ಮಂಗಳೂರಿನಿಂದ ಹಾಸನಕ್ಕೆ ಬರುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕರೊಬ್ಬರಿಗೆ ಹಠಾತ್ ಹೃದಯಾಘಾತ ಸಂಭವಿಸಿದ ವೇಳೆ ಚಾಲಕ ಹಾಗೂ ನಿರ್ವಾಹಕರ ಸಮಯಪ್ರಜ್ಞೆ, ಆಟೋ ಚಾಲಕರ ಸಹಕಾರ ಮತ್ತು ಹಿಮ್ಸ್ ಆಸ್ಪತ್ರೆ ಸಿಬ್ಬಂದಿಯ ತುರ್ತು ಸ್ಪಂದನೆಯಿಂದ ವ್ಯಕ್ತಿಯೊಬ್ಬರ ಪ್ರಾಣ ಉಳಿದ ಘಟನೆ ಗುರುವಾರ ನಡೆದಿದೆ. ಆಸ್ಪತ್ರೆಗೆ ತಲುಪಿದ ಬಳಿಕ ಹಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಕೂಡಲೇ ತುರ್ತು ಚಿಕಿತ್ಸೆಗೆ ಮುಂದಾಗಿ ಅಗತ್ಯ ವೈದ್ಯಕೀಯ ನೆರವು ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ಮಂಗಳೂರಿನಿಂದ ಹಾಸನಕ್ಕೆ ಬರುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕರೊಬ್ಬರಿಗೆ ಹಠಾತ್ ಹೃದಯಾಘಾತ ಸಂಭವಿಸಿದ ವೇಳೆ ಚಾಲಕ ಹಾಗೂ ನಿರ್ವಾಹಕರ ಸಮಯಪ್ರಜ್ಞೆ, ಆಟೋ ಚಾಲಕರ ಸಹಕಾರ ಮತ್ತು ಹಿಮ್ಸ್ ಆಸ್ಪತ್ರೆ ಸಿಬ್ಬಂದಿಯ ತುರ್ತು ಸ್ಪಂದನೆಯಿಂದ ವ್ಯಕ್ತಿಯೊಬ್ಬರ ಪ್ರಾಣ ಉಳಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಮಂಗಳೂರಿನಿಂದ ಹಾಸನದತ್ತ ಬರುತ್ತಿದ್ದ ಬಸ್‌ನಲ್ಲಿ ಮಧ್ಯಾಹ್ನ ೧೨ರ ಸುಮಾರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿ ಅಸ್ವಸ್ಥರಾಗಿದ್ದಾರೆ. ಇದನ್ನು ಗಮನಿಸಿದ ಬಸ್ ಚಾಲಕ ಹಾಗೂ ನಿರ್ವಾಹಕರು ತಕ್ಷಣ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಬಸ್‌ನ್ನು ಹಾಸನದ ಹಿಮ್ಸ್ ಆಸ್ಪತ್ರೆ ಕಡೆಗೆ ಕೊಂಡೊಯ್ಯಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಸಿಂಹಾಸನಪುರಿ ಆಟೋ ರಿಕ್ಷಾ ಸಂಘದ ಉಪಾಧ್ಯಕ್ಷ ಆನಂದ್ ಹಾಗೂ ಆಟೋ ನಿಲ್ದಾಣದ ಆಟೋ ಮಿತ್ರರು ಸಹ ಬಸ್‌ನಲ್ಲಿದ್ದ ಅಸ್ವಸ್ಥ ವ್ಯಕ್ತಿಗೆ ನೆರವಾಗಿದ್ದಾರೆ. ಆಸ್ಪತ್ರೆಗೆ ತಲುಪಿದ ಬಳಿಕ ಹಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಕೂಡಲೇ ತುರ್ತು ಚಿಕಿತ್ಸೆಗೆ ಮುಂದಾಗಿ ಅಗತ್ಯ ವೈದ್ಯಕೀಯ ನೆರವು ನೀಡಿದ್ದಾರೆ.ಚಾಲಕ ಮತ್ತು ನಿರ್ವಾಹಕರ ಸಮಯಪ್ರಜ್ಞೆ, ಆಟೋ ಚಾಲಕರ ಮಾನವೀಯ ನೆರವು ಹಾಗೂ ಆಸ್ಪತ್ರೆ ಸಿಬ್ಬಂದಿಯ ತ್ವರಿತ ಸ್ಪಂದನೆಯಿಂದ ವ್ಯಕ್ತಿಯನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ಸಾಧ್ಯವಾಯಿತು. ಸಾರ್ವಜನಿಕರ ಸಹಕಾರದಿಂದ ಅಮೂಲ್ಯ ಜೀವವೊಂದು ಉಳಿದಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. ತುರ್ತು ಸಂದರ್ಭದಲ್ಲಿ ಸಮಯ ವ್ಯರ್ಥ ಮಾಡದೆ ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಚಾಲಕ, ನಿರ್ವಾಹಕರು ಹಾಗೂ ಆಟೋ ಚಾಲಕರು ತೋರಿದ ಮಾನವೀಯತೆ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ.