ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಪ್ರತಿಯೊಬ್ಬರು ಓದಿ ಅರ್ಥ ಮಾಡಿಕೊಂಡರೇ ಆದರ್ಶ ವ್ಯಕ್ತಿಗಳಾಗಿ ಬದುಕಬಹುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.ಪಟ್ಟಣದ ಭಕ್ತ ಕನಕದಾಸ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ನಡೆದ ಗಣರಾಜ್ಯೋತ್ಸವದಲ್ಲಿ ಮಾತನಾಡಿ, ಸಂವಿಧಾನದಡಿಯಲ್ಲಿ ನಾವೆಲ್ಲರೂ ಸಾಗಬೇಕಿದೆ. ಆದರೆ, ಕೆಲವರಿಗೆ ಅದರ ಅರಿವಿಲ್ಲದೆ ವರ್ತಿಸುತ್ತಾರೆ. ಸಂವಿಧಾನದ ಅರಿವು ಬರಬೇಕೆಂಬ ಉದ್ದೇಶದಿಂದ ಶಾಲಾ ಕಾಲೇಜು ಹಾಗೂ ಕಾರ್ಯಕ್ರಮಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.
ವಿವಿಧತೆಯಲ್ಲಿ ಏಕತೆ ಒಳಗೊಂಡು ಎಲ್ಲರೂ ಒಗ್ಗಟ್ಟಿನಿಂದ ನಡೆದುಕೊಳ್ಳುವುದರ ಮೂಲಕ ರಾಷ್ಟ್ರಕ್ಕೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ. ದೇಶದ ಸೈನಿಕರು ಹಾಗೂ ರೈತರ ಸೇವೆ ಸ್ಮರಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂವಿಧಾನದಡಿಯಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ನಮ್ಮ ಇತಿಹಾಸವನ್ನು ನೆನಪು ಮಾಡಿಕೊಳ್ಳಲಿಲ್ಲ ಎಂದರೆ ಕಷ್ಟಕರವಾಗುತ್ತದೆ ಎಂದರು.ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲಾಗುತ್ತಿದೆ. ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಒತ್ತು ನೀಡಲಾಗಿದೆ. ಪಟ್ಟಣದಲ್ಲಿ ಹೊಸ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಹಲಗೂರು ಸಮುದಾಯ ಆರೋಗ್ಯ ಕೇಂದ್ರದ ಜಾಗದ ಸಮಸ್ಯೆ ಬಗೆಹರಿಯುವಿಕೆ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ ಎಂದರು.
ನಾಲಾ ಆಧುನೀಕರಣ, ಸೇರಿದಂತೆ ತಾಲೂಕಿನ ರಸ್ತೆಗಳ ಅಭಿವೃದ್ಧಿಯ ಜೊತೆಗೆ ಮುಂದಿನ ತಿಂಗಳು ಬರುವ ಮಳವಳ್ಳಿಯ ಸಿಡಿ ಹಬ್ಬಕ್ಕೆ ಬೇಕಾದ ಎಲ್ಲ ಸೌಲಭ್ಯ ಕಲ್ಪಿಸಲು ಆಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.ತಹಸೀಲ್ದಾರ್ ಎಸ್.ವಿ.ಲೋಕೇಶ್ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಸಂವಿಧಾನದ ಜಾರಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಶ್ರಮ ಅಪಾರವಾಗಿದೆ. ಕಂದಾಯ ಇಲಾಖೆಯಲ್ಲಿ ರೈತ ಸ್ನೇಹಿ ಆಡಳಿತ ನೀಡಲು ತಾಲೂಕು ಆಡಳಿತ ದಾಖಲೆಗಳ ಡಿಜಿಟಲೀಕರಣದಲ್ಲಿ ತೊಡಗಿದೆ. ಸರ್ಕಾರ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಮಾಡಲಾಗುತ್ತಿದೆ ಎಂದರು.
ಇದೇ ವೇಳೆ ತಾಲೂಕಿನ ವಿವಿಧ ಶಾಲೆಯ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪೊಲೀಸ್ ಇಲಾಖೆ ಮತ್ತು ವಿದ್ಯಾರ್ಥಿಗಳ ಪಥಸಂಚಲನ ಗಮನ ಸೆಳೆಯಿತು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂವಿಧಾನ ಪೀಠಿಕೆ ಗೀತೆಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು. ವಕೀಲ ಜಗದೀಶ್ ಅವರು 5 ಸಾವಿರ ರು. ನಗದು ಬಹುಮಾನ ನೀಡಿದರು.ಕಾರ್ಯಕ್ರಮಕ್ಕೂ ಮುನ್ನ ಶಾಸಕರು ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಡಿವೈಎಸ್ಪಿ ವಿ.ಕೃಷ್ಣಪ್ಪ, ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ತಾಲೂಕು ಅಧ್ಯಕ್ಷ ಪಿ.ಮಾದೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎನ್.ಕೃಷ್ಣ, ಸದಸ್ಯರಾದ ಎಂ.ಎನ್. ಶಿವಸ್ವಾಮಿ, ನೂರುಲ್ಲಾ, ಪ್ರಮೀಳಾ, ಅತೀಯಾ ಬೇಗಂ, ಸವಿತಾ, ಎಂ.ಡಿ.ಸಂತೋಷ್ ಕುಮಾರ್, ಮಾರೇಹಳ್ಳಿ ಬಸವರಾಜು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಸಿ.ಮಾಧು, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್ ಭಾಗಿಯಾಗಿದ್ದರು.