ಸಾರಾಂಶ
ಕೊಪ್ಪಳ:
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಎಲ್ಲರ ಸಹಭಾಗಿತ್ವ ಬಹುಮುಖ್ಯವಾಗಿದ್ದು, ಸೂಕ್ತ ಪ್ರಚಾರ ಕೈಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗುವಂತೆ ನೋಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಕುರಿತಂತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೂ. 21ರಂದು ತಾಲೂಕು ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಏರ್ಪಡಿಸಿದ್ದು ಅಂದು ಬೆಳಗ್ಗೆ 6.30ಕ್ಕೆ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ಯೋಗಭ್ಯಾಸ ನಡೆಯಲಿದೆ. ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕು. ಅವರಿಗೆ ಲಘು ಉಪಹಾರದ ವ್ಯವಸ್ಥೆ ಕೈಗೊಳ್ಳುವಂತೆ ಜಿಲ್ಲಾ ಆಯುಷ್ ಅಧಿಕಾರಿಗೆ ಸೂಚಿಸಿದರು.ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಯೋಗಭ್ಯಾಸದ ನಂತರ ಪ್ರಜಾಪಿತ ಬ್ರಹ್ಮಕುಮಾರಿ ಅವರಿಂದ ಧ್ಯಾನದ ಮಹತ್ವ ಕುರಿತು ಉಪನ್ಯಾಸ ಇರಲಿದೆ ಎಂದ ಅವರು, ಕುಡಿಯುವ ನೀರು, ಯೋಗಾಸನಕ್ಕೆ ಸಂಬಂಧಿಸಿದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಹೇಳಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಪಿ.ಬಿ. ಹಿರೇಗೌಡರ ಮಾತನಾಡಿ, ಈ ಬಾರಿ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಘೋಷವಾಕ್ಯದೊಂದಿಗೆ ಯೋಗಾಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟಪ್ಪನವರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ, ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಬಸವರಾಜ, ಆಯುಷ್ ವೈದ್ಯಾಧಿಕಾರಿಗಳಾದ ಡಾ. ಗುರುರಾಜ್ ಉಮಚಗಿ, ಡಾ. ಯಮನಪ್ಪ ಶಿರವಾರ, ಡಾ. ರಾಜಶೇಖರ ನಾರಿನಾಳ, ಡಾ. ಕವಿತಾ ಎಚ್.ಎಫ್., ಡಾ. ಶರಣಪ್ಪ ಹೈದ್ರಿ ಸೇರಿದಂತೆ ಇತರರು ಇದ್ದರು.