ರೈತರಿಗೆ ಶೀಘ್ರ ಭೂ ಪರಿಹಾರ ಪಾವತಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

| Published : May 03 2024, 01:06 AM IST

ರೈತರಿಗೆ ಶೀಘ್ರ ಭೂ ಪರಿಹಾರ ಪಾವತಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ-206, ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ, ಹೇಮಾವತಿ ನಾಲೆ, ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಅಭಿವೃದ್ಧಿ, ಕೈಗಾರಿಕಾ ಪ್ರದೇಶಾಭಿವೃದ್ಧಿ ಯೋಜನೆಗಳಿಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಯ ಮಾಲೀಕರಿಗೆ ಶೀಘ್ರ ಪರಿಹಾರವನ್ನು ಪಾವತಿಸಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ-206, ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ, ಹೇಮಾವತಿ ನಾಲೆ, ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಅಭಿವೃದ್ಧಿ, ಕೈಗಾರಿಕಾ ಪ್ರದೇಶಾಭಿವೃದ್ಧಿ ಯೋಜನೆಗಳಿಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಯ ಮಾಲೀಕರಿಗೆ ಶೀಘ್ರ ಪರಿಹಾರವನ್ನು ಪಾವತಿಸಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಭೂ-ಪರಿಹಾರ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ-206 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ 52 ಕಿ.ಮೀ. ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುವುದರಿಂದ ಬಾಕಿ ಇರುವ ಪರಿಹಾರ ಮೊತ್ತವನ್ನು ಕೂಡಲೇ ಸಂಬಂಧಿತ ಭೂ ಮಾಲೀಕರಿಗೆ ಪಾವತಿಸಬೇಕು ಎಂದರು.

ವಿಶೇಷ ಭೂಸ್ವಾಧೀನಾಧಿಕಾರಿ ಎಸ್.ಎ. ಜಗದೀಶ್ ಪ್ರತಿಕ್ರಿಯಿಸಿ, ಗುಬ್ಬಿ ತಾಲೂಕು ಹಿಂಡಿಗನಹಳ್ಳಿ ಹಾಗೂ ತಿಪಟೂರು ತಾಲೂಕು ಬಿಳಿಗೆರೆ ಗ್ರಾಮದ ರೈತರಿಗೆ ಪರಿಹಾರ ನೀಡಲು ಬಾಕಿ ಇದೆ. ಕಳೆದ ಸಭೆಯಲ್ಲಿ ಸೂಚನೆ ನೀಡಿದಂತೆ 1.47 ಕೋಟಿ ರು. ಭೂ-ಪರಿಹಾರವನ್ನು ಈಗಾಗಲೇ ರೈತರಿಗೆ ಪಾವತಿಸಲಾಗಿದೆ. ಶೀಘ್ರದಲ್ಲೇ ಉಳಿದ ಪರಿಹಾರ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಎತ್ತಿನ ಹೊಳೆ ಯೋಜನೆಗೆ ಸಂಬಂಧಿಸಿದಂತೆ ಪ್ರತಿ ವಾರ 10 ಕೋಟಿ ರು. ಭೂ-ಪರಿಹಾರ ವಿತರಿಸಲು ಗುರಿ ನೀಡಲಾಗಿದ್ದು, ಆದರೆ ಕಳೆದೆರಡು ವಾರದ ಅವಧಿಯಲ್ಲಿ ನ್ಯಾಯಾಲಯಕ್ಕೆ ಠೇವಣಿ ಇಟ್ಟಿರುವ ಮೊತ್ತ ಸೇರಿ ಒಟ್ಟು 15.40 ಕೋಟಿ ರು. ಮಾತ್ರ ರೈತರಿಗೆ ಪರಿಹಾರ ವಿತರಿಸಲಾಗಿದೆ. ಭೂ-ಪರಿಹಾರ ಪಾವತಿಯನ್ನು ಇನ್ನಷ್ಟು ಚುರುಕುಗೊಳಿಸುವುದರೊಂದಿಗೆ ಬಾಕಿ ಇರುವ ಕಡತಗಳನ್ನು ಬೇಗ ವಿಲೇವಾರಿ ಮಾಡಲು ಕ್ರಮಕೈಗೊಳ್ಳಬೇಕು. ಎತ್ತಿನ ಹೊಳೆ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಜಮೀನಿನ ರೈತರಿಗೆ ಭೂ ಪರಿಹಾರ ನೀಡಲು ಸರ್ಕಾರದಿಂದ 200 ಕೋಟಿ ರು. ಬಿಡುಗಡೆಯಾಗಿದ್ದು, ಕೂಡಲೇ ಅವಾರ್ಡ್ ಮಾಡಿ ರೈತರಿಗೆ ಪರಿಹಾರವನ್ನು ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಗುಬ್ಬಿ ತಾಲೂಕಿನ ಹರೇನಹಳ್ಳಿ ಹಾಗೂ ತಿಪಟೂರು ತಾಲೂಕಿನ ಕರಡಿ ನ್ಯಾಕೇನಹಳ್ಳಿ, ಬೊಮ್ಮಲಾಪುರ, ಚಿಕ್ಕನಾಯಕನಹಳ್ಳಿಯ ಗ್ಯಾರೇಹಳ್ಳಿ, ಮಲಗೊಂಡನಹಳ್ಳಿ, ತುಮಕೂರು ತಾಲೂಕಿನ ಗಂಗನಾಳ ಹಾಗೂ ಬೊಮ್ಮನಹಳ್ಳಿ ರೈತರಿಂದ ಅಗತ್ಯ ದಾಖಲೆಗಳನ್ನು ಪಡೆದು ಪರಿಹಾರ ವಿತರಿಸಬೇಕೆಂದು ಸೂಚಿಸಿದರು.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ವಸಂತ ನರಸಾಪುರದಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ 5 ನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ವಿಶೇಷ ಭೂಸ್ವಾಧೀನಾಧಿಕಾರಿ ಸೋಮಪ್ಪ ಕಡಕೋಳಗೆ ನಿರ್ದೇಶನ ನೀಡಿದರು.ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮೌಲ್ಯ ಮಾಪನಕ್ಕಾಗಿ ವಿವಿಧ ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿರುವ ಮರ-ಮುಲ್ಕಿ, ಕಟ್ಟಡಗಳ ಮಾಹಿತಿಯನ್ನು ಅರಣ್ಯ, ತೋಟಗಾರಿಕೆ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗ, ಲೋಕೋಪಯೋಗಿ ಇಲಾಖೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಮೌಲ್ಯ ಮಾಪನ ಮಾಡಿ ವರದಿ ನೀಡಬೇಕೆಂದು ಸೂಚನೆ ನೀಡಿದರು. ಕರ್ನಾಟಕ ಕೈಗಾರಿಕಾ ಪ್ರದೇಶಭಿವೃದ್ಧಿ ಮಂಡಳಿ(ಕೆಐಎಡಿಬಿ) ಕೈಗೆತ್ತಿಕೊಂಡಿರುವ ಚೆನ್ನೈ-ಬೆಂಗಳೂರು ಕಾರಿಡಾರ್ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ಪ್ರಕರಣಗಳು ನ್ಯಾಯಾಲಯದಲ್ಲಿದ್ದರೆ ರೈತರೊಂದಿಗೆ ಸಮಾಲೋಚಿಸಿ, ಯೋಜನೆ ಅಭಿವೃದ್ಧಿಗೆ ಸಹಕರಿಸಬೇಕೆಂದು ಹೇಳಿದರು.ಕೊಳಗೇರಿ ನಿವಾಸಿಗಳಿಗಾಗಿ ನಗರದ ದಿಬ್ಬೂರಿನಲ್ಲಿ ನಿರ್ಮಿಸಿರುವ 1200 ಮನೆಗಳ ಪೈಕಿ 500 ಫಲಾನುಭವಿಗಳಿಗೆ ಮಾತ್ರ ಹಂಚಿಕೆ ಪತ್ರ ನೀಡಲಾಗಿದೆ. ಉಳಿದ 700 ಫಲಾನುಭವಿಗಳಿಗೆ ಹಂಚಿಕೆ ಪತ್ರವನ್ನು ಆದಷ್ಟು ಬೇಗ ನೀಡಬೇಕೆಂದು ಕೊಳಚೆ ಅಭಿವೃದ್ಧಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿವೇಕಾನಂದ ವಾರ್‌ಕರ್‌ಗೆ ನಿರ್ದೇಶಿಸಿದರು.ವಿವೇಕಾನಂದ ವಾರ್‌ಕರ್ ಪ್ರತಿಕ್ರಿಯಿಸಿ, ಪಾಲಿಕೆ ವ್ಯಾಪ್ತಿಯಲ್ಲಿರುವ ಮರಳೇನಹಳ್ಳಿಯಲ್ಲಿ ಕೊಳಗೇರಿ ನಿವಾಸಿಗಳಿಗಾಗಿ ವಸತಿ ನಿರ್ಮಾಣ ಮಾಡಲು ಸುಮಾರು 2.10 ಎಕರೆ ಜಮೀನು ಗುರುತಿಸಲಾಗಿದೆ. ಜಮೀನು ಒತ್ತುವರಿಯಾಗಿರುವುದರಿಂದ ವಸತಿ ನಿರ್ಮಾಣಕ್ಕೆ ಅಡ್ಡಿಯುಂಟಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಒತ್ತುವರಿ ತೆರವಿಗೆ ಕೂಡಲೇ ಕ್ರಮಕೈಗೊಳ್ಳಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜಗೆ ದೂರವಾಣಿ ಕರೆ ಮೂಲಕ ಸೂಚಿಸಿದರು. ಹೇಮಾವತಿ ನಾಲೆ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡ ಜಮೀನಿನ ಸರ್ವೆ ನಂಬರ್‌ಗಳನ್ನು ಆರ್‌ಟಿಸಿ(ಪಹಣಿ)ಯಲ್ಲಿ ಕಾವೇರಿ ನೀರಾವರಿ ನಿಗಮದ ಹೆಸರಿಗೆ ಬರುವಂತೆ ಇಂದೀಕರಣ ಮಾಡಲು ಕ್ರಮವಹಿಸಬೇಕು. ರೈತರಿಗೆ ಸಕಾಲದಲ್ಲಿ ಪರಿಹಾರ ವಿತರಣೆ ಮಾಡಿದಲ್ಲಿ ಯೋಜನೆ ಪೂರ್ಣಗೊಳಿಸಲು ಯಾವುದೇ ತೊಂದರೆ ಉಂಟಾಗದು ಎಂದು ಸಲಹೆ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪವಿಭಾಗಾಧಿಕಾರಿ ಗೌರವ ಕುಮಾರ್ ಶೆಟ್ಟಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಾರದಮ್ಮ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ರವೀಶ್, ಕೆಐಎಡಿಬಿ ಕಾರ್ಯನಿರ್ವಾಹಕ ಇಂಜಿನಿಯರ್ ಲಕ್ಷ್ಮೀಶ್ ಸೇರಿದಂತೆ ಅರಣ್ಯ, ಮತ್ತಿತರ ಇಲಾಖಾಧಿಕಾರಿಗಳು ಹಾಜರಿದ್ದರು.