿಜ್ಞಾವಿಧಿ ಬೋಧಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಕ.ರಾ.ಸ. ನೌ. ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ರಾಜ್ಯ ಪರಿಷತ್ ಸದಸ್ಯರಾದ ಸಂಜೀವರೆಡ್ಡಿ, ಸತ್ಯರೆಡ್ಡಿ, ಜಿಲ್ಲಾ ಖಜಾಂಚಿ ಗೋಪಾಲ್ ಎನ್. ನಿಲಾಯಕ್, ಗೌರವಾಧ್ಯಕ್ಷ ಸುರೇಶ ಇಂಜಗನೇರಿ ಹಾಗೂ ಎಲ್ಲಾ ತಾಲೂಕು ಅಧ್ಯಕ್ಷರು ಮತ್ತು ಕ್ರೀಡಾಪಟುಗಳು ಭಾಗವಹಿಸಿದ್ದರು.