ಸೋಮವಾರಪೇಟೆ: ನಮ್ಮ ಪೂರ್ವಜರು ತ್ಯಾಗ, ಪ್ರಾಮಾಣಿಕತೆಯಿಂದ ನೀಡಿದ ಕೊಡುಗೆಯನ್ನು ಪ್ರತಿಯೊಬ್ಬ ಭಾರತೀಯನು ಅರ್ಥೈಸಿಕೊಂಡು ಮುಂದಿನ ಪೀಳಿಗೆಗೆ ಭವ್ಯ ಭಾರತದ ಕೊಡುಗೆ ನೀಡಬೇಕಾಗಿದೆ ಎಂದು ತಹಸೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಹೇಳಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತ ವತಿಯಿಂದ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರೋತ್ಸವ ಸಂದೇಶವನ್ನು ನೀಡಿದರು.

ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಶನಿವಾರಸಂತೆ ಸುಪ್ರಜಾ ಗುರುಕುಲ ವಿದ್ಯಾಸಂಸ್ಥೆ ಪ್ರಾಂಶುಪಾಲರಾದ ಡಿ. ಸುಜಲಾದೇವಿ ಮಾತನಾಡಿ, ಇಂದು ನಮಗೆ ಸಮಾನತೆಯ ಭಾರತ ಬೇಕಾಗಿದೆ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ. ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯದ ಹಿಂದೆ ಹಿಂಸೆ, ತ್ಯಾಗ, ಬಲಿದಾನ, ನೋವು, ಹೋರಾಟ, ಪರಿಶ್ರಮದ ಪ್ರಯತ್ನ ಇದೆ. ಇಂದಿನ ಯುವ ಜನಾಂಗ ಇದನ್ನು ಮರೆಯಬಾರದು. ಭಾರತೀಯ ಸಂವಿಧಾನ ನಮಗೆ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಎಲ್ಲರೂ ಪಾಲಿಸಿದರೆ ಮಾತ್ರ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ ಎಂದರು.ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ. ಕಾಂತರಾಜು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸೋಮವಾರಪೇಟೆ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎ. ಆದಂ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ರಾಷ್ಟ್ರಿಯ ಹಬ್ಬಗಳ ಸಮಿತಿ ಸದಸ್ಯರಾದ ಜಾನಕಿ ವೆಂಕಟೇಶ್, ಭುವನೇಶ್, ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.ಮಾಜಿ ಸೈನಿಕರು, ಅಂತಾರಾಷ್ಟ್ರೀಯ ಮಿಕ್ಸ್ ಬಾಕ್ಸಿಂಗ್‌ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ವಿಜೇತರಾದ ತಾಲ್ಲೂಕಿನ ವಿವಿಧ ಶಾಲೆಯ ವಿದ್ಯಾರ್ಥಿಗಳು, ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಪ್ರಶಸ್ತಿ ಪಡೆದ ವಿವಿಧ ಇಲಾಖೆಗಳ ಸಿಬ್ಬಂದಿಗಳು, ಎಸ್‌ಐಆರ್ ಪ್ರಕ್ರಿಯೆಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಇಲಾಖಾ ನೌಕರರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗಾಯನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.