ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಜೊತೆಗೆ ಇನ್ನೂ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆ ಮೂಲಕ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಜನಪರ ಆಡಳಿತ ನೀಡುತ್ತಿದ್ದಾರೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.
- ಸಂತೆಬೆನ್ನೂರಲ್ಲಿ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಶಾಸಕ ಶಿವಗಂಗಾ
- - -ಕನ್ನಡಪ್ರಭ ವಾರ್ತೆ ಚನ್ನಗಿರಿ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಜೊತೆಗೆ ಇನ್ನೂ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆ ಮೂಲಕ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಜನಪರ ಆಡಳಿತ ನೀಡುತ್ತಿದ್ದಾರೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.ಶನಿವಾರ ತಾಲೂಕಿನ ಸಂತೆಬೆನ್ನೂರು ಗ್ರಾಮದ ಕೆ.ಪಿ.ಎಸ್. ಶಾಲೆ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಏರ್ಪಡಿಸಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ " ಎಂಬ ಘೋಷಣೆಯ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮಾಂತರ ಪ್ರದೇಶದ ಜನರ ಬಾಗಿಲಿಗೆ ಸರ್ಕಾರದ ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ಸರ್ಕಾರದ 32 ಇಲಾಖೆಗಳ ಅಧಿಕಾರಿಗಳು ಗ್ರಾಮಗಳಿಗೆ ಬಂದಿದ್ದಾರೆ. ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ₹750 ಕೋಟಿಗಳನ್ನು ಇಲ್ಲಿಯವರೆಗೆ ನೀಡಲಾಗಿದೆ ಎಂದರು.
ಬಗರ್ಹುಕುಂ ಸಾಗುವಳಿ ಮಾಡಿದ ರೈತರು ಸಲ್ಲಿಸಿದ ಅರ್ಜಿಗಳ ಪರಿಶೀಲನೆ ನಡೆದಿದ್ದು, ಹಕ್ಕುಪತ್ರಗಳನ್ನು ಶೀಘ್ರದಲ್ಲಿಯೇ ನೀಡಲಾಗುವುದು. ಇಂತಹ ಜನಪ್ರಿಯ ಕಾರ್ಯಕ್ರಮವನ್ನು ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ನಡೆಸಲಾಗುವುದು. ತಾಲೂಕಿನ ಆಡಳಿತದಲ್ಲಿ ಪಾರದರ್ಶಕತೆ ತರಲು ಈಗಾಗಲೇ ಕಟ್ಟುನಿಟ್ಟಿನ ಆದೇಶಗಳನ್ನು ಮಾಡಲಾಗಿದೆ. ಈ ವ್ಯಾಪ್ತಿಯ 8 ಗ್ರಾಮಗಳಲ್ಲಿ 24 ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರತ್ ಜೋಡೋ ಯೋಜನೆಯಡಿ ಯುವಕ ಸಂಘಗಳನ್ನು ಸ್ಥಾಪಿಸಿ ಪ್ರತಿ ಸಂಘಗಳಿಗೆ ₹10 ಲಕ್ಷ ನೀಡಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಸಹಕಾರಿಯಾಗಲು ಸಂಘಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಹಿರೇಕೋಗಲೂರು ಗ್ರಾಮದ ಬಡ ಕುಟುಂಬಕ್ಕೆ 96, ಚಿಕ್ಕಬೆನ್ನೂರು ಗ್ರಾಮದ 85 ಜನರಿಗೆ ನಿವೇಶನದ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಯಿತು. ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಸೌಲಭ್ಯಗಳನ್ನು ಪಡೆಯಲು ₹32 ಸಾವಿರಕ್ಕೆ ಇದ್ದ ಆದಾಯವನ್ನು ನಮ್ಮ ಸರ್ಕಾರ ₹1.20 ಲಕ್ಷಗಳಿಗೆ ಹೆಚ್ಚಿಸಿ ಪಿಂಚಣಿ ನೀಡಲಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ 32 ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ತಹಸೀಲ್ದಾರ್ ಎನ್.ಜೆ. ನಾಗರಾಜ್, ಡಿವೈಎಸ್ಪಿ ರುದ್ರಪ್ಪ ಉಜ್ಜನಕೊಪ್ಪ, ತಾಪಂ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್, ಬೆಸ್ಕಾಂ ಅಭಿಯಂತರ ವಿರೂಪಾಕ್ಷಪ್ಪ, ವಿಸ್ತರಣಾಧಿಕಾರಿ ಶಾಂತಕುಮಾರ್, ಸಿಡಿಪಿಒ ನಿರ್ಮಲಾ, ಕೆ.ಎಸ್.ಆರ್.ಟಿ.ಸಿ. ಅಧಿಕಾರಿ ಸಿದ್ದೇಶ್ ಹಾಜರಿದ್ದರು.
- - --5ಕೆಸಿಎನ್ಜಿ2: ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಶಾಸಕ ಬಸವರಾಜು ವಿ.ಶಿವಗಂಗಾ ಉದ್ಘಾಟಿಸಿದರು.