ಸಾರಾಂಶ
ಗೋಕರ್ಣ: ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿ, ಬಿಜೆಪಿಗೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ ನಂತರ ಅವರು ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.
ಬಿಜೆಪಿ- ಜೆಡಿಎಸ್ ಮೈತ್ರಿಯಾಗಿ ಹೊಸಬರನ್ನು ಕಣಕ್ಕಿಳಿಸಿ ಪ್ರಯೋಗ ಮಾಡುತ್ತಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ, ಜೆಡಿಎಸ್ನವರು ಆರಂಭದಲ್ಲೇ ಎಡವಿದ್ದಾರೆ.
ಆ ಪಕ್ಷದಲ್ಲಿ ಜಾತ್ಯತೀತ ತತ್ವ ಇಲ್ಲವಾಗಿದೆ. ಅಲ್ಲಿ ಪಕ್ಷದ ವಿಚಾರವೇ ಇಲ್ಲ. ಅವರ ಕುಟುಂಬದ ಸದಸ್ಯರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸಿದ ಮೇಲೆ ಜೆಡಿಎಸ್ ಇದೆ ಎಂದು ಹೇಳಲು ಸಾಧ್ಯವೇ? ಇನ್ನು ಬಿಜೆಪಿಯಲ್ಲಿ ಏನೆಲ್ಲಾ ನಡೆಯುತ್ತಿದೆ ಎಂದು ನಾನು ಹೇಳುವ ಅಗತ್ಯವಿಲ್ಲ.
ಅಲ್ಲಿ ಪಕ್ಷದ ಮಾಜಿ ಅಧ್ಯಕ್ಷರು, ಮಾಜಿ ಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ಇಲ್ಲವಾಗಿದೆ. ಪಕ್ಷಕ್ಕೆ ಭದ್ರ ಬುನಾದಿ ಹಾಕಿದವರಿಗೆ, ರಾಜ್ಯ ಪ್ರವಾಸ ಮಾಡಿದವರಿಗೆ, ನಮ್ಮ ವಿರುದ್ಧ ಹೋರಾಟ ಮಾಡಿದವರನ್ನು ಮನೆಗೆ ಕಳಿಸಿ ಹೊಸಬರನ್ನು ಕಣಕ್ಕಿಳಿಸಿದ್ದಾರೆ ಎಂದರು.
ದೇವಾಲಯದ ಅರ್ಚಕರು ತಾವು ಸಿಎಂ ಆಗಬೇಕು ಎಂದು ಪೂಜೆ ಮಾಡಿದ್ದಾರೆ ಎಂದು ಕೇಳಿದಾಗ, “ಅರ್ಚಕರು ಕೇಳುವುದರಲ್ಲಿ ತಪ್ಪೇನಿದೆ. ಅವರ ಆಸೆ ಅವರು ಕೇಳಿದ್ದಾರೆ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ಕೆಳಗೆ ಉಪಮುಖ್ಯಮಂತ್ರಿಯಾಗಿ, ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ.
ಯಾರು ಏನೇ ಆಸೆ ಪಟ್ಟರು ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿದೆ. ಈಗ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ನಾವು ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿ ರಾಜ್ಯ ಪ್ರಗತಿ ಸಾಧಿಸಲಿ ಎಂಬುದು ನಮ್ಮ ಆಸೆ. ನಮ್ಮ ಅಭಿಮಾನಿಗಳು ಕೇಳಿದಾಗ ಅವರ ಬಾಯಿ ಮುಚ್ಚಿಸಲು ಆಗುವುದಿಲ್ಲ ಎಂದರು.
ಕೇಂದ್ರ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದವರ ವಿರುದ್ಧ ಐಟಿ, ಇಡಿ ಸಿಬಿಐ ದಾಳಿ ಬಗ್ಗೆ ಕೇಳಿದಾಗ, ಇದು ಚುನಾವಣೆ ಸಮಯ. ಪ್ರಕೃತಿ ನಿಯಮ ಹಾಗೂ ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ.
ಡಿ.ಕೆ. ಶಿವಕುಮಾರ್, ಕೇಜ್ರಿವಾಲ್ ಪ್ರಕರಣ ಸೇರಿದಂತೆ ಏನೆಲ್ಲ ನಡೆಯುತ್ತಿದೆ ಎಂದು ಜನ ನೋಡುತ್ತಿದ್ದು, ಅವರೇ ಉತ್ತರ ನೀಡಲಿದ್ದಾರೆ ಎಂದರು.
ಇಲ್ಲಿ ಪಕ್ಷ ಸಂಘಟನೆಗೆ ಕಾರ್ಯಕರ್ತರಿಗೆ ಏನು ಸೂಚನೆ ನೀಡಿದ್ದೀರಿ ಎಂದು ಕೇಳಿದಾಗ, ಇಲ್ಲಿ ಹಿಂದುತ್ವ ಹಾಗೂ ರಾಮಮಂದಿರ, ಬಿಜೆಪಿ ಅಲೆ ಇಲ್ಲ. ಹೀಗಾಗಿ ಬಿಜೆಪಿ ಗ್ಯಾರಂಟಿ ಎಂದು ಹೇಳುವ ಬದಲು ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ ಎಂದರು.
ಬಿಜೆಪಿ ಹಿಂದುತ್ವ ಪ್ರತಿಪಾದಕರಿಗೆ ಟಿಕೆಟ್ ನೀಡದೇ ಎಲ್ಲರನ್ನು ಸಮಾನವಾಗಿ ನೋಡುವ ಸಂದೇಶ ಸಾರುತ್ತಿದ್ದಾರಾ ಎಂದು ಕೇಳಿದಾಗ, ಅವರ ಸಂದೇಶ ಏನೂ ಇಲ್ಲ, ಸಮಾನತೆಯೂ ಇಲ್ಲ. ಹೋರಾಟ ಮಾಡಿದವರಿಗೆ ವಿಶ್ರಾಂತಿ ಪಡೆಯಿರಿ ಎಂದು ಮನೆಯಲ್ಲಿ ಕೂರಿಸಿದ್ದಾರೆ ಎಂದರು.
ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಸೇರ್ಪಡೆಗೆ ವಿರೋಧವಿದೆ ಎಂಬ ಪ್ರಶ್ನೆಗೆ, ನಮ್ಮ ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಸ್ವಾಗತಿಸುತ್ತೇವೆ.
ಯಾರನ್ನೂ ವಿರೋಧ ಮಾಡುವ ಪ್ರಶ್ನೆ ಇಲ್ಲ. ಪಕ್ಷ ತೀರ್ಮಾನದ ವಿರುದ್ಧ ಆಂತರಿಕವಾಗಿ ಹಾಗೂ ಬಹಿರಂಗವಾಗಿ ವಿರೋಧಿಸುವಂತಿಲ್ಲ ಎಂದು ತಿಳಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಮ್ಮ ಚುನಾವಣಾ ಪ್ರಚಾರ ಕೂಡ ಆರಂಭಿಸುತ್ತಿದ್ದೇವೆ.
ಹೀಗಾಗಿ ಧರ್ಮಸ್ಥಳ, ಶೃಂಗೇರಿ, ಕುಕ್ಕೆ ಸುಬ್ರಮಣ್ಯ, ಕೊಲ್ಲೂರು ಮೂಕಾಂಬಿಕೆ, ಇಡಗುಂಜಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದೆ. ಬುಧವಾರ ಗೋಕರ್ಣದಲ್ಲಿ ಪೂಜೆ ಸಲ್ಲಿಸಿ ಮೈಸೂರಿಗೆ ತೆರಳುತ್ತಿದ್ದೇನೆ ಎಂದರು.
ಗೋಕರ್ಣಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ ಭೇಟಿ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಬುಧವಾರ ಬೆಳಗ್ಗೆ ಇಲ್ಲಿನ ಪುರಾಣ ಪ್ರಸಿದ್ಧ ಮಹಾಬಲೇಶ್ವರ ಮಂದಿರಕ್ಕೆ ಭೇಟಿ ನೀಡಿ ಆತ್ಮಲಿಂಗಕ್ಕೆ ಕ್ಷೀರಾಭಿಷೇಕ, ರುದ್ರಾಭಿಷೇಕ ವಿಶೇಷ ಪೂಜೆ ಸಲ್ಲಿಸಿದರು.
ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯರಾದ ವೇ. ಪರಮೇಶ್ವರ ಮಾರ್ಕಾಂಡೆ, ವೇ. ಮಹಾಬಲ ಉಪಾಧ್ಯ ಪೂಜಾ ಕೈಂಕರ್ಯ ನೆರವೇರಿಸಿದರು. ನಂತರ ಮಂದಿರದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು.
ಇದಕ್ಕೂ ಮೊದಲು ಮಹಾಗಣಪತಿ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು. ದೇವಾಲಯದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಅಂಕೋಲಾ- ಕಾರವಾರ ಕ್ಷೇತ್ರದ ಶಾಸಕ ಸತೀಶ ಸೈಲ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ ಭಾಗ್ವತ್, ಮಾಜಿ ಶಾಸಕ ಗೋಪಾಲ ಪೂಜಾರಿ, ಪಕ್ಷದ ಪ್ರಮುಖರಾದ ನಿವೇದಿತ್ ಆಳ್ವಾ, ಸ್ಥಳೀಯ ಪ್ರಮುಖರಾದ ನಾಗರಾಜ ಹಿತ್ತಲಮಕ್ಕಿ, ಮತ್ತಿತರ ಪದಾಧಿಕಾರಿಗಳು ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು ಸಂಕಲ್ಪ
ಡಿಕೆಶಿ ಮುಖ್ಯಮಂತ್ರಿಯಾಲಿ ಎಂದು ಸಂಕಲ್ಪದೊಂದಿಗೆ ಅರ್ಚಕರು ಮಂದಿರದಲ್ಲಿ ಪೂಜೆ ನೆರವೇರಿಸಿದ್ದು ವಿಶೇಷವಾಗಿತ್ತು. ಅಲ್ಲದೇ ಈ ಕೋರಿಕೆ ಬೇಗ ಈಡೇರಲಿ ಎಂದು ಪರಶಿವನಲ್ಲಿ ಅವರ ಅಭಿಮಾನಿಗಳು ಪ್ರಾರ್ಥಿಸಿದರು.