ಅರಸೀಕೆರೆ: ರಾಜ್ಯ ಸಚಿವ ಸಂಪುಟದಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ಲಭಿಸಿರುವ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ನಗರ ಸಂಭ್ರಮದ ವಾತಾವರಣಕ್ಕೆ ಸಾಕ್ಷಿಯಾಯಿತು. ನಗರದ ಪಿ.ಪಿ. ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನೂರಾರು ಅಭಿಮಾನಿಗಳು ಜಮಾಯಿಸಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.

ತಾಲೂಕಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನ ದೊರೆತಿರುವುದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದ್ದು, ಕೆ.ಎಂ. ಶಿವಲಿಂಗೇಗೌಡರಿಗೆ ಅಭಿನಂದನೆ, ಅಭಿವೃದ್ಧಿಯ ಹರಿಕಾರರಿಗೆ ಸಚಿವ ಸ್ಥಾನ ಎಂಬ ಘೋಷಣೆಗಳು ಮೊಳಗಿದವು. ಪಕ್ಷದ ಧ್ವಜಗಳನ್ನು ಹಾರಿಸುತ್ತಾ ಪರಸ್ಪರ ಸಿಹಿ ತಿನ್ನಿಸಿ ಶುಭಾಶಯ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಹಾಸನ ಜಿಲ್ಲಾ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ವೆಂಕಟೇಶ್ ಚಲವಾದಿ ತಾಲೂಕಿನ ಎಲ್ಲಾ ವರ್ಗದ ಜನತೆ, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗಗಳು ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮಕ್ಕೆ ಇಂದು ಫಲ ಸಿಕ್ಕಿದೆ. ಕೆ.ಎಂ. ಶಿವಲಿಂಗೇಗೌಡರು ಅಭಿವೃದ್ಧಿಗೆ ಮತ್ತೊಂದು ಹೆಸರಾಗಿದ್ದು, ಕುಡಿಯುವ ನೀರು, ರಸ್ತೆ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಈಗ ಸಚಿವರಾಗಿ ರಾಜ್ಯ ಮಟ್ಟದಲ್ಲೂ ಜನಪರ ಆಡಳಿತ ನೀಡುವ ಮೂಲಕ ಜಿಲ್ಲೆಯ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.ಮುಂದಿನ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ವೇಗ ಸಿಗಲಿದ್ದು, ಪಕ್ಷದ ಸಂಘಟನೆಗೂ ಸಚಿವರ ನೇತೃತ್ವದಲ್ಲಿ ಹೊಸ ಬಲ ದೊರೆಯಲಿದೆ ಎಂದು ಅಭಿಪ್ರಾಯಪಟ್ಟರು. ಮುಂಬರುವ ಚುನಾವಣೆಗಳಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಂಘಟಿತವಾಗಿ ಕೆಲಸ ಮಾಡುವ ಸಂಕಲ್ಪವನ್ನು ಕಾರ್ಯಕರ್ತರು ವ್ಯಕ್ತಪಡಿಸಿದರು.ಸಂಭ್ರಮಾಚರಣೆಯಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಬಾಲಮುರುಗನ್, ಗುತ್ತಿಗೆದಾರ ಹರೀಶ್, ರಕ್ಷಾ ಸಮಿತಿ ಸದಸ್ಯ ಮಂಜುನಾಥ್, ಹೇಮಂತ್ ಕುಮಾರ್, ವಿಭವ್ , ಯುವ ಕಾಂಗ್ರೆಸ್ ಉಪಾಧ್ಯಕ್ಷ ಪೃಥ್ವಿ ನಾಯಕ್, ಯುವ ವಕೀಲ ಪರಮೇಶ್, ದೇವರಾಜ್, ಚಿಕ್ಕೂರು ಮಂಜು, ಮೆಸ್ ಮಧು ಸೇರಿದಂತೆ ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಅರಸೀಕೆರೆಯಾದ್ಯಂತ ಸಚಿವ ಸ್ಥಾನ ಲಭಿಸಿರುವ ಹಿನ್ನೆಲೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ತಾಲೂಕಿನ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ ಎಂಬ ಆಶಾಭಾವನೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.