ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ಗ್ರಾಮ ಪಂಚಾಯಿತಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 21ರಿಂದ ರಾಜ್ಯವ್ಯಾಪಿ ಕೈಗೊಂಡಿರುವ ಅನಿರ್ದಿಷ್ಟಾವಧಿ ಅಸಹಕಾರ ಚಳುವಳಿಯ ಭಾಗವಾಗಿ, ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (ಸಿಇಒ) ಮನವಿ ಸಲ್ಲಿಸಲಾಯಿತು.

ನಾಪೋಕ್ಲು : ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ಗ್ರಾಮ ಪಂಚಾಯಿತಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 21ರಿಂದ ರಾಜ್ಯವ್ಯಾಪಿ ಕೈಗೊಂಡಿರುವ ಅನಿರ್ದಿಷ್ಟಾವಧಿ ಅಸಹಕಾರ ಚಳುವಳಿಯ ಭಾಗವಾಗಿ, ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (ಸಿಇಒ) ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಕೆ.ಎಂ. ಚಂದ್ರಮೌಳಿ ಅವರು, ಪಿಡಿಒಗಳ ಸೇವಾ ವಿಷಯಗಳು ಹಾಗೂ ಗ್ರಾಮ ಪಂಚಾಯಿತಿಗಳ ಆಡಳಿತಾತ್ಮಕ ಮತ್ತು ಆರ್ಥಿಕ ಸಮಸ್ಯೆಗಳ ಕುರಿತು ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಸಮರ್ಪಕ ಪರಿಹಾರ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅನಿರ್ದಿಷ್ಟಾವಧಿ ಹೋರಾಟ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಪ್ರಮುಖ ಬೇಡಿಕೆಗಳು: ರಾಜ್ಯದ ಎಲ್ಲ ಪಿಡಿಒ ಹುದ್ದೆಗಳನ್ನು ಏಕಕಾಲದಲ್ಲಿ ಗ್ರೂಪ್‌-ಬಿ ಹುದ್ದೆಗಳಾಗಿ ಉನ್ನತೀಕರಿಸುವುದು. ಜೇಷ್ಠತಾ ಪಟ್ಟಿಯಲ್ಲಿರುವ ಗೊಂದಲ ನಿವಾರಿಸಿ ಅರ್ಹ ಅಧಿಕಾರಿಗಳಿಗೆ ಶೀಘ್ರ ಮುಂಬಡ್ತಿ ನೀಡುವುದು. ಗ್ರಾಮ ಪಂಚಾಯಿತಿಗಳಿಗೆ ಬಾಕಿ ಇರುವ 15ನೇ ಹಣಕಾಸು ಆಯೋಗದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವುದು. ಕುಡಿಯುವ ನೀರು ಮತ್ತು ನೈರ್ಮಲ್ಯ ಸೇವೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡುವುದು. ವಿ.ಬಿ.ಜಿ. ರಾಮ್‌ ಜಿ ಯೋಜನೆಯನ್ನು ಒತ್ತಾಯಪೂರ್ವಕವಾಗಿ ಅನುಷ್ಠಾನಗೊಳಿಸುವುದನ್ನು ತಡೆದು ಮಾರ್ಗಸೂಚಿ ರೂಪಿಸುವುದು ಬಗ್ಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳಾದ ತಿಮ್ಮಯ್ಯ ಕೆ.ಎಂ. (ಖಜಾಂಚಿ), ನಂಜುಂಡಸ್ವಾಮಿ ಡಿ. (ರಾಜ್ಯ ಪರಿಷತ್ ಸದಸ್ಯರು), ಹರೀಶ್ ಹೆಚ್.ಡಿ. (ಗೌರವಾಧ್ಯಕ್ಷರು), ಆಶಾ ಕುಮಾರಿ ಬಿ.ಆರ್. (ಮಹಿಳಾ ಉಪಾಧ್ಯಕ್ಷರು), ಬಿ.ಸಿ. ನಂದೀಶ್ ಕುಮಾರ್ (ಸಂಘಟನಾ ಕಾರ್ಯದರ್ಶಿ), ವಿ.ಜಿ. ಲೋಕೇಶ್ (ಕ್ರೀಡಾ ಕಾರ್ಯದರ್ಶಿ) ಹಾಗೂ ಶೋಭಾ ರಾಣಿ ಪಿ.ಎಲ್. (ಸಾಂಸ್ಕೃತಿಕ ಕಾರ್ಯದರ್ಶಿ) ಉಪಸ್ಥಿತರಿದ್ದರು.